SIRನಲ್ಲಿ ನಿಯಮ ಉಲ್ಲಂಘನೆ: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ನಿಯೋಗ ದೂರು
ರಾಜ್ಯದಲ್ಲಿ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ಇಂದು ದೂರು ನೀಡಿದೆ. ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿಗೆ ದಾಖಲೆ ಸಮೇತ ದೂರು ಸಲ್ಲಿಸಿದ್ದಾರೆ.

ಮುಖ್ಯಾಂಶಗಳು
- ರಾಜ್ಯದಲ್ಲಿ SIR ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆ ಆರೋಪ
- ಚುನಾವಣಾ ಆಯೋಗಕ್ಕೆ ಪ್ರತಿಪಕ್ಷ ಬಿಜೆಪಿಯಿಂದ ದೂರು
- ಸರ್ಕಾರದ ಕುಮ್ಮಕ್ಕು ಇದೆ ಎಂದ ಬಿಜೆಪಿ
ಬೆಂಗಳೂರು, ಜುಲೈ 04: ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಕ್ಷರಶಃ ರಾಜ್ಯ ರಾಜಕಾರಣದಲ್ಲೀಗ ಜಟಾಪಟಿಗೆ ಕಾರಣವಾಗಿದೆ. SIR ಪ್ರಕ್ರಿಯೆಯಲ್ಲೇ ನಿಯಮ ಉಲ್ಲಂಘನೆ ಆಗಿರುವ ಗಂಭೀರ ಆರೋಪ ಕೇಳಿ ಬಂದಿವೆ. ಹೀಗಾಗಿ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಿಯೋಗ ದಾಖಲೆ ಸಮೇತ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಇಂದು ದೂರು (BJP) ಸಲ್ಲಿಸಲಾಗಿದ್ದು, ಮಧ್ಯಪ್ರವೇಶಿಸುವಂತೆ ಆಗ್ರಹಿಸಿದೆ.
ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ವ್ಯಾಪಕ ನಿಯಮ ಉಲ್ಲಂಘನೆ ಹಾಗೂ ವ್ಯವಸ್ಥಿತ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿಡಿಯೋ ಬಾಂಬ್ ಸಿಡಿಸಿದರೆ, ನಿನ್ನೆ ಶೋಭಾ ಕರಂದ್ಲಾಜೆ ಹಾಗೂ ಆರ್. ಅಶೋಕ್ ವಿಡಿಯೋ ಅಸ್ತ್ರ ಪ್ರಯೋಗಿಸಿದರು.
ಇದನ್ನೂ ಓದಿ: ದಾವಣಗೆರೆಯಲ್ಲಿ ಹಳ್ಳ ಹಿಡಿದ ‘ಎಸ್ಐಆರ್’ ಪ್ರಕ್ರಿಯೆ: ಮನೆ ಮನೆಗೆ ಹೋಗದೆ ದೇವಸ್ಥಾನ, ಅಂಗನವಾಡಿಯಲ್ಲೇ ಕುಳಿತ ಬಿಎಲ್ಓ
ಬಾಂಗ್ಲಾ ಪ್ರಜೆಗಳನ್ನು ಮತಪಟ್ಟಿಗೆ ಸೇರಿಸಲಾಗ್ತಿದೆ, ಮಸೀದಿಗಳಲ್ಲಿ ಟೆಂಟ್ ಹಾಕಿ ಅರ್ಜಿ ಹಂಚಲಾಗುತ್ತಿದೆ ಎಂದು ಜೆಡಿಎಸ್ ಮತ್ತು ಬಿಜೆಪಿ ನಾಯಕರ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಈ ಸಂಬಂಧ, ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದಾಖಲೆ ಸಮೇತ ದೂರು ಕೊಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ದೂರು ನೀಡಲಾಗಿದ್ದು, ಇದರಲ್ಲಿ ಸರ್ಕಾರದ ಕುಮ್ಮಕ್ಕು ಇದೆ ಎಂದು ಬಿಜೆಪಿ ಆರೋಪ ಮಾಡಿದೆ.
ಎಸ್ಐಆರ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ತಣ್ಣೀರು ಎರಚಿದೆ: ಬಿ.ವೈ.ವಿಜಯೇಂದ್ರ
ರಾಜ್ಯ ಚುನಾವಣಾ ಆಯೋಗಕ್ಕೆ ದೂರು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಚುನಾವಣಾ ಆಯೋಗದ ಸದುದ್ದೇಶದಂತೆ SIR ನಡೆಯುತ್ತಿಲ್ಲ. ಎಸ್ಐಆರ್ ಪ್ರಕ್ರಿಯೆಗೆ ರಾಜ್ಯ ಸರ್ಕಾರ ತಣ್ಣೀರನ್ನು ಎರಚಿದೆ. ರಾಜ್ಯ ಸರ್ಕಾರ ಬಿಎಲ್ಒಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಛತ್ರ, ಮಸೀದಿ, ಕಚೇರಿಯಲ್ಲಿ ಕೂರಿಸಿ ಎಸ್ಐಆರ್ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ: Karnataka SIR Row: ರಾಜ್ಯದಲ್ಲಿ SIR ಪ್ರಕ್ರಿಯೆ ಸರಿಯಾಗಿ ನಡೆಯುತ್ತಿಲ್ಲ: ಪ್ರಹ್ಲಾದ್ ಜೋಶಿ
ಕಾಂಗ್ರೆಸ್ ಶಾಸಕರು ಬಿಎಲ್ಒಗಳ ಮೇಲೆ ಒತ್ತಡ ಹೇರುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ನಿಂದ ಅಧಿಕಾರ ದುರ್ಬಳಕೆ ಆಗುತ್ತಿದೆ. ಎಲ್ಲೆಲ್ಲಿ ಲೋಪವಾಗಿದೆಯೋ ಅಲ್ಲಿ ಮತ್ತೊಮ್ಮೆ SIR ಮಾಡಬೇಕು. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ SIR ಪ್ರಕ್ರಿಯೆ ಹಾಳುಮಾಡುತ್ತಿದೆ. ಜಯನಗರದಲ್ಲಿ ಅರ್ಜಿಯಲ್ಲಿ ಕಾಂಗ್ರೆಸ್ ಮುಖಂಡರ ಫೋಟೋಗಳಿವೆ. ಛತ್ರ, ಮಸೀದಿಗಳಲ್ಲಿ ಸಾಮೂಹಿಕವಾಗಿ ಎಸ್ಐಆರ್ ನಡೆಯುತ್ತಿದೆ. ಎಸ್ಐಆರ್ ಅಕ್ರಮದ ಬಗ್ಗೆ ಆಯೋಗಕ್ಕೆ ಎಲ್ಲಾ ದಾಖಲೆ ನೀಡಿದ್ದೇವೆ ಎಂದು ಹೇಳಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:02 pm, Sat, 4 July 26




