AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಪ್ರಧಾನಿ ನರೇಂದ್ರ ಮೋದಿ ಅವರೇ ಇದು ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂಬ ಹ್ಯಾಷ್​ ಟ್ಯಾಗ್​ ಅಡಿ ಸಿಎಂ ಸಿದ್ದರಾಮಯ್ಯ ಟ್ವೀಟ್​ರಲ್ಲಿ ಅಭಿಯಾನ ಆರಂಭಿಸುವ ಮೂಲಕ ವಾಗ್ದಾಳಿ ಮಾಡಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ
ಗಂಗಾಧರ​ ಬ. ಸಾಬೋಜಿ
|

Updated on: Oct 28, 2023 | 9:27 PM

Share

ಬೆಂಗಳೂರು, ಅಕ್ಟೋಬರ್​​ 28: ಕೇಂದ್ರದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಪ್ರಧಾನಿ ನರೇಂದ್ರ ಮೋದಿ ಅವರೇ ಇದು ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಎಂಬ ಹ್ಯಾಷ್​ ಟ್ಯಾಗ್​ ಅಡಿ ಸಿಎಂ ಸಿದ್ದರಾಮಯ್ಯ (Siddaramaiah) ಟ್ವೀಟ್​ರಲ್ಲಿ ಅಭಿಯಾನವನ್ನೇ ಆರಂಭಿಸಿದಂತ್ತಿದೆ. ಇದಕ್ಕೆಲ್ಲಾ ಉತ್ತರ ನೀಡಿ ಎಂದು ಸಾಲು ಸಾಲು ಪ್ರಶ್ನೆಗಳ ಮೂಲಕ ವಾಗ್ದಾಳಿ ಮಾಡಿದ್ದಾರೆ.

ರಾಜ್ಯದಲ್ಲಿ ಮಳೆಕೊರತೆಯಿಂದಾಗಿ ಕೆಆರ್‌ಎಸ್, ಕಬಿನಿ, ಹೇಮಾವತಿ ಸೇರಿದಂತೆ ಬಹುತೇಕ ಜಲಾಶಯಗಳ ಒಡಲು ಬರಿದಾಗಿದೆ, ಗಾಯದ ಮೇಲೆ ಬರೆ ಎಳೆದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಲಿಂದ ಮೇಲೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸುತ್ತಲೇ ಇದೆ. ಪ್ರಧಾನಿ ಮೋದಿ ಅವರೇ, ಬರದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿತು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದ್ದ ನೀವು ಕಾವೇರಿ ವಿಚಾರದಲ್ಲಿ ಮೌನಿಯಾದದ್ದು ಯಾಕೆ ಎಂದು ಪ್ರಶ್ನಿಸಿದೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರು ನಗರದ ಅಗತ್ಯಕ್ಕೆ ತಕ್ಕಷ್ಟು ನೀರು ಒದಗಿಸುವುದು ಬಹುದೊಡ್ಡ ಸವಾಲು, ಈ ಉದ್ದೇಶಕ್ಕಾಗಿಯೇ ಸಿದ್ಧಪಡಿಸಿರುವ ಯೋಜನೆ ಮೇಕೆದಾಟು ಕೇಂದ್ರ ಸರ್ಕಾರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿದೆ. ಪ್ರಧಾನಿ ಮೋದಿ ಅವರೇ, ಕಾವೇರಿ ನಮ್ಮದು, ಮಳೆಗಾಲದಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನಮ್ಮ ಪಾಲಿನ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ಇನ್ನೆಷ್ಟು ವರ್ಷ ಕಾಯಬೇಕು?

2017ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಯೋಜನಾ ವೆಚ್ಚ ರೂ. 51,148 ಕೋಟಿ ಇದ್ದುದ್ದು ಈಗ ರೂ. 78 ಸಾವಿರ ಕೋಟಿಗೂ ಮೀರಿದೆ. ರಾಜ್ಯ ಸರ್ಕಾರ ವಾರ್ಷಿಕ ರೂ. 10,000 ದಿಂದ ರೂ.15,000 ಕೋಟಿ ಅನುದಾನ ನೀಡಿದರೂ ಯೋಜನೆ ಪೂರ್ಣಗೊಳ್ಳುವ ಹೊತ್ತಿಗೆ ಈಗಿನ ವೆಚ್ಚವೂ ದುಪ್ಪಟ್ಟಾಗಲಿದೆ. ಆದ್ದರಿಂದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ, ಶೇ.60 ಅನುದಾನವನ್ನು ಒದಗಿಸಬೇಕೆಂದು ಕನ್ನಡಿಗರು ಕೇಂದ್ರವನ್ನು ಒತ್ತಾಯಿಸುತ್ತಲೇ ಇದ್ದಾರೆ. ಪ್ರಧಾನಿ ಮೋದಿ ಅವರೇ, ಕಳೆದ ನಾಲ್ಕು ವರ್ಷ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಿಮ್ಮದೇ ಪಕ್ಷದ ಡಬ್ಬಲ್ ಇಂಜಿನ್‌ ಸರ್ಕಾರವಿತ್ತು, ಆಗಲೂ ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸದೆ ಜನರನ್ನು ಮೂರ್ಖರನ್ನಾಗಿಸಿದಿರಿ. ಹನಿ ನೀರಿಗಾಗಿ ನಾಡಿನ ರೈತರು ಇನ್ನೆಷ್ಟು ವರ್ಷ ನಿಮ್ಮ ಬಳಿ ಅಂಗಲಾಚಬೇಕು? ಈಗಲಾದರೂ ಕನ್ನಡಿಗರಿಗೆ ನ್ಯಾಯ ಒದಗಿಸುವಿರಾ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ಲಕ್ಷಾಂತರ ಎಕರೆ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ, ನೂರಾರು ಕೆರೆಗಳಿಗೆ ನೀರು ತುಂಬಿಸುವ ವಿವಿಧೋದ್ದೇಶದ ಭದ್ರಾ ಮೇಲ್ದಂಡೆ ಯೋಜನೆ ಕನ್ನಡಿಗರಿಗೆ ಗಗನ ಕುಸುಮವಾಗಿದೆ. ಯೋಜನೆಯ ಅನುಷ್ಠಾನಕ್ಕಾಗಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಘೋಷಣೆ ಮಾಡಿದ್ದ ರೂ. 5,300 ಕೋಟಿ ಅನುದಾನ ಬಜೆಟ್ ಪುಸ್ತಕಕ್ಕೆ ಸೀಮಿತವಾಯಿತೇ ಹೊರತು ಕರ್ನಾಟಕ ತಲುಪಲಿಲ್ಲ.

ಹುಬ್ಬಳ್ಳಿ – ಧಾರವಾಡ ಮತ್ತು ಸುತ್ತಮುತ್ತಲಿನ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವಾಕಾಂಕ್ಷೆಯ ಮಹದಾಯಿ ಯೋಜನೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ನೆನೆಗುದಿಗೆ ಬಿದ್ದಿದೆ. ಪ್ರಧಾನಿ ಮೋದಿ ಅವರೇ, ಮಹದಾಯಿ ಯೋಜನೆಗೆ ಪರಿಸರ ಅನುಮತಿ ನೀಡಿ, ಗೋವಾದ ಬಿಜೆಪಿ ಸರ್ಕಾರ ಯೋಜನೆಗೆ ಆಕ್ಷೇಪ ಎತ್ತದಂತೆ ಮನವೊಲಿಸಬೇಕಾದವರು ನೀವೇ ಅಲ್ಲವೇ? ಉತ್ತರ ಕರ್ನಾಟಕದ ಲಕ್ಷಾಂತರ ಕುಟುಂಬಗಳ ಕುಡಿಯುವ ನೀರಿನ ಬವಣೆ ನೀಗಿಸುವ ಮನಸು ನಿಮಗಿಲ್ಲವೇ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.