Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

|

Updated on: Jun 08, 2023 | 7:09 AM

ಇಂದು ಕರ್ನಾಟಕ ಬಿಜೆಪಿಯ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆಯೂ ಮಹತ್ವದ ಚರ್ಚೆಗಳು ನಡೆಯಲಿವೆ.

Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?
Follow us on

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Election Results 2023) ಹೊರಬಿದ್ದು ಒಂದು ತಿಂಗಳಾಗುವ ಹೊತ್ತಿನಲ್ಲಿ ಬಿಜೆಪಿಯು(BJPP ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಕರೆದಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್(Arun Singh) ನೇತೃತ್ವದಲ್ಲಿ ಇಂದು (ಜೂನ್ 8) ಸಂಜೆ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮುಂದೆ ಹಮ್ಮಿಕೊಳ್ಳಬೇಕಾಗಿರುವ ಕಾರ್ಯಕ್ರಮಗಳು, ಕೇಂದ್ರದ ಯೋಜನೆಗಳನ್ನು ಹೆಚ್ಚು ಹೆಚ್ಚು ಜನರಿಗೆ ತಲುಪಿಸುವ ಬಗೆ, ಜುಲೈ 3ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಅಧಿವೇಶನ ಮತ್ತಿತರ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಇದರ ಜತೆಗೆ ಮುಖ್ಯವಾಗಿ ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ವಿಧಾನ ಸಭೆ ಚುನಾವಣೆಯಲ್ಲಿ ದಯನೀಯ ಸೋಲನು ಭವಿಸಿರುವ ಬಿಜೆಪಿಗೆ ಪ್ರತಿಪಕ್ಷದ ನಾಯಕನ ಆಯ್ಕೆಗೂ ತಿಣುಕಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿಜಯಪುರ ಶಾಸಕ ಬಸನಗೌಡ ಪಾಟೀಲ ಪ್ರತಿಪಕ್ಷ ನಾಯಕ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ನೂತನ ಅಧ್ಯಕ್ಷರ ಆಯ್ಕೆ ಸಂಬಂಧ ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳ ಅಭಿಪ್ರಾಯವನ್ನೂ ಆಲಿಸಲಾಗುತ್ತದೆ. ಇಲ್ಲಿ ವ್ಯಕ್ತವಾಗುವ ಅಭಿಪ್ರಾಯಗಳನ್ನು ಆಧರಿಸಿ ಪಕ್ಷದ ವರಿಷ್ಠರು ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 7ರಂದು ಬಜೆಟ್ ಅಧಿವೇಶನ ನಡೆಸುವ ಸಾಧ್ಯತೆ ಇದ್ದು ಅದಕ್ಕೂ ಮುನ್ನ ತೆರವಾಗಿರುವ ಸ್ಥಾನವನ್ನು ಬಿಜೆಪಿ ತುಂಬುವ ನಿರೀಕ್ಷೆ ಇದೆ.

ಇನ್ನು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಅವಧಿ ಕಳೆದ ವರ್ಷ ಆಗಸ್ಟ್‌ನಲ್ಲಿ ಕೊನೆಗೊಂಡಿತ್ತು. ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಯ ಕಾರಣದಿಂದ ಅವಧಿಯನ್ನು ವಿಸ್ತರಿಸಲಾಗಿತ್ತು. ಇದೀಗ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆಯೂ ಬಿಜೆಪಿ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಯಾರಾಗಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಒಟ್ಟು ಮೂರು ಸಭೆ ನಡೆಯಲಿದ್ದು, ಮೊದಲಿಗೆ ಬೆಳಗ್ಗೆ 10.30ಕ್ಕೆ ನೂತನ ಶಾಸಕರ ಸಭೆ ನಡೆಯಲಿದೆ. ಬಳಿಕ ಮಧ್ಯಾಹ್ನ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌, ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಮೊದಲಾದವರು ಪಾಲ್ಗೊಳ್ಳಲಿದ್ದಾರೆ.

ಒಟ್ಟಿನಲ್ಲಿ ಇಂದಿನ ಬಿಜೆಪಿ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:00 am, Thu, 8 June 23