ಕಾಂಗ್ರೆಸ್​ ಸರ್ಕಾರದ ವಿರುದ್ಧ ಆ 23ರಂದು ಬೃಹತ್​ ಪ್ರತಿಭಟನೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಆಗಸ್ಟ್ 23 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕಾಂಗ್ರೆಸ್​ ಸರ್ಕಾರದ ವಿರುದ್ಧ ಆ 23ರಂದು ಬೃಹತ್​ ಪ್ರತಿಭಟನೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌
Edited By:

Updated on: Aug 19, 2023 | 3:24 PM

ಬೆಂಗಳೂರು, ಆಗಸ್ಟ್​ 19: ಗುತ್ತಿಗೆದಾರರ ಕಮಿಷನ್​, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್​ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ  ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶನಿವಾರ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸರ್ಕಾರ ಭ್ರಷ್ಟಾಚಾರ, ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಕಾಂಗ್ರೆಸ್​ನ ಪಂಚ ಯೋಜನೆಗಳು ಕೇವಲ ಹೆಸರಿಗೆ ಮಾತ್ರ. ಕೊಟ್ಟ ಭರವಸೆಯನ್ನು ಈಡೇರಿಸಲು ಅವರಿಂದ ಸ್ಯಾಧ್ಯವಾಗಿಲ್ಲ ಎಂದು ಹೇಳಿದರು.

ಮೂರು ತಿಂಗಳಲ್ಲಿ ಕಾಂಗ್ರೆಸ್​ ಸರ್ಕಾರದ ವಿರುದ್ಧ ಜನರು ಬೇಸತ್ತು ಹೋಗಿದ್ದಾರೆ. ತಮ್ಮ ಗ್ಯಾರಂಟಿ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕವಾಗಿ ಹಿಂದಕ್ಕೆ ಕೊಂಡೊಯ್ಯುತ್ತಿದ್ದಾರೆ. ಪ್ರಮುಖವಾಗಿ ಈ ಸರ್ಕಾರದಲ್ಲಿ ಡಿಕ್ಟೇಟರ್ ಶಿಪ್​ ನಡವಳಿಕೆ ಎದ್ದು ಕಾಣುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿಯ ಯಾವುದೇ ಶಾಸಕರು ಪಕ್ಷವನ್ನು ತೊರೆಯುವುದಿಲ್ಲ

ಶಾಸಕರು ಬಿಜೆಪಿ ಪಕ್ಷ ತೊರೆಯುತ್ತಾರೆ ವಿಚಾರವಾಗಿ ಅವರು ಮಾತನಾಡಿ, ಬಿಜೆಪಿಯ ಯಾವುದೇ ಶಾಸಕರು ಪಕ್ಷವನ್ನು ತೊರೆಯುವುದಿಲ್ಲ. ಸ್ಥಳೀಯವಾಗಿ ಕೆಲವು ಸಮಸ್ಯೆಗಳಿವೆ. ನಾವು ಇದನ್ನು ರಾಜ್ಯ ಅಧ್ಯಕ್ಷರ ಗಮನಕ್ಕೆ ತಂದಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಚಿಕ್ಕಮಗಳೂರು: ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಬಿಡುಗಡೆ ; ರಾಜ್ಯದ ಜನರನ್ನು ಬಲಿ ಕೊಡುವ ಕೆಲಸ ಸರ್ಕಾರ ಮಾಡ್ತಿದೆ ಎಂದ ಶೋಭಾ ಕರಂದ್ಲಾಜೆ

ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಕಾಂಗ್ರೆಸ್ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತವನ್ನು ಒಳಗೊಂಡಿದೆ. ತಮ್ಮದೇ ಶಾಸಕರು ದಂಗೆ ಎದ್ದಿದ್ದಾರೆ ಎಂಬ ಸತ್ಯವನ್ನು ಮರೆಮಾಚಲು ಅವರು ಪಕ್ಷಾಂತರ ಬಗ್ಗೆ ಸುಳ್ಳು ಕಥೆಗಳನ್ನು ಕಟ್ಟುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅಸಮಾಧಾನಗೊಂಡ ಶಾಸಕರನ್ನು ಸಮಾಧಾನಿಸುವ ಜವಾಬ್ದಾರಿ ಮಾಜಿ ಸಿಎಂ ಬೊಮ್ಮಾಯಿ‌ ಹೆಗಲಿಗೆ

ಭಾರತೀಯ ಜನತಾ ಪಾರ್ಟಿ ಶಾಸಕರು ಅಸಮಾಧಾನಗೊಂಡ ವಿಚಾರವಾಗಿ ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಜೊತೆ ಮಾಜಿ ಸಿಎಂ ಬೊಮ್ಮಾಯಿ ಸಮಾಲೋಚನೆ ಮಾಡಿದ್ದಾರೆ. ಶಾಸಕರ ಅಸಮಾಧಾನ ಕುರಿತು ವರಿಷ್ಠರ ಗಮನಕ್ಕೆ ತರಲು ಚಿಂತನೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಆ.21 ರಂದು ಬಿಜೆಪಿ ಪ್ರತಿಭಟನೆ, ಇದು ರೈತ ಪರ ಹೋರಾಟ ಎಂದ ಸಂಸದೆ ಸುಮಲತಾ

ಅಸಮಾಧಾನಿತ ಶಾಸಕರಾದ S.T.ಸೋಮಶೇಖರ್, ಶಿವರಾಂ ಹೆಬ್ಬಾರ್​ ಇಬ್ಬರನ್ನೂ​ ಸಮಾಧಾನಿಸುವ ಜವಾಬ್ದಾರಿ ಸದ್ಯ ಬೊಮ್ಮಾಯಿ‌ ಹೆಗಲ ಮೇಲೆ ಇದೆ. ಈ ಹಿನ್ನೆಲೆ ಇನ್ನೆರಡು ದಿನಗಳಲ್ಲಿ ಉಭಯ ಶಾಸಕರು ಬೊಮ್ಮಾಯಿ‌ ಭೇಟಿ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:23 pm, Sat, 19 August 23

TV9 Web

TV9 Kannada

Read More
Follow Us