ಮಂಡ್ಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ; ಅಭ್ಯರ್ಥಿ ಆಯ್ಕೆ ಸಂಬಂಧ ಮಂಡ್ಯದಲ್ಲಿ ಪೂರ್ವಭಾವಿ ಸಭೆ

ಲೋಕಸಭಾ ಚುನಾವಣೆಗೆ ಇನ್ನು ಕೆಲವು ತಿಂಗಳುಗಳು ಬಾಕಿ ಇವೆ. ವಿಧಾನಸಭೆ ಚುನಾವಣೆ ಗೆಲುವಿನ ಗುಂಗಿನಲ್ಲಿ ಇರುವ ಕಾಂಗ್ರೆಸ್, ಈಗಾಗಲೇ ಲೋಕ ಸಮರಕ್ಕೆ ಭರ್ಜರಿ ತಯಾರಿ ಮಾಡುತ್ತಿದೆ. ಹೇಗಾದರೂ ಮಾಡಿ ಮಂಡ್ಯವನ್ನ ಕಬ್ಜ ಮಾಡಬೇಕು ಎಂಬ ಪ್ಯ್ಲಾನ್​ನಲ್ಲಿ ಇರುವ ಕೈ ಪಡೆ, ಈಗಾಗಲೇ ಚುನಾವಣೆಗೆ ತಯಾರಿ ನಡೆಸುತ್ತಿದೆ. ಅಭ್ಯರ್ಥಿ ಆಯ್ಕೆ, ಒಗ್ಗಟ್ಟಿನ ಮಂತ್ರ ಜಪಿಸುವ ನಿಟ್ಟಿನಲ್ಲಿ ನಿನ್ನೆ(ಅ.07) ಸಭೆ ಕೂಡ ಮಾಡಿದೆ.

ಮಂಡ್ಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ; ಅಭ್ಯರ್ಥಿ ಆಯ್ಕೆ ಸಂಬಂಧ ಮಂಡ್ಯದಲ್ಲಿ ಪೂರ್ವಭಾವಿ ಸಭೆ
ಕಾಂಗ್ರೆಸ್​ ಮಂಡ್ಯ ಲೋಕಾಸಭಾ ಚುನಾವಣೆ ತಯಾರಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 08, 2023 | 8:39 PM

ಮಂಡ್ಯ, ಅ.08: ವಿಧಾನಸಭಾ ಚುನಾವಣೆಯಲ್ಲಿ ಯಾರು ನಿರೀಕ್ಷೆ ಮಾಡದ ಫಲಿತಾಂಶವನ್ನು ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ (Congress) ಕಂಡಿತ್ತು. ಚುನಾವಣೆ ಮುಗಿದು ಹಲವು ತಿಂಗಳು ಕಳೆದರೂ ಇನ್ನು ಸಹ ಚುನಾವಣೆ ಗೆಲುವಿನ ಗುಂಗಿನಲ್ಲಿ ಕೈಪಡೆ ಇದೆ. ಈ ಮಧ್ಯೆ ಲೋಕಸಭಾ ಚುನಾವಣೆ(Lok Sabha Elections)ಗೂ ಕೂಡ ಈಗಿನಿಂದಲೆ ತಯಾರಿ ಮಾಡಿಕೊಳ್ಳುತ್ತಿದೆ. ಅದರಲ್ಲೂ ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಸದ್ದು ಮಾಡಿರುವ ಮಂಡ್ಯದಲ್ಲಿ, ಈ ಬಾರಿ ಶತಾಯ-ಗತಾಯ ಗೆಲ್ಲಲೇಬೇಕು ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಭರ್ಜರಿ ತಯಾರಿ ಕೂಡ ನಡೆಸುತ್ತಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿನ್ನೆ(ಅ.08) ಮಂಡ್ಯದಲ್ಲಿ ಕಾಂಗ್ರೆಸ್ ಪೂರ್ವಭಾವಿ ಸಭೆಯನ್ನು ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಿತ್ತು.

ಒಮ್ಮತ ಅಭ್ಯರ್ಥಿಯನ್ನ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ

ಹೌದು, ಈ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವರು ಆದ ಎಮ್ ಸಿ ಸುಧಾಕರ್, ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ನರೇಂದ್ರಸ್ವಾಮಿ, ಎಮ್ ಎಲ್ ಸಿಗಳಾದ ಜಿ ಮಧು ಮಾದೇಗೌಡ, ದಿನೇಶ್ ಗೂಳಿಗೌಡ ಸೇರಿದಂತೆ ಅನೇಕರು ಭಾಗವಹಿಸಿದ್ದರು.  ಈ ಸಭೆಯಲ್ಲಿ ಅನೇಕ ವಿಚಾರಗಳನ್ನು ಚರ್ಚೆ ಮಾಡಲಾಗಿದ್ದು, ಒಮ್ಮತ ಅಭ್ಯರ್ಥಿಯನ್ನ ಕಣಕ್ಕೆ ಇಳಿಸುವ ಬಗ್ಗೆ ಚರ್ಚೆ ಮಾಡಲಾಗಿದೆ.

ಇದನ್ನೂ ಓದಿ:ಮುಂಬರುವ ಲೋಕಸಭಾ ಚುನಾವಣೆಯ ನಂತರ ಭಾರತ ಬಿಜೆಪಿ-ಮುಕ್ತ ದೇಶವಾಗಲಿದೆ: ಸಂತೋಷ್ ಲಾಡ್, ಸಚಿವ

ಜೆಡಿಎಸ್-ಬಿಜೆಪಿಗೆ ಟಕ್ಕರ್ ಕೊಡಲು ಪ್ಲ್ಯಾನ್

ಇನ್ನು ಮಂಡ್ಯದಲ್ಲಿ ಜೆಡಿಎಸ್ ಕೂಡ ಭದ್ರವಾಗಿದೆ. ಸದ್ಯ ಸುಮಲತಾ ಅಂಬರೀಶ್ ಸಂಸದರಾಗಿದ್ದಾರೆ. ಸುಮಲತಾ ಅಂಬರೀಶ್ ಕೂಡ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಬಿಜೆಪಿ ಹಾಗೂ ಜೆಡಿಎಸ್ ಗೆ ಟಕ್ಕರ್ ಕೊಡಲು ಸಮರ್ಥವಾದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಈ ಮಧ್ಯೆ ಮತ್ತೆ ನಟಿ ಹಾಗೂ ಮಾಜಿ ಸಂಸದೆ ರಮ್ಯಾ
ಹೆಸರು ಕೂಡ ಕೇಳಿ ಬರುತ್ತಿದೆ. ಈ ಎಲ್ಲ ವಿಚಾರಗಳು ಕೂಡ ಸಭೆಯಲ್ಲಿ ಚರ್ಚೆಯಾಗಿದೆ. ಅಲ್ಲದೆ ಮುಖಂಡರ ಅಭಿಪ್ರಾಯವನ್ನು ಕೂಡ ಸಂಗ್ರಹಿಸಿ ಪಕ್ಷದ ಅಧ್ಯಕ್ಷರಿಗೆ ತಿಳಿಸುವ ಕೆಲ ಮಾಡಲಾಗುತ್ತಿದೆ.

ಪಕ್ಷಕ್ಕೆ ದುಡಿದವರಿಗೆ ಈ ಬಾರಿ ಟಿಕೆಟ್-ಎನ್ ಚಲುವರಾಯಸ್ವಾಮಿ

ಇನ್ನು ಈ ಬಗ್ಗೆ ಮಾತನಾಡಿರುವ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ‘ಒಂದು ಲೈನ್ ರೆಸ್ಯೂಲೇಷನ್ ಮಾಡಲಾಗಿದೆ. ಪಕ್ಷಕ್ಕೆ ದುಡಿದವರಿಗೆ ಈ ಬಾರಿ ಟಿಕೆಟ್ ಸಿಗಲಿದೆ. ಆ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದಿದ್ದರು. ಒಟ್ಟಾರೆ ಮಂಡ್ಯದಲ್ಲಿ ಕಾವೇರಿ ಹೋರಾಟದ ಕಾವಿನ ನಡುವೆ ಲೋಕ ಸಮರದ ಕಾವು ಕೂಡ ರಂಗು ಪಡೆಯುತ್ತಿದೆ. ಹೇಗಾದರೂ ಮಾಡಿ ಮಂಡ್ಯವನ್ನ ವಶಕ್ಕೆ ಪಡೆಯಲು ಈಗಿನಿಂದಲೇ ಕಾಂಗ್ರೆಸ್ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
Follow Us