ಸತೀಶ್ ಜಾರಕಿಹೊಳಿ ಜತೆ ಗುಪ್ತ್​ ಗುಪ್ತ್​ ಮಾತುಕತೆ ನಡೆಸಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್

ಮೊನ್ನೇ ಅಷ್ಟೇ ಮುಖ್ಯಮಮತ್ರಿ ಸಿದ್ದರಾಮಯ್ಯ ಅವರು ಗೌಪ್ಯವಾಗಿ ಸತೀಶ್ ಜಾರಕಿಹೊಳಿ ಹಾಗೂ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು, ಇದರ ಬೆನ್ನಲ್ಲೇ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿ ಅಲ್ಲಿಂದ ನೇರವಾಗಿ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ಇದು ರಾಜ್ಯ ಕಾಂಗ್ರೆಸ್​​ನಲ್ಲಿ ಭಾರೀ ಸಂಚಲನ ಮೂಡಿಸಿದೆ.

ಸತೀಶ್ ಜಾರಕಿಹೊಳಿ ಜತೆ ಗುಪ್ತ್​ ಗುಪ್ತ್​ ಮಾತುಕತೆ ನಡೆಸಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್
ಸತೀಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್ (ಸಂಗ್ರಹ ಚಿತ್ರ)
Edited By:

Updated on: Nov 07, 2023 | 12:29 PM

ಬೆಂಗಳೂರು, (ನವೆಂಬರ್ 07): ಕೆಲ ಕಾರಣಾಂತರಗಳಿಂದ ಮುನಿಸಿಕೊಂಡಿರುವ ಸಚಿವ ಸತೀಶ್  ಜಾರಕಿಹೊಳಿ(satish Jarkiholi) ಅವರನ್ನು ಖುದ್ದು ಡಿಕೆ ಶಿವಕುಮಾರ್ (DK Shivakumar)​ ಭೇಟಿ ಮಾಡಿ ಗೌಪ್ಯ ಮಾತುಕತೆ ನಡೆಸಿದ್ದಾರೆ. ಹೌದು..ಇಂದು (ನವೆಂಬರ್ 07) ಬೆಳಗ್ಗೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾತಕಿಹೊಳಿಯವರ ಸರ್ಕಾರಿ ನಿವಾಸಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದರು. ಬಳಿಕ ಅವರು ನೇರವಾಗಿ ದೆಹಲಿಗೆ ಹೋಗಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿದರು. ಬೆಳಗಾವಿ ರಾಜಕೀಯದಲ್ಲಿ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿರುವ ಮಧ್ಯೆ ಡಿಕೆ ಶಿವಕುಮಾರ್ ಭೇಟಿ ಕುತೂಹಲ ಮೂಡಿಸಿದೆ.

ಮಹತ್ವ ಪಡೆದುಕೊಂಡ ಡಿಕೆಶಿ-ಸತೀಶ್ ಜಾರಕಿಹೊಳಿ ಭೇಟಿ

ಕಳೆದ ವಾರ ಪರಮೇಶ್ವರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ ಬೆನ್ನಲ್ಲೇ ಅಲರ್ಟ್ ಆಗಿರುವ ಡಿಕೆ ಶಿವಕುಮಾರ್, ಸಚಿವರಾದ ಹೆಚ್​ ಸಿ ಮಹದೇವಪ್ಪ ಹಾಗೂ ಸತೀಶ್ ಜಾರಕಿಹೊಳಿಯನ್ನು ಭೇಟಿ ಮಾಡಿ ಒಳಗಿಂದೊಳಗೆ ಆಗುತ್ತಿರುವ ಗೊಂದಲಗಳನ್ನು ಮಾತುಕತೆಗಳ ಮೂಲಕ ಬಗೆಹರಿಸಿಕೊಳ್ಳಲು ನಿರ್ಧರಿಸಿದ್ದರು. ಅಲ್ಲದೇ ಮುಂದೆ 2028ರಲ್ಲಿ ನಾನು ಸಿಎಂ ಸ್ಥಾನ ಕೇಳುತ್ತೇನೆ ಎಂದು ಸತೀಶ್ ಜಾರಕಿಹೊಳಿ ಬಾಂಬ್ ಸಿಡಿಸಿದ್ದರು. ಈ ಮೂಲಕ ಜಾರಕಿಹೋಳಿ ಸಹ ಮುಂದೆ ಸಿಎಂ ರೇಸ್​ನಲ್ಲಿದ್ದೇನೆ ಎನ್ನುವ ಸಂದೇಶ ರವಾನಿಸಿದ್ದರು. ಈ ಎಲ್ಲಾ ಬೆಳವಣಿಗೆ ಮಧ್ಯೆ ಸತೀಶ್ ಜಾರಕಿಹೊಳಿ ಹಾಗೂ ಡಿಕೆ ಶಿವಕುಮಾರ್ ಭೇಟಿ ಮಹತ್ವ ಪಡೆದುಕೊಂಡಿದೆ.

ಡಿಕೆಶಿ ಭೇಟಿ ಬಗ್ಗೆ ಜಾರಕಿಹೊಳಿ ಹೇಳಿದ್ದೇನು?

ಇನ್ನು ಡಿಕೆ ಶಿವಕುಮಾರ್ ಭೇಟಿ ಬಗ್ಗೆ ಖುದ್ದು ಸತೀಶ್ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ರಾಜಕೀಯ ವಿಚಾರ ಬಗ್ಗೆ ಚರ್ಚಿಸಿದ್ದಾರೆ. ಸಂಘಟನೆ, ಎಂಪಿ ಚುನಾವಣೆ, ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆ ಮಾತುಕತೆ ಮಾಡಿದ್ದು, ಬೆಳಗಾವಿ ವಿಚಾರದಲ್ಲಿ ಮಾತಾಡುವಂತಹದ್ದು ಏನಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಕಾರ್ಯಧ್ಯಕ್ಷ ಹಾಗೂ ಕೆಲ ಜಿಲ್ಲಾಧ್ಯಕ್ಷರ ಬದಲಾವಣೆ ಸೇರಿದಂತೆ ಇನ್ನಿತರ ವಿಚಾರದ ಬಗ್ಗೆ ಚರ್ಚಿಸಲು ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ಆದ್ರೆ, ದೆಹಲಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್, ಸತೀಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us