ಕರ್ನಾಟಕದತ್ತ ಚಿತ್ತ ಹರಿಸಿದ ಬಿಜೆಪಿ ಹೈಕಮಾಂಡ್​, ಓಬಿಸಿ ನಾಯಕರ ಜತೆ ಚರ್ಚೆ ನಡೆಸಿದ್ದೇನು?

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್ , ಇದೀಗ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಓಬಿಸಿ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದತ್ತ ಚಿತ್ತ ಹರಿಸಿದ ಬಿಜೆಪಿ ಹೈಕಮಾಂಡ್​, ಓಬಿಸಿ ನಾಯಕರ ಜತೆ ಚರ್ಚೆ ನಡೆಸಿದ್ದೇನು?
ಬಿಜೆಪಿ
Edited By:

Updated on: Nov 03, 2023 | 8:01 AM

ನವದೆಹಲಿ, (ನವೆಂಬರ್ 03): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಹೀನಾಯ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್ (BJP High command) 5 ತಿಂಗಳ ನಂತರ ರಾಜ್ಯದತ್ತ ಚಿತ್ತ ಹರಿಸಿದೆ. ವಿಪಕ್ಷ ನಾಯಕನ ಆಯ್ಕೆ‌, ನೂತನ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗುತ್ತಿದೆ ಎಂಬ ಆರೋಪದ ನಡುವೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ನಿನ್ನೆ(ನವೆಂಬರ್ 02) ರಾಜ್ಯ ಬಿಜೆಪಿ ಒಬಿಸಿ ನಾಯಕರೊಂದಿಗೆ ಬಿಜೆಪಿ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಕೆ.ಎಸ್.ಈಶ್ವರಪ್ಪ, ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ.ಮೋಹನ್ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆ ಕಾಲ ಸಮಾಲೋಚನೆ ನಡೆಸಿದ್ದಾರೆ.

ನಡ್ಡಾ ಜೊತೆಗೆ ನಡೆದ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಜಾತಿ ಗಣತಿ ಅಸ್ತ್ರದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೆ ತಿಂಗಳು ಸಿದ್ದವಾಗಲಿರುವ ಜಾತಿಗಣತಿ ವರದಿಯ ಸಾಧಕ ಬಾಧಕಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಜಾತಿ ಗಣತಿ ಪ್ರಕಟಕ್ಕೆ ಮುಂದುವರೆದ ಜಾತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಆದ್ರೆ, ಜಾತಿಗಣತಿಯಿಂದ ಒಬಿಸಿ ಸಮುದಾಯಕ್ಕೆ ಲಾಭ ಆಗುವುದರಿಂದ ರಾಜ್ಯದಲ್ಲಿ ಬಿಜೆಪಿ ನಿಲುವು ಏನಾಗಿರಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್: ಬಿಎಸ್​ ಯಡಿಯೂರಪ್ಪ

ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್, ಕೊನೆಯ ಕ್ಷಣದಲ್ಲಿ ಭೇಟಿ ಮಾಡದೆ ವಾಪಸ್ ಕಳುಹಿಸಿತ್ತು. ಈ ಬಾರಿ ಪಕ್ಷದ ಓಬಿಸಿ ಸಂಘಟನೆ ಬಗ್ಗೆ ಮಾತುಕತೆಗಾಗಿ ಮೂವರನ್ನು ಕರೆಸಿಕೊಂಡು ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ಚರ್ಚೆಗಳು ಮಾಡಿದೆ. ಅಲ್ಲದೇ ನಾಯಕರಿಂದ ರಾಜ್ಯದ ರಾಜಕೀಯ ವಿದ್ಯಾಮಾನ ಹಾಗೂ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಇದೇ ವೇಳೆ ಮುಂದೆ ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಓಬಿಸಿ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮೂಲಕ ಒಬಿಸಿ ಸಮುದಾಯವನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದ್ರೆ, ಇತ್ತ ಕಾಂತರಾಜು ವರದಿಗೆ ಮುಂದುವರಿದ ಜಾತಿಗಳಿಂದ ವಿರೋಧ ವ್ಯಕ್ತವಾಗಿದೆ. ಅಂತಿಮವಾಗಿ ಸರ್ಕಾರದ ನಿಲುವು ಏನಿರುತ್ತೆ ಎನ್ನುವುದೇ ಕುತೂಹಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us