BS Yediyurappa: ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಕಠಿಣ ಶ್ರಮ ವಹಿಸುತ್ತೇವೆ; ಬಿಎಸ್​ ಯಡಿಯೂರಪ್ಪ

ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿ ಕಠಿಣ ಶ್ರಮ ವಹಿಸಿ ಕೆಲಸ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ಹೇಳಿದ್ದಾರೆ.

BS Yediyurappa: ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ಕಠಿಣ ಶ್ರಮ ವಹಿಸುತ್ತೇವೆ; ಬಿಎಸ್​ ಯಡಿಯೂರಪ್ಪ
ಬಿಎಸ್​ ಯಡಿಯೂರಪ್ಪ

Updated on: Mar 13, 2023 | 6:00 PM

ಬೆಂಗಳೂರು: ನರೇಂದ್ರ ಮೋದಿ (Narendra Modi) ಅವರನ್ನು ಮತ್ತೊಮ್ಮೆ ಪ್ರಧಾನ ಮಂತ್ರಿಯನ್ನಾಗಿ ಮಾಡಲು ಬಿಜೆಪಿ (BJP) ಕಠಿಣ ಶ್ರಮ ವಹಿಸಿ ಕೆಲಸ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ (BS Yediyurappa) ಹೇಳಿದ್ದಾರೆ. ‘ಎಎನ್​ಐ’ ಸುದ್ದಿ ಸಂಸ್ಥೆ ಜತೆ ಮಾತನಾಡಿದ ಅವರು, ಮೋದಿಯವರಿಗೆ ನನ್ನ ಮೇಲೆ ವಿಶ್ವಾಸವಿದೆ, ನನಗೆ ಅವರ ಮೇಲೆ ನಂಬಿಕೆ ಇದೆ. ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ಹಾಗೂ ಕರ್ನಾಟಕದಲ್ಲಿ ಮರಳಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಶಕ್ತಿ ಮೀರಿ ಪ್ರಯತ್ನಿಸಲಿದ್ದೇವೆ. ಸಾರ್ವಜನಿಕರು ಬಿಜೆಪಿ ಪರ ಇದ್ದಾರೆ. ಕರ್ನಾಟಕದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

224 ಕ್ಷೇತ್ರಗಳುಳ್ಳ ಕರ್ನಾಟಕ ವಿಧಾನಸಭೆ ಅವಧಿ ಮೇ 24ರಂದು ಕೊನೆಗೊಳ್ಳಲಿದೆ. ಹೀಗಾಗಿ ಅದಕ್ಕೂ ಮುನ್ನ ಚುನಾವಣೆ ನಡೆಲಿದ್ದು, ಫಲಿತಾಂಶವೂ ಪ್ರಕಟವಾಗಲಿದೆ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನ ಗಳಿಸಿತ್ತು. ಕಾಂಗ್ರೆಸ್ 78 ಹಾಗೂ ಜೆಡಿಎಸ್ 37 ಸ್ಥಾನ ಗೆದ್ದಿದ್ದವು.

ರಾಹುಲ್ ಗಾಂಧಿಯವರು ಲಂಡನ್​ನಲ್ಲಿ ನೀಡಿರುವ ಹೇಳಿಕೆಯನ್ನು ಯಾರೂ ಮೆಚ್ಚಲಾರರು ಎಂದು ಯಡಿಯೂರಪ್ಪ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಬೇರೆ ದೇಶಗಳಿಗೆ ತೆರಳಿದಾಗ, ಅದರಲ್ಲಿಯೂ ಲಂಡನ್​ಗೆ ತೆರಳಿ ಅಂಥ ಹೇಳಿಕೆಗಳನ್ನು ನೀಡುವುದು ದುರದೃಷ್ಟಕರ. ಅದನ್ನು ಯಾರೂ ಒಪ್ಪುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Bengaluru: ಯಡಿಯೂರಪ್ಪರಿಂದ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭ; ಜೆಪಿ ನಡ್ಡಾ

ಇತ್ತೀಚೆಗೆ ಲಂಡನ್​​ನ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, ಭಾರತದ ಪ್ರಜಾಪ್ರಭುತ್ವವು ಅಪಾಯದಲ್ಲಿದ್ದು, ಪ್ರಜಾತಂತ್ರದ ಮೇಲೆ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದ್ದರು.

ಭಾರತದ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಮತ್ತು ದಾಳಿಯನ್ನು ಎದುರಿಸುತ್ತಿದೆ ಎಂಬುದು ಎಲ್ಲರಿಗೂ ತಿಳಿದಿದೆ. ನಾನು ಭಾರತದಲ್ಲಿ ಪ್ರತಿಪಕ್ಷದ ನಾಯಕ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು, ಸಂಸತ್ತು, ಮುಕ್ತ ಪತ್ರಿಕಾ ವ್ಯವಸ್ಥೆ, ನ್ಯಾಯಾಂಗ, ಎಲ್ಲವನ್ನೂ ನಿರ್ಬಂಧಿಸಲಾಗುತ್ತಿದೆ ಎಂದು ಅವರು ಹೇಳಿದ್ದರು. ಸಂಸತ್ತಿನಲ್ಲಿ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರ ಮೈಕ್‌ಗಳು ಆಗಾಗ್ಗೆ ಆಫ್ ಮಾಡಲಾಗುತ್ತದೆ ಎಂದು ಲಂಡನ್‌ನಲ್ಲಿ ಬ್ರಿಟಿಷ್ ಸಂಸದರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಹೇಳಿದ್ದರು.

ಕೇಂದ್ರ ನಾಯಕರಿಂದ ಬಿಎಸ್​ವೈ ಗುಣಗಾನ

ಯಡಿಯೂರಪ್ಪ ಜನ್ಮದಿನಾಚರಣೆಯಂದೇ ಫೆಬ್ರುವರಿ 27ರಂದು ಶಿವಮೊಗ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ್ದರು. ಬಳಿಕ ಬಿಎಸ್​​ವೈ ಅವರನ್ನು ಹಾಡಿಹೊಗಳಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಯಡಿಯೂರಪ್ಪ ಅವರನ್ನು ಅನೇಕ ಬಾರಿ ಹೊಗಳಿದ್ದಾರೆ. ಇತ್ತೀಚೆಗೆ ಬೆಂಗಳೂರಿನ ಕೆಆರ್ ಪುರಂನಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ನಡ್ಡಾ, ರಾಜ್ಯದಲ್ಲಿ ಮೊದಲು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದ ಅಭಿವೃದ್ಧಿ ಪರ್ವ ಆರಂಭವಾಯಿತು. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಅಭಿವೃದ್ಧಿ ಕಾರ್ಯ ಮುಂದುವರಿಕೆಯಾಯಿತು ಎಂದು ಹೇಳಿದ್ದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Mon, 13 March 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us