ಕಾಂಗ್ರೆಸ್​ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ: ಬಸವರಾಜ ಬೊಮ್ಮಾಯಿ ವಾಗ್ದಾಳಿ

| Updated By: ವಿವೇಕ ಬಿರಾದಾರ

Updated on: Oct 07, 2023 | 1:47 PM

ಕುಡಿಯುವ ನೀರಿನ ಸಮಸ್ಯೆಗೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರಕ್ಕೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ನಿಮ್ಮ ಬಳಿ ವಿಕೋಪ ನಿಧಿ ಈಗಾಗಲೇ ಇದೆ. ಕೂಡಲೇ ಅದನ್ನು ಬಿಡುಗಡೆ ಮಾಡಿ. ಆಮೇಲೆ ಕೇಂದ್ರದಿಂದ ತೆಗೆದುಕೊಳ್ಳಿ, ನಾವು ನಿಮ್ಮ ಜೊತೆ ಇದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್​ ಸರ್ಕಾರ ರೈತರ ಪಾಲಿಗೆ ಜೀವಂತವಿಲ್ಲ: ಬಸವರಾಜ ಬೊಮ್ಮಾಯಿ ವಾಗ್ದಾಳಿ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
Follow us on

ಹುಬ್ಬಳ್ಳಿ ಅ.07: ರಾಜ್ಯದಲ್ಲಿ ಬರ ಆವರಿಸಿದೆ. ಬರ (Drought) ಪರಿಹಾರವನ್ನು ನಾವು ಸಮರ್ಥವಾಗಿ ನೀಡುತ್ತೇವೆ ಅಂತ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹೇಳಿದ್ದಾರೆ. ಬರೀ ಹೇಳಿಕೆಯಲ್ಲಿ ಇವರ ಸರ್ಕಾರ ಆಡಳಿತ ನಡಿತಾ ಇದೆ. ರಾಜ್ಯದಲ್ಲಿ ಬರಗಾಲ ಆವರಿಸಿ ಮೂರು ತಿಂಗಳಾಯಿತು. ಮುಂಗಾರು ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಇಷ್ಟೆಲ್ಲಾ ಆದರೂ ಕೂಡ ಸರ್ಕಾರ ನಯಾ ಪೈಸೆ ಬಿಡುಗಡೆ ಮಾಡಿಲ್ಲ. ಸರ್ಕಾರ ಜೀವಂತ ಇದೆಯೋ ಇಲ್ಲವೋ ಎಂಬುವುದು ಇಂತಹ ಸಂಕಷ್ಟದಲ್ಲಿ ಗೊತ್ತಾಗುತ್ತೆ. ಈ ಸರ್ಕಾರ ರೈತರ ಪಾಲಿಗೆ ಜೀವಂತ ಇಲ್ಲ ಅನ್ನೋದು ಸ್ಪಷ್ಟವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ಮಾಡಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕುಡಿಯುವ ನೀರಿನ ಸಮಸ್ಯೆಗೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರಕ್ಕೆ ಬೊಟ್ಟು ಮಾಡಿ ತೋರಿಸುತ್ತಿದ್ದಾರೆ. ನಿಮ್ಮ ಬಳಿ ವಿಕೋಪ ನಿಧಿ ಈಗಾಗಲೇ ಇದೆ. ಕೂಡಲೇ ಅದನ್ನು ಬಿಡುಗಡೆ ಮಾಡಿ. ಆಮೇಲೆ ಕೇಂದ್ರದಿಂದ ತೆಗೆದುಕೊಳ್ಳಿ, ನಾವು ನಿಮ್ಮ ಜೊತೆ ಇದ್ದೇವೆ. ನಮ್ಮ ಕಾಲದಲ್ಲಿ ಪ್ರವಾಹ ಬಂತು, ನಾವು ಕೇಂದ್ರಕ್ಕಾಗಿ ಕಾಯುತ್ತಾ ಕೂರಲಿಲ್ಲ. ಹೇಳಿಕೆಯಿಂದ ಬರಗಾಲ ಪರಿಹಾರ ಆಗೋದಿಲ್ಲ ಎಂದು ಹರಿಹಾಯ್ದರು.

ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಎಡವಟ್ಟು ಮಾಡಿಕೊಂಡು ಬರುತ್ತಿದೆ. ವರ್ಗಾವಣೆ ವಿಷಯದಲ್ಲಿ ಬಹಳಷ್ಟು ಅಸಮಾಧಾನವಿದೆ. ಎಲ್ಲಾ ಸಮಾಜಕ್ಕೂ ನ್ಯಾಯ ಕೊಡುತ್ತೇವೆ ಅಂತ ಹೇಳಿದರು. ಆದರೆ ಅದು ಆಗಿಲ್ಲ. ಬೇರೆ ಬೇರೆ ರೂಪದಲ್ಲಿ ಭ್ರಷ್ಟಾಚಾರ ಹೊರಗೆ ಬರುತ್ತಿದೆ. ಲಿಂಗಾಯತ ಅಧಿಕಾರಿಗಳ ಕಡೆಗಣನೆ ಬಗ್ಗೆ ಶಾಮನೂರು ಶಿವಶಂಕರಪ್ಪನವರು ಎತ್ತಿದಂತಹ ಪ್ರಶ್ನೆಗಳಿಗೆ ಸಿಎಂ ಉತ್ತರ ಕೊಡಬೇಕು. ಉತ್ತರ ನೀಡುವವರೆಗೂ ಆಡಳಿತದ ಮೇಲೆ ದುಷ್ಪರಿಣಾಮ ಬೀರುತ್ತಿರುತ್ತದೆ. ಜಾತಿಯ ಕರಿ ನೆರಳು ಬೀಳುವಂತದ್ದು, ಆಡಳಿತದ ಒಳ್ಳೆಯ ಲಕ್ಷಣ ಅಲ್ಲ. ಮುಖ್ಯಮಂತ್ರಿಗಳು ಎಷ್ಟು ದಿವಸ ಇದನ್ನು ಮುಂದುವರಿಸಿಕೊಂಡು ಹೋಗುತ್ತಾರೆ ಅಷ್ಟು ಕೆಟ್ಟ ಹೆಸರು ಬರುತ್ತೆ ಎಂದು ಕಿವಿಮಾತು ಹೇಳಿದರು.

ಇದನ್ನೂ ಓದಿ: ಬರಗಾಲದಿಂದ ತತ್ತರಿಸಿದ್ದ ಅನ್ನದಾತನಿಗೆ ಬೆಲೆ ಕುಸಿತದ ಶಾಕ್; ಸರ್ಕಾರದ ನೆರವಿಗೆ ಆಗ್ರಹ

ಜಾತಿಗಣತಿ ಬಹಿರಂಗ ಪಡಿಸುವ ವಿಚಾರವಾಗಿ ಮಾತನಾಡಿದ ಅವರು ನಾವು 2014-15 ರಲ್ಲಿ ಶೈಕ್ಷಣಿಕ ಮತ್ತು ಆರ್ಥಿಕತೆಯ ಗಣತಿಗೆ ಆಜ್ಞೆ ನೀಡಿದ್ದೇವೆ. ಎಲ್ಲೂ ಕೂಡ ಜಾತಿ ಗಣತಿ ಮಾಡಲು ಹೇಳಿರಲಿಲ್ಲ. ಎಲ್ಲರಿಗೂ ಕೂಡ ಗೊತ್ತಿದೆ ಇದು ಜಾತಿಗಣತಿಯಲ್ಲ ಎಂದರು.

ಶಿವಮೊಗ್ಗ ಗಲಭೆ ವಿಚಾರವಾಗಿ ಮತಾನಾಡಿದ ಅವರು ಅಧಿಕಾರಕ್ಕೆ ಬಂದಾಗೆಲ್ಲ ಕಾಂಗ್ರೆಸ್​ಗೆ​ ಆಡಳಿತವನ್ನು ಸುಸೂತ್ರವಾಗಿ ನಡೆಸಲು ಆಗಲ್ಲ. ಒಂದು ವರ್ಗವನ್ನು ಪೊಲೀಸರು ಮುಟ್ಟಬಾರದು ಅಂತ ಪರೋಕ್ಷವಾಗಿ ಸಂದೇಶ ಬೇಕಾದಷ್ಟಿದೆ. ಸಮಾಜಘಾತಕ ಶಕ್ತಿಗಳಿಗೆ ಕಾನೂನು, ಪೋಲಿಸ್, ಸರ್ಕಾರದ ಭಯವಿಲ್ಲ. ಕೋಲಾರದಲ್ಲಿ ಘಟನೆ ನಡೆದಿತ್ತು, ಹೀಗಾಗಿ ಪೂರ್ವ ಬಂದೋಬಸ್ತ್ ಮಾಡಬೇಕಿತ್ತು. ಈದ್ ಮಿಲಾದ್ ಮೆರವಣಿಗೆಯಲ್ಲಿ ಬಂದೋಬಸ್ತ್ ಯಾಕೆ ಮಾಡಲಿಲ್ಲ? ಎಂದು ಪ್ರಶ್ನಿಸಿದರು.

ಅಭಿವೃದ್ಧಿಗಳಿಗೆ ಹಣ ಬಿಡಿಗಡೆ ವಿಚಾರವಾಗಿ ಮಾತನಾಡಿದ ಅವರು ಆಸ್ಪತ್ರೆ ಶಾಲೆ ರಸ್ತೆ ನಿರ್ವಹಣೆಗೂ ಹಣ ಬಿಡುಗಡೆ ಮಾಡಿಲ್ಲ. ಇಂತಹ ದರಿದ್ರ ಸ್ಥಿತಿ ಸರ್ಕಾರಕ್ಕೆ ಬಂದಿದೆ. ಗಲಭೆ ಕೋರರ ಬಿಡುಗಡೆಗೆ ಉಪಮುಖ್ಯಮಂತ್ರಿಗಳು ಪತ್ರ ಬರೆದ ವಿಚಾರವಾಗಿ ಮಾತನಾಡಿದ ಅವರು ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಅಪರಾಧಿಗಳನ್ನು ಬಿಡುಗಡೆ ಮಾಡಿ ಅಂತ ಹೇಳುವಂತದ್ದು, ತುಷ್ಟಿಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಆರೋಪಿಸಿದರು.

ಹೊಸ ಮದ್ಯದ ಅಂಗಡಿ ತೆಗೆಯುವ ರಾಜ್ಯ ಸರ್ಕಾರದ ಚಿಂತನೆ ವಿಚಾರವಾಗಿ ಮಾತನಾಡಿದ ಅವರು ನಾವು ಅದನ್ನು ಮೊದಲೇ ವಿರೋಧ ಮಾಡಿದ್ದೇವೆ, ಜನ ಕೂಡ ವಿರೋಧ ಮಾಡಿದ್ದಾರೆ. ಗೃಹಲಕ್ಷ್ಮಿ ಅಂತ ದುಡ್ಡು ಕೊಟ್ಟು, ಅದರ ಎರಡು ಪಟ್ಟು ಆ ಸಂಸಾರದಿಂದ ಕಿತ್ತುಕೊಳ್ಳುವಂಥ ಕೆಲಸ ಸರ್ಕಾರ ಮಾಡುತ್ತಿದೆ. ಸರ್ಕಾರ ಅಬಕಾರಿ ನೀತಿಗಳಲ್ಲಿ ಮುಚ್ಚಿ ಹಾಕುವಂತಹ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿಗಳು ಮದ್ಯದ ಅಂಗಡಿಗಳಿಗೆ ಅನುಮತಿ ಕೊಡಲ್ಲ ಅಂತಾರೆ, ಆದರೆ ಉಪಮುಖ್ಯಮಂತ್ರಿಗಳು ಮಾಡಬೇಕಾಗುತ್ತದೆ ಅಂತಾರೆ. ನಿರ್ಣಯದಲ್ಲಿ ಗೊಂದಲದ ಗೂಡಾಗಿದೆ. ಮುಖ್ಯಮಂತ್ರಿಗಳು ಮಾಡುವಂತಹ ಎಲ್ಲ ನಿರ್ಣಯಗಳಿಗೆ ಉಪಮುಖ್ಯಮಂತ್ರಿಗಳು ವಿರೋಧ ಮಾಡುತ್ತಿದ್ದಾರೆ. ಈ ಸರ್ಕಾರ ಜನರಿಗಂತೂ ಒಳ್ಳೇದು ಮಾಡೋದಿಲ್ಲ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ