ಲೋಕಸಭೆ ಚುನಾವಣೆವರೆಗೆ ಗುದ್ದಾಡಿ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಾರೆ: ರಮೇಶ್ ಜಾರಕಿಹೊಳಿ

ಲೋಕಸಭೆ ಚುನಾವಣೆವರೆಗೆ ಮಾತ್ರ ಗುದ್ದಾಡಿಕೊಂಡು ಐದು ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುತ್ತಾರೆ. ನಂತರ ಕಾಂಗ್ರೆಸ್​​ನವರು ಜನರಿಗೆ ಮೋಸ ಮಾಡುತ್ತಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಲೋಕಸಭೆ ಚುನಾವಣೆವರೆಗೆ ಗುದ್ದಾಡಿ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಾರೆ: ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ
Rakesh Nayak Manchi

Updated on: Jun 11, 2023 | 5:22 PM

ಬೆಳಗಾವಿ: ಲೋಕಸಭೆ ಚುನಾವಣೆವರೆಗೆ (Loka Sabha Elections 2024) ಮಾತ್ರ ಗುದ್ದಾಡಿಕೊಂಡು ಐದು ಗ್ಯಾರಂಟಿ (Congress Guarantees) ಯೋಜನೆಗಳನ್ನು ಮುಂದುವರಿಸುತ್ತಾರೆ. ನಂತರ ಕಾಂಗ್ರೆಸ್​​ನವರು ಜನರಿಗೆ ಮೋಸ ಮಾಡುತ್ತಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ. ಜಿಲ್ಲೆಯ ಅಥಣಿಯಲ್ಲಿ ಕಾರ್ಯಕರ್ತರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಗ್ಯಾರಂಟಿಗಳನ್ನು ಮುಂದುವರಿಸಿದರೆ ಅಭಿವೃದ್ಧಿಕಾರ್ಯ ಬಂದ್ ಮಾಡಬೇಕಾಗುತ್ತದೆ. ಇದರಿಂದ ಕರ್ನಾಟಕದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂದರು.

ನಾವು ಯಾರೂ ಗ್ಯಾರಂಟಿಗಳ ಬಗ್ಗೆ ಮಾತನಾಡಬಾರದು ಎಂದು ಬಿಜೆಪಿ ಮುಖಂಡರು, ನಾಯಕರಲ್ಲಿ ನಾನು ಮನವಿ ಮಾಡುತ್ತೇನೆ ಎಂದು ಹೇಳಿದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ಕೊಟ್ಟಿದ್ದಾರೆ, ಜನ ಮತ ಹಾಕಿದ್ದಾರೆ, ಅವರಿಗೂ ಇದೆ, ನಮಗೂ ಇದೆ. ಆಮೇಲೆ ತಪ್ಪು ಮಾಡಿದರೆ ಮಾತಾಡೋಣ ಎಂದು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಎರಡು ಸ್ಥಾನಕ್ಕೆ ಸೀಮಿತ ಮಾಡುತ್ತೇವೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಮೇಶ್ ಜಾರಕಿಹೊಳಿ, ಆಗಲಿ ಆಗಲಿ ಬಹಳ ಸಂತೋಷ ಬಹಳ ಸಂತೋಷ ಎಂದರು.

ಇದನ್ನೂ ಓದಿ: Odisha Train Accident: ಪ್ರಧಾನಿ ಮೋದಿಗೆ ಖರ್ಗೆ ಬರೆದ ಪತ್ರಕ್ಕೆ ತೇಜಸ್ವಿ ಸೂರ್ಯ ಸೇರಿ ಬಿಜೆಪಿಯ ನಾಲ್ವರು ಸಂಸದರಿಂದ ತಿರುಗೇಟು

ಚುನಾವಣೆಗಾಗಿ ಗ್ರಾಮ ಭೇಟಿಗೆ ಮುಂದಾದ ರಮೇಶ್ ಜಾರಕಿಹೊಳಿ

ಕಾಗವಾಡ, ಅಥಣಿ ಭಾಗದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಸಭೆಯಲ್ಲಿ ಹೇಳಿದ ರಮೇಶ್ ಜಾರಕಿಹೊಳಿ, ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗಾಗಿ ಪಕ್ಷ ಸಂಘಟನೆ ಮಾಡಲು ಕಾಗವಾಡ, ಅಥಣಿ ಭಾಗದ ಪ್ರತಿ ಗ್ರಾಮಕ್ಕೂ ಭೇಟಿ ನೀಡುತ್ತೇವೆ. ಮತ್ತೆ ಬಿಜೆಪಿ ಸಂಘಟನೆಗೆ ಪ್ರಯತ್ನ ಮಾಡುತ್ತೇವೆ ಎಂದರು.

ಬಹಳ ದೊಡ್ಡ ಪ್ರಮಾಣದಲ್ಲಿ ಸೋತಿದ್ದೇವೆ: ರಮೇಶ್ ಜಾರಕಿಹೊಳಿ

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು ವಿಚಾರವಾಗಿ ಮಾತನಾಡಿದ ಮಾಜಿ ಸಚಿವರು, ಬಹಳ ದೊಡ್ಡ ಪ್ರಮಾಣದಲ್ಲಿ ಸೋತಿದ್ದೇವೆ, ಆ ಬಗ್ಗೆ ನೆಪ ಹೇಳಲ್ಲ. ಸೋಲು ಸ್ವೀಕಾರ ಮಾಡುತ್ತೇವೆ, ನೂತನ ಶಾಸಕರಿಗೆ ಅಭಿನಂದನೆ ಎಂದು ಪರೋಕ್ಷವಾಗಿ ಲಕ್ಷ್ಮಣ್ ಸವದಿಗೆ ಅಭಿನಂದನೆ ಸಲ್ಲಿಸಿದರು. ಅಥಣಿ ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರುತ್ತೇವೆ ಎಂದಿದ್ದರು. ಅಭಿವೃದ್ಧಿ ಮಾಡಲಿ ನಾವು ಸಹಕಾರ ಕೊಡುತ್ತೇವೆ ಅಂತಾನೂ ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us