AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಆರೋಪಿಗಳ ಮೇಲಿನ ಪ್ರಕರಣಗಳನ್ನು ವಾಪಸ್​ ಪಡೆಯುವಂತೆ ತನ್ವಿರ್​ ಪತ್ರ: ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ

ನಗರದ ಡಿಜೆ ಹಳ್ಳಿ-ಕೆಜೆ ಹಳ್ಳಿ ಸೇರಿದಂತೆ ರಾಜ್ಯದ ವಿವಿಧ ಪ್ರತಿಭಟನೆ ಹಾಗೂ ಗಲಭೆಯಲ್ಲಿ ಬಂಧಿತರಾಗಿರುವ ಅಮಾಯಕ ಯುವಕ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ ಶಾಸಕ ತನ್ವಿರ್​ ಸೇಠ್​ ಗೃಹಸಚಿವ ಡಾ. ಜಿ ಪರಮೇಶ್ವರ ಅವರಿಗೆ ಪತ್ರ ಬರೆದಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ಸಂಬಂಧ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಆರೋಪಿಗಳ ಮೇಲಿನ ಪ್ರಕರಣಗಳನ್ನು ವಾಪಸ್​ ಪಡೆಯುವಂತೆ ತನ್ವಿರ್​ ಪತ್ರ: ಸರ್ಕಾರದ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಕಿರಣ್​ ಹನಿಯಡ್ಕ
| Updated By: ವಿವೇಕ ಬಿರಾದಾರ|

Updated on:Jul 26, 2023 | 1:17 PM

Share

ಬೆಂಗಳೂರು: ನಗರದ ಡಿಜೆ ಹಳ್ಳಿ-ಕೆಜೆ ಹಳ್ಳಿ (DJ Halli Kg Halli) ಸೇರಿದಂತೆ ರಾಜ್ಯದ ವಿವಿಧ ಪ್ರತಿಭಟನೆ ಹಾಗೂ ಗಲಭೆಯಲ್ಲಿ ಬಂಧಿತರಾಗಿರುವ ಅಮಾಯಕ ಯುವಕ ಹಾಗೂ ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕಾಂಗ್ರೆಸ್ (Congress) ಶಾಸಕ ತನ್ವಿರ್​ ಸೇಠ್ (Tanveer Sait)​ ಗೃಹಸಚಿವ ಡಾ. ಜಿ ಪರಮೇಶ್ವರ (G Parameshwara) ಅವರಿಗೆ ಪತ್ರ ಬರದಿದ್ದು, ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ರಾಜ್ಯ ಬಿಜೆಪಿ (BJP) ನಾಯಕರು ಕಾಂಗ್ರೆಸ್ ಸರ್ಕಾರದ​ ವಿರುದ್ಧ ಹರಿಹಾಯ್ದಿದ್ದಾರೆ. ​ಡಿಜೆ ಹಳ್ಳಿ, ಕೆಜಿ ಹಳ್ಳಿ ಕೇಸ್ ಬಹಳ ಗಂಭೀರವಾದದ್ದು. ಪೊಲೀಸ್ ಠಾಣೆ ಸುಟ್ಟಿದ್ದಾರೆ, ಶಾಸಕನ ಮನೆ ಸುಟ್ಟಿದ್ದಾರೆ. ಇಂತಹ ಪ್ರಕರಣಗಳನ್ನು ವಾಪಸ್ ಪಡೆಯಲು ಹೋಗುತ್ತಿರುವುದು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಇವರೆಲ್ಲಾ ರಾಜ್ಯದ ವಿರುದ್ಧ ದಂಗೆ ಎದ್ದವರು. ಇಂತಹ ದುಷ್ಟ ಶಕ್ತಿಗಳಿಗೆ ಸರ್ಕಾರ ಕುಮ್ಮಕ್ಕು ಕೊಡಬಾರದು. ಸರ್ಕಾರ ಯಾವುದೇ ಕಾರಣಕ್ಕೂ ಒತ್ತಡಕ್ಕೆ ಮಣಿಯಬಾರದು. ಹೊರದೇಶಗಳ ಶಕ್ತಿಗಳ ಕುಮ್ಮಕ್ಕಿನಿಂದ ಇಂತಹ ಕೃತ್ಯಗಳು ನಡೆಯುತ್ತಿವೆ. ಸಿಎಂಗೂ ಈ ತರಹದ ಕೇಸ್​ಗಳ ವಾಪಸಾತಿಗೆ ಮನವಿ ಕೊಟ್ಟಿದ್ದಾರೆ ಅಂತ ಕೇಳಿಬಂದಿದೆ. ಸಿಎಂ ಇದರ ಬಗ್ಗೆ ಸ್ಪಷ್ಟನೆ ಕೊಡಬೇಕು. ವಿದ್ರೋಹಿ ಶಕ್ತಿಗಳ ಪರ ಸರ್ಕಾರ ನಿಲ್ಲಬಾರದು ಎಂದು ಆಗ್ರಹಿಸಿದ್ದಾರೆ.

ಡಿಜೆಹಳ್ಳಿ, ಕೆಜಿ ಹಳ್ಳಿ ಪ್ರಕರಣದ ಆರೋಪಿಗಳು ಅಮಾಯಕರಲ್ಲ

ತನ್ವೀರ್ ಶೇಠ್ ಪತ್ರಕ್ಕೆ ಗೃಹ ಸಚಿವರು ಪರಿಶೀಲಿಸಲು ಹೇಳಿದ್ದಾರೆ. ಡಿಜೆಹಳ್ಳಿ, ಕೆಜಿ ಹಳ್ಳಿ ಪ್ರಕರಣದ ಆರೋಪಿಗಳು ಅಮಾಯಕರಲ್ಲ. ಬೆಂಗಳೂರು ಎರಡು ಮೂರು ದಿನ ಹೊತ್ತಿ ಉರಿದಿತ್ತು. ಪೊಲೀಸ್ ಠಾಣೆಯೂ ಬೆಂಕಿ ಹಚ್ಚುವ ಯತ್ನ ಆಗಿತ್ತು. ಶಾಸಕರ ಮನೆಗೆ ಬೆಂಕಿ ಹಾಕಿದ್ದರು ಎಂದು ಶಿವಮೊಗ್ಗದಲ್ಲಿ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಇದನ್ನೂ ಓದಿ: ಡಿಜೆ ಹಳ್ಳಿ-ಕೆಜಿ ಹಳ್ಳಿ ಸೇರಿದಂತೆ ಇತರೆ ಹಿಂಸಾಚಾರ ಪ್ರಕರಣಗಳನ್ನು ಮರು ಪರಿಶೀಲಿಸಿ ಹಿಂಪಡೆಯುವಂತೆ ಸೂಚಿಸಿದ ಗೃಹ ಸಚಿವ

ಕಾಂಗ್ರೆಸ್​ ಜಿಹಾದಿ ಸರ್ಕಾರವೋ, ಜಿಹಾದಿ ಪೋಷಿತ ಸರ್ಕಾರವೋ?

ಕಾಂಗ್ರೆಸ್ ಸರ್ಕಾರದ್ದು ತುಷ್ಟೀಕರಣ ರಾಜಕಾರಣ ಅನ್ನೋದು ಸಾಬೀತಾಗಿದೆ. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ಸಮಾಜ ಘಾತುಕರು ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಈಗ ಆರೋಪಿಗಳನ್ನು ಅಮಾಯಕರು, ಕೇಸ್ ವಾಪಸ್ ಪಡೆಯುವಂತೆ ಶಾಸಕ ತನ್ವೀರ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದೇನು ಜಿಹಾದಿ ಸರ್ಕಾರವೋ, ಜಿಹಾದಿ ಪೋಷಿತ ಸರ್ಕಾರವೋ? ಇದು ಜಿಹಾದಿ ಸರ್ಕಾರ ಎಂದು ಇದರಿಂದ ಗೊತ್ತಾಗಲಿದೆ. ಇದು ಜಿಹಾದಿಗಳ ಸರ್ಕಾರ ಎಂಬುದು ಸ್ಪಷ್ಟವಾಗುತ್ತಿದೆ. ಜಿಹಾದಿಗಳು, ನರಹಂತಕರ ಜೊತೆ ನಾವು ಇದ್ದೇವೆ ಎಂದು ತೋರಿಸಿದ್ದಾರೆ. ಒಬ್ಬ ಶಾಸಕರ ಮನೆ ಮೇಲೆ ಹಲ್ಲೆ ಆದಾಗ ಖಂಡಿಸಿಲ್ಲ ಎಂದು ಮಾಜಿ ಸಚಿವ ಡಾ.ಅಶ್ವತ್ಥ್ ನಾರಾಯಣ ವಾಗ್ದಾಳಿ ಮಾಡಿದರು.

ಮುಸ್ಲಿಂ ಗೂಂಡಾಗಳು ಇಂತಹ ಕೃತ್ಯವೆಸಗಿದ್ದಾರೆ

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಕೋಮುಗಲಭೆಗೆ ನೇರವಾಗಿ ಸರ್ಕಾರ ಕುಮ್ಮಕ್ಕು ನೀಡಿದಂತೆ ಆಗುತ್ತೆ. ಹೀಗಾಗಿ ಸರ್ಕಾರ ಇಂತಹ ಪ್ರಕರಣಗಳನ್ನು ವಾಪಸ್ ಪಡೆಯಬಾರದು. ಮುಸ್ಲಿಂ ಗೂಂಡಾಗಳು ಇಂತಹ ಕೃತ್ಯವೆಸಗಿದ್ದಾರೆ ಎಂದು ಶಿವಮೊಗ್ಗ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Wed, 26 July 23