ಕೇಂದ್ರದ ಅನ್ಯಾಯ ಪ್ರಶ್ನಿಸಲು ಬೊಮ್ಮಾಯಿಗೆ ಬಾಯಿಯೇ ಬರಲ್ಲ, ಅಶೋಕ್​ಗೆ ಗೊತ್ತೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಕೇಂದ್ರ ಸರ್ಕಾರ ಕರ್ನಾಟಕದ ಪಾಲಿನ ಅನುದಾನ ನೀಡಿಲ್ಲವೆಂಬ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಡಿಸಿಎಂ ಡಿಕೆ ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರತಿಪಕ್ಷ ನಾಯಕ ಆರ್ ಅಶೋಕ್, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜತೆ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಕೇಂದ್ರದ ಅನ್ಯಾಯ ಪ್ರಶ್ನಿಸಲು ಬೊಮ್ಮಾಯಿಗೆ ಬಾಯಿಯೇ ಬರಲ್ಲ, ಅಶೋಕ್​ಗೆ ಗೊತ್ತೇ ಇಲ್ಲ: ಸಿದ್ದರಾಮಯ್ಯ ವ್ಯಂಗ್ಯ
ಸಿಎಂ ಸಿದ್ದರಾಮಯ್ಯ
Follow us
| Updated By: ಗಣಪತಿ ಶರ್ಮ

Updated on: Feb 05, 2024 | 12:56 PM

ಬೆಂಗಳೂರು, ಫೆಬ್ರವರಿ 5: ‘ಕೇಂದ್ರ ಸರ್ಕಾರವು ಕರ್ನಾಟಕದ (Karnataka) ಪಾಲಿನ ಹಣವನ್ನು ನೀಡದೆ ಅನ್ಯಾಯ ಎಸಗುತ್ತಿದೆ. ಆದರೆ, ಇದನ್ನು ಪ್ರಶ್ನಿಸಲು ಬಿಜೆಪಿ (BJP) ನಾಯಕ ಬಸವರಾಜ ಬೊಮ್ಮಾಯಿ ಅವರಿಗೆ ಬಾಯಿಯೇ ಬರುತ್ತಿಲ್ಲ. ಬಿಎಸ್​ ಯಡಿಯೂರಪ್ಪ ಅವರಿಗೂ ಬಾಯಿ ಬರಲ್ಲ’ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದರು. ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜತೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಅನುದಾನ ನೀಡುವ ವಿಚಾರದಲ್ಲಿ ಕೇಂದ್ರದಿಂದ ಸಾಕಷ್ಟು ಅನ್ಯಾಯವಾಗುತ್ತಿದೆ. ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ಗೆ ಈ ಬಗ್ಗೆ ಮಾಹಿತಿಯೇ ಇಲ್ಲ ಎಂದರು.

ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಈ ಬಗ್ಗೆ ತುಟಿಬಿಚ್ಚಿಲ್ಲ. ಹೀಗಾಗಿ ದೇಶದ ಗಮನ ಸೆಳೆಯಲು ನಾಡಿದ್ದು ಪ್ರತಿಭಟನೆ ನಡೆಸುತ್ತಿದ್ದೇವೆ. ಫೆಬ್ರವರಿ 7ರಂದು ನಡೆಯುವ ಪ್ರತಿಭಟನೆಗೆ ಎಲ್ಲರೂ ಸಹಕರಿಸಿ ಎಂದು ಮುಖ್ಯಮಂತ್ರಿಗಳು ಸಚಿವರು, ಶಾಸಕರಿಗೆ ಮನವಿ ಮಾಡಿದರು.

ಉತ್ತರದ ರಾಜ್ಯಗಳಿಗೆ ಅನುದಾನ ಕೊಡಿ, ಬೇಡವೆನ್ನುವುದಿಲ್ಲ. ಆದರೆ ದಕ್ಷಿಣದ ರಾಜ್ಯಗಳ ಕಡೆ ಗಮನಹರಿಸಿ. ರಾಜ್ಯದಿಂದ ಜೋಶಿ, ಶೋಭಾ, ಭಗವಂತ ಖೂಬಾ ಕೇಂದ್ರ ಮಂತ್ರಿಗಳಾಗಿದ್ದಾರೆ. ಒಂದು ದಿನವೂ ಅವರು ಬಾಯಿ‌ಬಿಡಲಿಲ್ಲ. ಸಂಸತ್‌ನಲ್ಲಿ ಇದರ ಬಗ್ಗೆ ಅವರು ಮಾತನಾಡಿದ್ದಾರಾ? ಇದೆಲ್ಲ ರಾಜ್ಯಕ್ಕೆ ಅನ್ಯಾಯ ಅಲ್ವೇ? ಜನ ಇವರನ್ನು ಆಶೀರ್ವಾದ ಮಾಡಿ ಕಳಿಹಿಸಿಲ್ಲವೇ? ಹಣಕಾಸು ಸಚಿವರು ನಮ್ಮ ರಾಜ್ಯದಿಂದಲೇ ಕೇಂದ್ರಕ್ಕೆ ಹೋಗಿದ್ದಾರೆ. ಅವರೇ ರಾಜ್ಯಕ್ಕೆ ಅನ್ಯಾಯ ಮಾಡಿದರೆ ಹೇಗೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಬಿಜೆಪಿ ನಾಯಕರನ್ನು ಉದ್ದೇಶಿಸಿ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ, ಕೇಂದ್ರ ಸಚಿವ ಅಮಿತ್ ಶಾ ಅವರ ಬಳಿ ಮಾತನಾಡಿ, ಪ್ರಧಾನಿಯವರ ಬಳಿ ಮಾತನಾಡಿರಪ್ಪಾ, ಸಂಸತ್​​ನಲ್ಲಿ ಮಾತನಾಡಿ. ಇಲ್ಲಿ ಸುಳ್ಳು ಹೇಳಿಕೊಂಡು ಯಾಕೆ ಇರುತ್ತೀರಿ. ಅಲ್ಲಿಗೆ‌ಹೋಗಿ ಕೇಳಿ, ಮಾಡಿಸಿ ಎಂದು ಲೇವಡಿ ಮಾಡಿದರು.

ಇದನ್ನೂ ಓದಿ: ಕರ್ನಾಟಕದ ಪಾಲಿನ ಹಣ ನೀಡದ ಕೇಂದ್ರದ ವಿರುದ್ಧ ದೆಹಲಿಯಲ್ಲಿ ಧರಣಿ ನಡೆಸುತ್ತೇವೆ: ಸಿಎಂ ಸಿದ್ದರಾಮಯ್ಯ ಘೋಷಣೆ

ರಾಜ್ಯ ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರು, 25 ಸಂಸದರು ರಾಜ್ಯಕ್ಕೆ ಸಿಗಬೇಕಾದ ಪಾಲಿನ ಬಗ್ಗೆ ಮಾತನಾಡುತ್ತಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಸರಿಪಡಿಸುರೆಂಬ ಭರವಸೆಯಿಂದ ಧರಣಿ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಫೆಬ್ರವರಿ 7ಕ್ಕೆ ಬೆಳಗ್ಗೆ 11 ಗಂಟೆಯಿಂದ ದೆಹಲಿಯ ಜಂತರ್​ ಮಂತರ್​ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ ನಡೆಸುವುದಾಗಿ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ