ಕಾಂಗ್ರೆಸ್​ನಲ್ಲಿ ಹೊಗೆಯಾಡುತ್ತಿರುವ ಭಿನ್ನಮತ; ಬಿಕೆ ಹರಿಪ್ರಸಾದ್​ಗೆ ಸಚಿವ ಎಂಬಿ ಪಾಟೀಲ್ ತಿರುಗೇಟು

ಈ ವಿಚಾರವಾಗಿ ಬಿಕೆ ಹರಿಪ್ರಸಾದ್​​​ ವಿರುದ್ಧ ಸಚಿವ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದ್ದು, ಹರಿಪ್ರಸಾದ್​​ ಹಲವು ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡ್ತಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಬಿಕೆ ಹರಿಪಸ್ರಾದ್ ಪಕ್ಷಕ್ಕಿಂತ ದೊಡ್ಡವರಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್​ನಲ್ಲಿ ಹೊಗೆಯಾಡುತ್ತಿರುವ ಭಿನ್ನಮತ; ಬಿಕೆ ಹರಿಪ್ರಸಾದ್​ಗೆ ಸಚಿವ ಎಂಬಿ ಪಾಟೀಲ್ ತಿರುಗೇಟು
ಎಂಬಿ ಪಾಟೀಲ್ & ಬಿಕೆ ಹರಿಪ್ರಸಾದ್
Edited By:

Updated on: Sep 11, 2023 | 8:15 PM

ಬೆಂಗಳೂರು, ಸೆಪ್ಟೆಂಬರ್ 11: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕಾಂಗ್ರೆಸ್​​ನ ಹಿರಿಯ ನಾಯಕ ಬಿಕೆ ಹರಿಪ್ರಸಾದ್ (BK Hariprasad) ವಾಗ್ದಾಳಿ ಮುಂದುವರಿಸಿರುವುದು ಪಕ್ಷದಲ್ಲಿ ಆಂತರಿಕ ಭಿನ್ನಮತ ಹೆಚ್ಚಾಗುವ ಸುಳಿವು ನೀಡಿದೆ. ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿರುವ ಹರಿಪ್ರಸಾದ್ ಅವರಿಗೆ ಇದೀಗ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ (MB Patil) ಬಹಿರಂಗವಾಗಿಯೇ ತಿರುಗೇಟು ನೀಡಿದ್ದಾರೆ. ಬಿಕೆ ಹರಿಪ್ರಸಾದ್ ಅವರು ಪಕ್ಷಕ್ಕಿಂತ ದೊಡ್ಡವರಲ್ಲ ಎಂದು ಎಂಬಿ ಪಾಟೀಲ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಹರಿಪ್ರಸಾದ್ ಅವರು ಕಳೆದ ಕೆಲವು ದಿನಗಳಿಂದಲೂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದು, ಶನಿವಾರ ಈಡಿಗ, ಬಿಲ್ಲವ, ನಾಮಧಾರಿ, ದೀವರು ಮತ್ತು ಅತಿ ಹಿಂದುಳಿದ ವರ್ಗಗಳ ಬೃಹತ್​​ ಸಮಾವೇಶ ಆಯೋಜಿಸಿ ಶಕ್ತಿ ಪ್ರದರ್ಶನ ಮಾಡಿದ್ದರು.

ಈ ವಿಚಾರವಾಗಿ ಬಿಕೆ ಹರಿಪ್ರಸಾದ್​​​ ವಿರುದ್ಧ ಸಚಿವ ಎಂಬಿ ಪಾಟೀಲ್ ವಾಗ್ದಾಳಿ ನಡೆಸಿದ್ದು, ಹರಿಪ್ರಸಾದ್​​ ಹಲವು ವರ್ಷಗಳಿಂದ ಪಕ್ಷದಲ್ಲಿ ಕೆಲಸ ಮಾಡ್ತಿದ್ದಾರೆ. ಮುಖ್ಯಮಂತ್ರಿ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುವುದು ಅವರಿಗೆ ಶೋಭೆ ತರುವುದಿಲ್ಲ. ಅವರು ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ನೇರ ಸಂಪರ್ಕದಲ್ಲಿ ಇದ್ದಾರೆ. ಏನಾದರೂ ಇದ್ದರೆ ವರಿಷ್ಠರ ಬಳಿಯೇ ನೇರವಾಗಿ ಹೇಳಬಹುದು. ಅದುಬಿಟ್ಟು ಹೀಗೆ ಮಾತಾಡೋದು ಅವರಿಗೆ ಶೋಭೆ ತರುವಂಥದ್ದಲ್ಲ ಎಂದು ಹೇಳಿದ್ದಾರೆ.

ಬಿಕೆ ಹರಿಪಸ್ರಾದ್ ಪಕ್ಷಕ್ಕಿಂತ ದೊಡ್ಡವರಲ್ಲ. ನಾನೇ ಆಗಲಿ, ಸಿದ್ದರಾಮಯ್ಯ ಅವರಾಗಲಿ ಯಾರೂ ಪಕ್ಷಕ್ಕಿಂತ ದೊಡ್ಡವರಲ್ಲ. ಏನೇ ಇದ್ದರೂ ಪಕ್ಷದ ಚೌಕಟ್ಟಿನಲ್ಲಿ ಚರ್ಚಿಸಲಿ ಎಂದು ಎಂಬಿ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಧನ್ಯವಾದ: ಸಿಎಂ ವಿರುದ್ಧ ಬಿಕೆ ಹರಿಪ್ರಸಾದ್ ವ್ಯಂಗ್ಯ ​

ಹರಿಪ್ರಸಾದ್​ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಎಲ್ಲವನ್ನೂ ಗಮನಿಸುತ್ತಿದೆ. ಪಕ್ಷದ ವೇದಿಕೆಯಲ್ಲಿ ಏನು ತೀರ್ಮಾನ ಮಾಡಬೇಕೋ ಮಾಡ್ತಾರೆ. ಹರಿಪ್ರಸಾದ್ ಅವರನ್ನು ಕರೆದು ಮಾತನಾಡುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಸ್ವಜಾತಿ ಪ್ರೇಮ ಆರೋಪ ಮಾಡಿದ್ದ ಹರಿಪ್ರಸಾದ್, ಹಿಂದುಳಿದ ವರ್ಗದವರನ್ನು ಮುಖ್ಯಮಂತ್ರಿ ಕಡೆಗಣಿಸಿದ್ದಾರೆ ಎಂದು ದೂರಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹರಿಪ್ರಸಾದ್, ನನ್ನನ್ನು ಮಂತ್ರಿ ಮಾಡದಿದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದು ವ್ಯಂಗ್ಯವಾಗಿ ಅಸಮಾಧಾನ ಹೊರಹಾಕಿದ್ದರು.

ಹರಿಪ್ರಸಾದ್​ ಎಲ್ಲೂ ಸಿಎಂ ಸಿದ್ದರಾಮಯ್ಯ ಹೆಸರು ಹೇಳಿಲ್ಲ; ಅಜಯ್ ಸಿಂಗ್

ಬಿಕೆ ಹರಿಪ್ರಸಾದ್​ ಹೇಳಿಕೆಗಳನ್ನು ಗಮನಿಸಿದ್ದೇನೆ. ಅವರು ಎಲ್ಲೂ ಸಿಎಂ ಸಿದ್ದರಾಮಯ್ಯ ಹೆಸರು ಹೇಳಿಲ್ಲ. ಸಣ್ಣ ಸಮುದಾಯದ ಬಗ್ಗೆ ಬಿಕೆ ಹರಿಪ್ರಸಾದ್​​ ಹೇಳಿಕೆ ನೀಡಿದ್ದಾರೆ. ಸ್ವಲ್ಪ ಸಮಸ್ಯೆ ಇದ್ದೇ ಇರುತ್ತೆ, ಪಕ್ಷದ ವೇದಿಕೆಯಲ್ಲಿ ಮಾತಾಡಬೇಕು ಎಂದು ಕಲಬುರಗಿಯಲ್ಲಿ ಕೆಕೆಆರ್​​ಡಿಬಿ ಅಧ್ಯಕ್ಷ ಡಾ ಅಜಯ್​ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:55 pm, Mon, 11 September 23

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us