ಡಿಕೆ ಸುರೇಶ್ ದೇಶ ವಿಭಜನೆ ಹೇಳಿಕೆ: ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದ ಕುಮಾರಸ್ವಾಮಿ

| Updated By: ಗಣಪತಿ ಶರ್ಮ

Updated on: Feb 02, 2024 | 1:07 PM

DK Suresh Separate Nation Remark: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ದೇಶ ವಿಭಜನೆ ಹೇಳಿಕೆಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟು ಪಡೆಯಬೇಕೇ ವಿನಃ ಸಂಘರ್ಷದಿಂದ ಸಾಧ್ಯವಿಲ್ಲ. ಇಂಥ ಸಂಸದರಿಂದ ಹೆಚ್ಚೇನು ನಿರೀಕ್ಷೆ ಮಾಡಲಾಗದು ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಡಿಕೆ ಸುರೇಶ್ ದೇಶ ವಿಭಜನೆ ಹೇಳಿಕೆ: ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತೆ ಎಂದ ಕುಮಾರಸ್ವಾಮಿ
ಕುಮಾರಸ್ವಾಮಿ
Follow us on

ರಾಮನಗರ, ಫೆಬ್ರವರಿ 2: ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್​ (DK Suresh) ದೇಶ ವಿಭಜನೆ (Separate Nation Remark) ಹೇಳಿಕೆ ಬಗ್ಗೆ ಬಿಡದಿಯಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ. ಇಂಥವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಹೇಳಿದ್ದಾರೆ.

ಸಂಸದ ಡಿಕೆ ಸುರೇಶ್ ನಿನ್ನೆಯ ದಿನ (ಫೆಬ್ರವರಿ 1) ದೇಶ ವಿಭಜನೆ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ ಮಾಡುತ್ತಿದೆ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಬುದ್ಧ ಹೇಳಿಕೆ. ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ. ಒಂದುವೇಳೆ ವಿಭಜನೆ ಆಯ್ತು ಅಂತ ಇಟ್ಟುಕೊಳ್ಳಿ. ತಮಿಳುನಾಡಿನಿಂದ ಕಾವೇರಿ ವಿಚಾರದಲ್ಲಿ ನ್ಯಾಯ ಪಡೆಯಲು ಸಾಧ್ಯವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಹಣ ಹಂಚಿಕೆ ವಿಧಾನ ಮೋದಿ ಶುರುಮಾಡಿದ್ದಲ್ಲ: ಹೆಚ್​ಡಿಕೆ

ದೇಶದ ಮೊದಲನೇ ಬಜೆಟ್ 174 ಕೋಟಿ ಇತ್ತು. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಹಣಕಾಸು ಆಯೋಗಗಳನ್ನು ಮಾಡಿಕೊಂಡಿದ್ದೇವೆ. ಅವರು ಎಲ್ಲಾ ರಾಜ್ಯಕ್ಕೂ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂಬ ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬುದನ್ನು ನೋಡಿಕೊಂಡು ಹಣ ಹಂಚುತ್ತಾರೆ. ಈ ಹಂಚಿಕೆ ವ್ಯವಸ್ಥೆಯನ್ನು ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿತ್ತೇ ವಿನಹ ಪ್ರಧಾನಿ ಮೋದಿ ಬಂದು ಶುರು ಮಾಡಿದ್ದಲ್ಲ ಎಂದು ಅವರು ಹೇಳಿದ್ದಾರೆ.

ಸಂಘರ್ಷದಿಂದ ಹಣ ಪಡೆಯಲು ಸಾಧ್ಯವಿಲ್ಲ: ಕುಮಾರಸ್ವಾಮಿ

ಕೇಂದ್ರ ಸರ್ಕಾರದ ಮುಂದೆ ನಮ್ಮ ಬೇಡಿಕೆಗಳನ್ನು ಸಂಘರ್ಷದಿಂದ ಪಡೆಯಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಕೇಂದ್ರ ಸರ್ಕಾರದ ಮನವೊಲಿಸಿ ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ವಿವಾದದ ಕಿಡಿ: ಮುಗಿಬಿದ್ದ ಬಿಜೆಪಿ

ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಲೋಕಸಭೆ, ರಾಜ್ಯಸಭೆಯಲ್ಲಿಯೂ ಪ್ರತ್ಯೇಕ ರಾಷ್ಟ್ರ ಹೇಳಿಕೆಗೆ ಖಂಡನೆ ವ್ಯಕ್ತವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹ ದೇಶ ವಿಭಜನೆ ಕುರಿತ ಹೇಳಿಕೆಗಳನ್ನು ಒಪ್ಪಲಾಗದು ಎಂದು ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಡಿಕೆ ಸುರೇಶ್, ಜನರ ಭಾವನೆಗಳನ್ನು ಹೇಳಿದ್ದೇನೆಯೇ ಹೊರತು ಬೇರೇನೂ ಹೇಳಿಲ್ಲ ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ