ಬಿಕೆ ಹರಿಪ್ರಸಾದ್​ಗೆ ಕೈ ತಪ್ಪಿದ ಸಚಿವ ಸ್ಥಾನ: ಸಿಡಿದೆದ್ದ ಬಿಲ್ಲವ ಸಮುದಾಯ ಹೇಳಿದ್ದೇನು?​

ಬಿ.ಕೆ ಹರಿಪ್ರಸಾದ್​ ಮತ್ತು ಹರೀಶ್​ಕುಮಾರ್​ರನ್ನು ಸಚಿವ ಸ್ಥಾನಕ್ಕೆ ಗಣನೆಗೆ ತೆಗೆದುಕೊಳ್ಳಬೇಕಿತ್ತು ಎಂದು ಬಿಲ್ಲವ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ.

ಬಿಕೆ ಹರಿಪ್ರಸಾದ್​ಗೆ ಕೈ ತಪ್ಪಿದ ಸಚಿವ ಸ್ಥಾನ: ಸಿಡಿದೆದ್ದ ಬಿಲ್ಲವ ಸಮುದಾಯ ಹೇಳಿದ್ದೇನು?​
ಬಿ.ಕೆ ಹರಿಪ್ರಸಾದ್

Updated on: May 27, 2023 | 4:59 PM

ಮಂಗಳೂರು: ಬಿ.ಕೆ ಹರಿಪ್ರಸಾದ್ (BK Hariprasad)​ ಮತ್ತು ಹರೀಶ್​ಕುಮಾರ್​ರನ್ನು ಸಚಿವ ಸ್ಥಾನಕ್ಕೆ ಗಣನೆಗೆ ತೆಗೆದುಕೊಳ್ಳಬೇಕಿತ್ತು ಎಂದು ಬಿಲ್ಲವ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್​ನ ಬಿಲ್ಲವ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮನ್ನು ಪ್ರತಿನಿಧಿಸಲು ಜಿಲ್ಲೆಯಿಂದ ಯಾರಿಗೂ ಅವಕಾಶ ನೀಡಿಲ್ಲ. ಜಿಲ್ಲೆಯಲ್ಲಿ ನಮ್ಮ ಸಮುದಾಯದ ಇಬ್ಬರು ಪರಿಷತ್ ಸದಸ್ಯರಾಗಿ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್, ಹರೀಶ್ ಕುಮಾರ್ ಇದ್ದಾರೆ. ಹರಿಪ್ರಸಾದ್ ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದಾರೆ. ಯಾವತ್ತಿಗೂ ಅವರು ಬಕೆಟ್​ ರಾಜಕಾರಣ ಮಾಡಿಲ್ಲ ಎಂದು ಹೇಳಿದರು.

ಹರಿಪ್ರಸಾದ್ ಈಗಾಗಲೇ ಹೈಕಮಾಂಡ್ ಭೇಟಿ ಮಾಡಿ ಮಾತುಕತೆ ಮಾಡಿದ್ದಾರೆ. ಇನ್ನು ಸಹ ಬದಲಾವಣೆ ಆಗಬಹುದು. ಸದ್ಯ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗೆ ನಾಯಕತ್ವ ಸಿಕ್ಕಿಲ್ಲ ಎಂಬ ಬೇಸರವಿದೆ. ಕರಾವಳಿಯ ಬಹುಸಂಖ್ಯಾತ ಬಿಲ್ಲವ ಮತದಾರರಿಗೆ ಅನ್ಯಾಯ ಮಾಡದಂತೆ ಒತ್ತಾಯಿಸುತ್ತೇವೆ ಎಂದು ಕಾಂಗ್ರೆಸ್​ ಮಾಜಿ ಕಾರ್ಪೊರೇಟರ್ ಪ್ರತಿಭಾ ಕುಳಾಯಿ ಎಂದರು.

ರಾಜೀನಾಮೆಗೆ ಮುಂದಾದ ಬಿಕೆ ಹರಿಪ್ರಸಾದ್

ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹರಿಪ್ರಸಾದ್ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು.

ಇದನ್ನೂ ಓದಿ: ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್​ನಲ್ಲಿ ಅಸಮಾಧಾನ ಸ್ಫೋಟ

ಬಿಜೆಪಿ ವಿರುದ್ಧ ಸೈದ್ಧಾಂತಿಕವಾಗಿ ತೀವ್ರ ವಾಗ್ದಾಳಿ ನಡೆಸುತ್ತಿದ್ದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ ಕೆ ಹರಿಪ್ರಸಾದ್ ಅವರಿಗೆ ಕಾಂಗ್ರೆಸ್ ‌ಅಧಿಕಾರಕ್ಕೆ ಬಂದರೆ ಸಚಿವ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇತ್ತು. ಅಲ್ಲದೇ ಸಂಭವನೀಯರ ಪಟ್ಟಿಯಲ್ಲಿ ಬಿಕೆ ಹರಿಪ್ರಸಾದ್ ಅವರ ಹೆಸರು ಇತ್ತು.

ಆದ್ರೆ, ಪಟ್ಟಿ ಕೊನೆ ಕ್ಷಣದಲ್ಲಿ ಬದಲಾಗಿದ್ದರಿಂದ ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಕೈತಪ್ಪಿದೆ. ಪಕ್ಷದ ಕೆಲವರ ನಡೆಯಿಂದ ಅಸಮಾಧಾನಗೊಂಡು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: 5 ಗ್ಯಾರಂಟಿ ಯೋಜನೆಗಳನ್ನು ಪಡೆಯಲು ರಾಜ್ಯದ ಜನರು ಇನ್ನೊಂದು ವಾರ ಕಾಯಬೇಕಾ?

ಬಿಕೆ ಹರಿಪ್ರಸಾದ್​ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬಣದಲ್ಲಿ ಗುರುಸಿಕೊಂಡಿದ್ದು, ಅವರಿಗೆ ಸಚಿವ ಸ್ಥಾನ ಕೊಡಿಸಲು ಡಿಕೆ ಶಿವಕುಮಾರ್ ಸಹ ಇನ್ನಿಲ್ಲದ ಕಸರತ್ತು ನಡೆಸಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಹರಿಪ್ರಸಾದ್ ಅವರಿಗೆ ಮಂತ್ರಿಭಾಗ್ಯ ಸಿಕ್ಕಿಲ್ಲ ಎನ್ನಲಾಗಿದೆ.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us