Puppet CM: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂದರೆ ಬಿಜೆಪಿಗೆ ಗೊಂಬೆಯಾಟ; ಕಾಂಗ್ರೆಸ್ ಮತ್ತೊಂದು ಟ್ವೀಟ್

ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸಲು ವೇದಿಕೆ ಸಜ್ಜಾಗುತ್ತಿದೆ ಎಂದು ಕಾಂಗ್ರೆಸ್​ ವ್ಯಂಗ್ಯದ ಧ್ವನಿಯಲ್ಲಿ ಟ್ವೀಟ್ ಮಾಡಿದೆ.

Puppet CM: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಎಂದರೆ ಬಿಜೆಪಿಗೆ ಗೊಂಬೆಯಾಟ; ಕಾಂಗ್ರೆಸ್ ಮತ್ತೊಂದು ಟ್ವೀಟ್
ಬಿಜೆಪಿ ಬಗ್ಗೆ ಕಾಂಗ್ರೆಸ್ ಮಾಡಿರುವ ಟ್ವೀಟ್
Edited By:

Updated on: Aug 10, 2022 | 1:01 PM

ಬೆಂಗಳೂರು: ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ (Karnataka Congress) ಮಾಡಿದ್ದ ಟ್ವೀಟ್ ಭಾರೀ ವಿವಾದಕ್ಕೆ ಕಾರಣವಾಗಿದ್ದ ಬೆನ್ನಲ್ಲೇ ಮತ್ತೊಮ್ಮೆ ಅಂಥದ್ದೇ ಇನ್ನೊಂದು ಟ್ವೀಟ್ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗಿಸಿದೆ. ‘ಬಿಜೆಪಿ ಹೈಕಮಾಂಡ್​ (BJP High Command) ಪಾಲಿಗೆ ಕರ್ನಾಟಕದ ಮುಖ್ಯಮಂತ್ರಿಗಳೆಂದರೆ ಆಟಿಕೆ ಮುಖ್ಯಮಂತ್ರಿಗಳಿದ್ದಂತೆ (#PuppetCM). ಅಡಿಸಿಯೂ ನೋಡುತ್ತಾರೆ, ಬೀಳಿಸಿಯೂ ನೋಡುತ್ತಾರೆ ಎಂದು ವ್ಯಂಗ್ಯವಾಡಿದೆ.

ಬಿ.ಎಸ್.ಯಡಿಯೂರಪ್ಪ (BS Yediyurappa) ಅವರಂಥ ನಾಯಕರನ್ನೇ ಹೇಳದೆ ಕೇಳದೆ ಮನೆಗೆ ಕಳಿಸಿರುವಾಗ ‘ಬೊಂಬೆ ಬೊಮ್ಮಾಯಿ’ (Basavaraj Bommai) ಯಾವ ಲೆಕ್ಕ ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ‘ಸಂತೋಷ ಕೂಟ’ಕ್ಕೆ ಸಂತೋಷಪಡಿಸುವ ಬೊಮ್ಮಾಯಿಯವರ ಪ್ರಯತ್ನ ವಿಫಲವಾಗಿದೆ. ಹಗರಣ ಮತ್ತು ವೈಫಲ್ಯಗಳ ಕೊಡ ತುಂಬಿದೆ ಎಂದು ಕರ್ನಾಟಕದ ಬಿಜೆಪಿ ವಿದ್ಯಮಾನಗಳ ಮೇಲೆ ಇರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಛಾಯೆಯ ಬಗ್ಗೆಯೂ ಲೇವಡಿ ಮಾಡಿದೆ.

ಈ ಹಿಂದೆ ಯಡಿಯೂರಪ್ಪ ಅವರನ್ನು ಸರ್ಕಾರದ ಎರಡನೇ ವರ್ಷದ ವಾರ್ಷಿಕೋತ್ಸವ ಸಂಭ್ರಮದ ಸಂದರ್ಭದಲ್ಲೇ ಕಣ್ಣೀರು ಹಾಕಿಸಿ ಕಳಿಸಲಾಗಿತ್ತು. ಈಗ ಬೊಮ್ಮಾಯಿ ಅವರನ್ನು 1ನೇ ವಾರ್ಷಿಕೋತ್ಸವದ ಹೊತ್ತಲ್ಲಿ ಕೆಳಗಿಳಿಸಲು ವೇದಿಕೆ ಸಜ್ಜಾಗುತ್ತಿದೆ. 1 ವರ್ಷದಲ್ಲಿ 12 ಬಾರಿ ದೆಹಲಿ ಪ್ರವಾಸ ಕೈಗೊಂಡರೂ ಕೈಗೊಂಬೆ ಮುಖ್ಯಮಂತ್ರಿಗೆ ಸಂಪುಟ ಸಂಕಟ ಬಗೆಹರಿಸಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಪಕ್ಷವು ಟ್ವೀಟ್ ಮೂಲಕವೇ ಚಾಟಿ ಬೀಸಿದೆ.

ಸಿಎಂ ಬದಲಾವಣೆ ಟ್ವೀಟ್ ಸಮರ್ಥಿಸಿಕೊಂಡ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ

ಬಿಜೆಪಿ ಪಕ್ಷದಲ್ಲಿಯೇ ಮೂರನೇ ಮುಖ್ಯಮಂತ್ರಿಯ ಕೂಗು ಕೇಳಿಬಂದಿದೆ. ಈ ಹಿಂದೆಯೂ ಬಿಜೆಪಿಯವರು ಕರ್ನಾಟಕದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕೊಟ್ಟಿದ್ದರು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಕುರಿತು ಕಾಂಗ್ರೆಸ್​ ಪಕ್ಷದ ಟ್ವೀಟ್​ ವಿವಾದಕ್ಕೀಡಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, 3ನೇ ಸಿಎಂ ಕೂಗು ಬಿಜೆಪಿ ವಲಯದಲ್ಲೇ ಕೇಳಿಬಂದಿದೆ; ಕಾಂಗ್ರೆಸ್ ಪಾಳಯದಲ್ಲಿ ಅಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿ ಆಡಳಿತದಲ್ಲಿ ಕರ್ನಾಟಕ ಅಭಿವೃದ್ಧಿ ಆಗಬಹುದು ಎಂಬ ನಿರೀಕ್ಷೆಯು ಹುಸಿಯಾಗಿದೆ. 1999ರ ಬಳಿಕ ರಾಜ್ಯದಲ್ಲಿ 3 ಬಾರಿ ಕಾಂಗ್ರೆಸ್​ ಸರ್ಕಾರ ಬರಲಿದೆ. ಕಾಂಗ್ರೆಸ್​ನಿಂದ ಮಾತ್ರ ಸ್ಥಿರ ಸರ್ಕಾರ ನೀಡಲು ಸಾಧ್ಯ ಎಂದು ಹೇಳಿದರು.

ಈ ಸರ್ಕಾರದಲ್ಲಿ ಯಾವುದೇ ಸಚಿವರು ಸಿಎಂ ನಿಯಂತ್ರಣದಲ್ಲಿದ್ದಾರೆ ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಜನ ಸಂಕಷ್ಟದಲ್ಲಿದ್ದಾರೆ. ಜಿಲ್ಲೆಗಳಿಗೆ ಹೋಗುವಂತೆ ಸಚಿವರಿಗೆ ಸಿಎಂ ಸೂಚಿಸಿದ್ದಾರೆ. ಆದರೆ ಯಾವ ಸಚಿವರು ತಾನೆ ಜಿಲ್ಲೆಗಳಿಗೆ ಹೋಗಿ ಮೀಟಿಂಗ್ ನಡೆಸಿದ್ದಾರೆ? ಎಷ್ಟು ಸಂತ್ರಸ್ತರಿಗೆ ಪರಿಹಾರ ನೀಡಿದ್ದಾರೆ ಅಂತಾ ಹೇಳಲಿ? ಮುಖ್ಯಮಂತ್ರಿಗಳೇ ಎಲ್ಲ ಕಡೆ ಓಡಾಡಿ ವರದಿ ನೀಡುವಂತಾಗಿದೆ ಎಂದು ವ್ಯಂಗ್ಯವಾಡಿದರು.