AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ನಮಗೂ ಹಸ್ತಕ್ಕೆ ಆಪರೇಷನ್ ಮಾಡಲು ಗೊತ್ತಿದೆ: ಸಿಟಿ ರವಿ

ಬಿಜೆಪಿಯಿಂದ ಯಾರೂ ಕಾಂಗ್ರೆಸ್ ಪಕ್ಷಕ್ಕೆ ಹೋಗಲ್ಲ ಎಂದು ಮಾಜಿ ಶಾಸಕ ಸಿಟಿ ರವಿ ಹೇಳಿದರು. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು ‘ ಹಿರಿಯ ಸಚಿವರು, ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಕಾಂಗ್ರೆಸ್​ಗೆ ಆಗುತ್ತಿಲ್ಲ. ಅತಿರೇಕಕ್ಕೆ ಕೈ ಹಾಕಿದ್ರೆ ಮುಂದೆ ಏನು ಮಾಡಬೇಕೆಂದು ನಮಗೆ ಗೊತ್ತು ಎಂದು ಎಚ್ಚರಿಕೆ ನೀಡಿದರು.

ಬೆಂಗಳೂರು: ನಮಗೂ ಹಸ್ತಕ್ಕೆ ಆಪರೇಷನ್ ಮಾಡಲು ಗೊತ್ತಿದೆ: ಸಿಟಿ ರವಿ
ಸಿಟಿ ರವಿ
TV9 Web
| Edited By: |

Updated on: Aug 19, 2023 | 5:57 PM

Share

ಬೆಂಗಳೂರು, ಆ.19: ಕಾಂಗ್ರೆಸ್ ಸರಕಾರವು ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೂ ಗೊತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಸಿ.ಟಿ.ರವಿ(CT Ravi) ಅವರು ಎಚ್ಚರಿಸಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ‘ಹಸ್ತಕ್ಕೆ ಆಪರೇಷನ್ ಮಾಡಿದರೆ ಏನಾಗುತ್ತದೆ ಎಂಬುದನ್ನು ನಾನೀಗ ಹೇಳುವುದಿಲ್ಲ. ನಮಗೆ ಹಿಂದೆ 104 ಸೀಟು ಬಂದಿದ್ದ ಹಿನ್ನಲೆ ಯಾರಿಗೂ ಬಹುಮತ ಇರಲಿಲ್ಲ. ಈ ಕಾರಣಕ್ಕೆ ಅಂದು ಕಾಂಗ್ರೆಸ್,  ಜೆಡಿಎಸ್ ಸೇರಿ ಸರಕಾರ ನಡೆಸಿದ್ದವು. 3 ತಿಂಗಳಿಗೆ ನಿಮ್ಮದು ಅಧ್ವಾನ ಆಗಿ, ಒಬ್ಬರಿಗೆ ಒಬ್ಬರನ್ನು ಕಂಡರೆ ಆಗದ ಸ್ಥಿತಿ ಇತ್ತು . ಅದರ ಪರಿಣಾಮವಾಗಿ ಲೋಕಸಭಾ ಚುನಾವಣೆಯಲ್ಲಿ  ಎರಡೂ ಪಕ್ಷಗಳು ಹೀನಾಯವಾಗಿ ಸೋತಿದ್ದವು ಎಂದರು.

ಕಾಂಗ್ರೆಸ್​ಗೆ ಕಿವಿಮಾತು ಹೇಳಿದ ಸಿಟಿ ರವಿ

ಅನಿಶ್ಚಿತತೆ, ಅರಾಜಕೀಯ ಪರಿಸ್ಥಿತಿ ಬಂದಾಗ ಶಾಸಕರಿಗೆ ಬಿಜೆಪಿಯೇ ಪರ್ಯಾಯ ಎನಿಸಿತ್ತು. ಈಗ ಪೂರ್ಣ ಬಹುಮತ ಇದೆ. ಅತಿಯಾಗಿ ಮಾಡಲು ಹೋದರೆ ಪರಿಸ್ಥಿತಿ ಕೆಟ್ಟದ್ದಾಗಲಿದೆ. ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಆಡಳಿತ ನಡೆಸುತ್ತಿದೆ. ಒಳ್ಳೆಯ ಆಡಳಿತ ನಡೆಸುವ ಗುರಿ ಇಟ್ಟುಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು. ಇಲ್ಲದೇ ಇರುವುದನ್ನು ಮಾಡಲು ಹೊರಟರೆ ಸುಮ್ಮನೆ ಕುಳಿತುಕೊಳ್ಳುವವರು ನಾವಲ್ಲ. ನಾವೇನಾದರೂ ಮಾಡಿದರೆ ಮೇಲೇಳಲು ಆಗಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಸರ್ಕಾರ ಅತಿಯಾಗಿ ವರ್ತಿಸಿದರೆ ಹಸ್ತಕ್ಕೆ ಆಪರೇಷನ್ ಹೇಗೆ ಮಾಡಬೇಕೆಂದು ನಮಗೆ ಚೆನ್ನಾಗಿ ಗೊತ್ತು: ಸಿಟಿ ರವಿ, ಬಿಜೆಪಿ ನಾಯಕ

ಬಿಜೆಪಿ ಬಿಟ್ಟು ಯಾರೂ ಹೋಗುವುದಿಲ್ಲ

ತಮ್ಮ ಪಕ್ಷದ ಹಿರಿಯ ಶಾಸಕರನ್ನು ಹಿಡಿದಿಡಲಾಗದ ಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ಇದೆ. ಈ ಮಧ್ಯೆ ನಮ್ಮ ಪಕ್ಷ ಬಿಟ್ಟು ಯಾರೂ ಹೋಗುವುದಿಲ್ಲ.  4 ಜನ ಸಚಿವರು ಪತ್ರ ಬರೆದಿದ್ದಾರೆ. ಎಲ್ಲವೂ ಸರಿ ಇದ್ದರೆ ಯಾಕೆ ಪತ್ರ ಬರೆಯುತ್ತಾರೆ ಎಂದು ಕೇಳಿದರು. ಎಲ್ಲವೂ ಸರಿ ಇಲ್ಲದಾಗ ರಾಜಕೀಯದಲ್ಲಿ ಪ್ರೇಮಪತ್ರಗಳು ಶುರುವಾಗುತ್ತವೆ. ಈಗ ಕಾಂಗ್ರೆಸ್‍ನಲ್ಲಿ ಎಲ್ಲವೂ ಸರಿ ಇಲ್ಲವೆಂದು ಸಚಿವರು, ಶಾಸಕರೇ ಹೇಳುವಾಗ ಯಾರೂ ಅಲ್ಲಿಗೆ ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸೈನಿಕನಿಗೆ ಚೆಕ್‍ಮೇಟ್ ಮಾಡುವುದಿಲ್ಲ. ನಮ್ಮ ಚೆಕ್‍ಮೇಟ್ ರಾಜನಿಗೆ

ನಮಗೆ ಪಾರ್ಟಿ ಕಟ್ಟಲು ಹಾಗೂ ಅದನ್ನು ಉಳಿಸಿಕೊಳ್ಳುವುದು ಗೊತ್ತು. ಅಡ್ಡ ಬಂದವರಿಗೆ ಹೇಗೆ ಉತ್ತರ ಕೊಡಬೇಕೆಂದು ಕೂಡ ಗೊತ್ತಿದೆ ಎಂದು ಸವಾಲೆಸೆದರು. ನಾವು ರಾಜಕೀಯ ದೃಷ್ಟಿಯಿಂದ ಕಾಂಗ್ರೆಸ್ ಶಾಸಕರನ್ನು ಸಂಪರ್ಕ ಮಾಡಿಲ್ಲ. ರಾಜಕೀಯದ ಚೆಸ್  ಏಕಮುಖ ಅಲ್ಲ,  ನಮಗೆ ಚೆಕ್‍ ಮೇಟ್ ಮಾಡಲು ಬಂದರೆ ನಾವೂ ಚೆಕ್‍ ಮೇಟ್ ಮಾಡಲು ಸಿದ್ಧರಿದ್ದೇವೆ. ಸೈನಿಕನಿಗೆ ಚೆಕ್‍ ಮೇಟ್ ಮಾಡುವುದಿಲ್ಲ. ನಮ್ಮ ಚೆಕ್‍ಮೇಟ್ ರಾಜನಿಗೆ ಇರುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಹಾಸನದಲ್ಲಿ ಆಪರೇಷನ್ ಹಸ್ತಕ್ಕೆ ಕೈ ಹಾಕಿದ ಡಿಕೆ ಶಿವಕುಮಾರ್​, ದಳಪತಿಗಳಲ್ಲಿ ಮತ್ತಷ್ಟು ಟಿಕೆಟ್​ ಟೆನ್ಷನ್

ಆರೋಪಕ್ಕೆ ಉತ್ತರ ಕೊಡದ ಕಾಂಗ್ರೆಸ್​

ಡಿ.ಕೆ.ಶಿವಕುಮಾರ್ ಡಿಸಿಎಂ ಆಗಿದ್ದಾರೆ. ತಮ್ಮ ಹುದ್ದೆಯ ಜವಾಬ್ದಾರಿಯಿಂದ ಮಾತನಾಡಲಿ. ನೀವು ಮೊದಲು ಲೋಕಾಯುಕ್ತಕ್ಕೆ ಬಾಗಿಲು ಹಾಕಿ, ಕೇಸು ಮುಚ್ಚಿಹಾಕಲು ಎಸಿಬಿ ತಂದಿದ್ದೀರಿ. ಅರ್ಕಾವತಿ 8 ಸಾವಿರ ಕೋಟಿ ಕುರಿತು ನನ್ನ ಆರೋಪಕ್ಕೆ ಒಂದು ಶಬ್ದದಲ್ಲಾದರೂ ಪ್ರತಿಕ್ರಿಯೆ ಕೊಟ್ಟಿದ್ದೀರಾ ಎಂದು ಕಾಂಗ್ರೆಸ್ ಪಕ್ಷದವರನ್ನು ತರಾಟೆಗೆ ತೆಗೆದುಕೊಂಡು, ಇದ್ದ ಮೂವರಲ್ಲಿ ಕದ್ದವರ್ಯಾರು? ಎಂದು ಕೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ ಎಂದ ಸಿಟಿ ರವಿ

ಕಾಂಗ್ರೆಸ್ ಪಕ್ಷಕ್ಕೆ ಬಹುಮತ ಸಿಗುವುದಿಲ್ಲ. ನರೇಂದ್ರ ಮೋದಿಜಿಯೇ ಮತ್ತೆ ಪ್ರಧಾನಿ ಆಗಲಿದ್ದಾರೆ. ಕಳೆದ ಸಾರಿಗಿಂತ ಹೆಚ್ಚು ಮೆಜಾರಿಟಿ ಬರಲಿದೆ. ಆದರೆ, ಕಾಂಗ್ರೆಸ್ಸಿನೊಳಗೆ ಪ್ರಿಯಾಂಕ ಮತ್ತು ರಾಹುಲ್ ಗಾಂಧಿಯ ನೇತೃತ್ವವನ್ನು ಒಪ್ಪುವುದಿಲ್ಲ ಎಂಬ ಸಂದೇಶವನ್ನು ಸಿದ್ದರಾಮಯ್ಯನವರು ವಿಶ್ವನಾಥ್ ಮೂಲಕ ಕೊಟ್ಟಿದ್ದಾರೇನೋ ಎಂಬ ಅನುಮಾನ ನನ್ನದು ಎಂದು ತಿಳಿಸಿದರು. ಅರ್ಕಾವತಿ, ನೈಸ್ ವಿಚಾರದಲ್ಲಿ ತಮ್ಮ ಪ್ರಾಮಾಣಿಕತೆ ಸಾಬೀತುಪಡಿಸಲು ಅವರು ಸಕ್ರಿಯರಾಗಲಿ. 35 ಸಾವಿರ ಕೋಟಿ ಏನಾಗಿದೆ ಎಂದು ಪತ್ತೆ ಹಚ್ಚಿದರೆ ಸಾಲ ಮಾಡುವುದಾದರೂ ತಪ್ಪಬಹುದಲ್ಲವೇ? ಎಂದು ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ