ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು ಎಂದ ಡಿಕೆ ಶಿವಕುಮಾರ್; ಡಿಸಿಎಂ ಹೇಳಿಕೆಯ ಮರ್ಮವೇನು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್

Updated on: Jun 28, 2023 | 2:46 PM

ಬೆಂಗಳೂರು: ಪ್ರತಿಪಕ್ಷಗಳ ಟೀಕೆ, ವಿರೋಧ ಹಾಗೂ ಅಪಪ್ರಚಾರಗಳಿಗೆ ಮಣಿದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಸಚಿವ ಕೆಜೆ ಜಾರ್ಜ್ ಉಕ್ಕಿನ ಸೇತುವೆ (Steel Flyover) ಯೋಜನೆಯನ್ನು ಕೈಬಿಟ್ಟಿದ್ದರು. ಯೋಜನೆ ಜಾರಿಗೆ ಸಿದ್ದರಾಮಯ್ಯ ಹೆದರಿದ್ದರು. ನಾನಾಗಿದ್ದರೆ ಯೋಜನೆ ಜಾರಿ ಮಾಡಿಯೇ ಮಾಡುತ್ತಿದ್ದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ. ಜತೆಗೆ, ಅಂಥ ಇನ್ನಷ್ಟು ಯೋಜನೆಗಳನ್ನು ಈ ಬಾರಿ ಜಾರಿ ಮಾಡಲಿದ್ದೇವೆ. ಪ್ರತಿಭಟಿಸುವವರು ಸಜ್ಜಾಗಲಿ ಎಂದು ಪ್ರತಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

ನಾಡಪ್ರಭು ಕೆಂಪೇಗೌಡ ಜನ್ಮ ದಿನಾಚರಣೆ ಸಂದರ್ಭ ವಿಧಾನಸೌಧದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಉಕ್ಕಿನ ಸೇತುವೆ ಯೋಜನೆ ಜಾರಿಗೆ ಸಿದ್ದರಾಮಯ್ಯ ಅವರಲ್ಲಿ ಅಳುಕಿತ್ತು ಎಂದು ಹೇಳಿದ್ದಾರೆ.

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಅದು ತೀವ್ರ ಟೀಕೆಗೆ ಒಳಗಾಗಿತ್ತು. ಸಿದ್ದರಾಮಯ್ಯ ಹಾಗೂ ಕೆಜೆ ಜಾರ್ಜ್ (ಅಂದಿನ ಬೆಂಗಳೂರು ಅಭಿವೃದ್ಧಿ ಸಚಿವ) ಹೆದರಿ ಯೋಜನೆಯನ್ನು ಕೈಬಿಡುವಂತೆ ಕೇಳಿಕೊಂಡರು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಒಂದು ವೇಳೆ ನಾನೇನಾದರೂ ಆಡಳಿತದ ಚುಕ್ಕಾಣಿ ಹಿಡಿದಿದ್ದರೆ ಏನು ಮಾಡಬೇಕೋ ಅದನ್ನು ಮಾಡಿಯೇ ಬಿಡುತ್ತಿದ್ದೆ ಎಂದು ಅವರು ಹೇಳಿದ್ದಾರೆ. ನಾವು ಕೆಲಸದ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ. ನಾವು ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು. ಪ್ರತಿಮೆಯೂ ಬೇಕು ಅಭಿವೃದ್ಧಿ ಕೆಲಸಗಳೂ ಆಗುತ್ತಿರಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಈ ಮೂಲಕ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಸಂದೇಶ ನೀಡಿದ್ದಾರೆ ಎಂದೇ ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us