AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಸತ್ಯ ಒಪ್ಪಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು!

HD Kumaraswamy Illegal Electricity Connection : ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕಾಂಗ್ರೆಸ್​ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ. ಇನ್ನು ಇದೀಗ ಇದಕ್ಕೆ ಸ್ವತಃ ಹೆಚ್​ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು, ಸತ್ಯ ಒಪ್ಪಿಕೊಂಡಿದ್ದಾರೆ. ಅಲ್ಲದೇ ಈ ಬಗ್ಗೆ ಸ್ಪಷ್ಟನೆಯನ್ನೂ ಸಹ ಕೊಟ್ಟಿದ್ದಾರೆ. ಹಾಗಾದ್ರೆ ಅವರು ಏನೆಲ್ಲಾ ಹೇಳಿದ್ದಾರೆ ಎನ್ನುವ ವಿವರ ಈ ಕೆಳಗಿನಂತಿದೆ.

ಮನೆ ದೀಪಾಲಂಕಾರಕ್ಕೆ ಅಕ್ರಮ ವಿದ್ಯುತ್ ಸಂಪರ್ಕ: ಸತ್ಯ ಒಪ್ಪಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು!
ರಮೇಶ್ ಬಿ. ಜವಳಗೇರಾ
|

Updated on:Nov 14, 2023 | 2:46 PM

Share

ಬೆಂಗಳೂರು, (ನವೆಂಬರ್ 14): ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರ ನಿವಾಸದ ದೀಪಾಲಂಕಾರಕ್ಕೆ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆಯಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅಲ್ಲದೇ ಈ ಬಗ್ಗೆ ಕಾಂಗ್ರೆಸ್​​ ವಿಡಿಯೋವನ್ನು ಸಹ ಬಿಡುಗಡೆ ಮಾಡಿದೆ. ಇನ್ನು ಇದಕ್ಕೆ ಸ್ವತಃ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಖಾಸಗಿ ಡೆಕೋರೇಟರ್ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ಅದಕ್ಕೆ ದಂಡ ಕಟ್ಟುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್​ ಮಾಡಿರುವ ಕುಮಾರಸ್ವಾಮಿ, ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ(ನವೆಂಬರ್ 13) ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೆಚ್​ಡಿಕೆ ನಿವಾಸದ ದೀಪಾಲಂಕಾರಕ್ಕೆ ವಿದ್ಯುತ್ ಕಳ್ಳತನ: ಗೃಹಜ್ಯೋತಿಗೆ ಒಂದು ಅರ್ಜಿ ಹಾಕಬಹುದಿತ್ತಲ್ಲ ಎಂದ ಕಾಂಗ್ರೆಸ್

ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ. ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ. ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಎಕ್ಸ್​ನಲ್ಲಿ (ಟ್ವಿಟ್ಟರ್) ಬರೆದುಕೊಂಡಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Tue, 14 November 23