ಸಾಲ ಶೂಲದ ಹರಿಕಾರ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಿಜೆಪಿ ವ್ಯಂಗ್ಯ

Karnataka Budhet 2024: ಸಿಎಂ ಸಿದ್ದರಾಮಯ್ಯ ಮಂಡನೆ ಮಾಡಿರುವ 2024-25ನೇ ಸಾಲಿನ ಬಜೆಟ್​​​ ಬಗ್ಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯನವರು ರಾಜ್ಯದ ಜನತೆಯನ್ನು ಸಾಲದ ಕೂಪಕ್ಕೆ ತಳ್ಳಿದ್ದಾರೆ ಎಂದು ಬಿಜೆಪಿ ಕಿಡಿಕಾರಿದೆ. ರಾಜ್ಯದ ಜನರ ಕಿವಿ ಮೇಲೆ ಹೂವಿನ ತೋಟವನ್ನೇ ಸಿದ್ದರಾಮಯ್ಯ ಇಟ್ಟಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಸಾಲ ಶೂಲದ ಹರಿಕಾರ ಸಾಲರಾಮಯ್ಯ: ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಿಜೆಪಿ ವ್ಯಂಗ್ಯ
ಬಿಜೆಪಿ

Updated on: Feb 16, 2024 | 2:50 PM

ಬೆಂಗಳೂರು, ಫೆಬ್ರವರಿ 16: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಡನೆ ಮಾಡಿದ ಕರ್ನಾಟಕ ಬಜೆಟ್​​ (Karnataka Budget) ಬಗ್ಗೆ ರಾಜ್ಯ ಬಿಜೆಪಿ (BJP) ವ್ಯಂಗ್ಯವಾಡಿದ್ದು, ಮುಖ್ಯಮಂತ್ರಿಗಳು ರಾಜ್ಯದ ಜನರನ್ನು ಸಾಲದ ಹೊರೆಗೆ ದೂಡಿದ್ದಾರೆ ಎಂದು ವಾಗ್ದಾಳಿ ನಡೆಸಿದೆ. ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿ ಸಂದೇಶ ಪ್ರಕಟಿಸಿರುವ ಬಿಜೆಪಿ, ಇದು ಬಜೆಟ್ ಅಲ್ಲ – ಇದು ಕರ್ನಾಟಕ ಜನತೆಯ ಕಿವಿ ಮೇಲೆ ಹೂವಿನ ತೋಟ ಎಂದು ವ್ಯಂಗ್ಯಚಿತ್ರವೊಂದರ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

‘ಸಾಲ- ಶೂಲದ ಹರಿಕಾರ ಸಾಲರಾಮಯ್ಯ. ಸಾಲವೇ ಎಲ್ಲದಕ್ಕೂ ವಾಮಮಾರ್ಗ ಎಂದುಕೊಂಡಿರುವ ಈ ಶತಮಾನದ ನಕಲಿ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಸಾಲ ರಾಜ್ಯವನ್ನಾಗಿ ಪರಿವರ್ತಿಸಿದ್ದಾರೆ. ಅಧಿಕಾರಕ್ಕೆ ಬಂದು ಕೇವಲ 9 ತಿಂಗಳಲ್ಲಿ 1,93,246 ಕೋಟಿ ರೂಪಾಯಿ ಸಾಲ‌ ಮಾಡಿದ್ದಾರೆ. ಅಂದರೆ ಪ್ರತಿಯೊಬ್ಬ ಕನ್ನಡಿಗನ ತಲೆ ಮೇಲೆ 28 ಸಾವಿರ ರೂಪಾಯಿ ಸಾಲ ಹೇರಿದ್ದಾರೆ ಎಂದು ಬಿಜೆಪಿ ಉಲ್ಲೇಖಿಸಿದೆ.

ಸಿದ್ದರಾಮಯ್ಯ ಬಜೆಟ್ ಬಗ್ಗೆ ಬಿಜೆಪಿ ವ್ಯಂಗ್ಯದ ಟ್ವೀಟ್


‘ಸಾಲರಾಮಯ್ಯನವರು ಒಂದು ಸಮುದಾಯದ ತುಷ್ಟೀಕರಣಕ್ಕಾಗಿ ಲಕ್ಷಾಂತರ ಕೋಟಿ ಸಾಲ ಮಾಡಿ ಕನ್ನಡಿಗರನ್ನು ಸಂಪೂರ್ಣವಾಗಿ ಮುಳುಗಿಸಿದ್ದಾರೆ. ಸಾಲದ ಸುಳಿಗೆ ಕರುನಾಡು ಸಿಲುಕಿದೆ. ಕರ್ನಾಟಕ ಅಭಿವೃದ್ಧಿಯಲ್ಲಿ 20 ವರ್ಷ ಹಿಂದಕ್ಕೆ ಬಿದ್ದಿದೆ. ಆರ್ಥಿಕತೆ ಹಳ್ಳ ಹಿಡಿದಿದೆ’ ಎಂದು ಬಿಜೆಪಿ ಕಿಡಿಕಾರಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಕೂಡ ಬಜೆಟ್ ಬಗ್ಗೆ ಟೀಕೆ ಮಾಡಿದ್ದು, ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಒಂದು ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಇದೊಂದು ಶೂನ್ಯ ಬಜೆಟ್. ಕರ್ನಾಟಕ ರಾಜ್ಯವನ್ನು ಈ ಬಜೆಟ್ 20 ವರ್ಷಗಳ ಹಿಂದಕ್ಕೆ ತೆಗೆದುಕೊಂಡು ಹೋಗಿದೆ ಎಂದು ಹೇಳಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಸಿದ್ದರಾಮಯ್ಯ ಬಜೆಟ್​​ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ವೃದ್ಧರಿಗೆ ಅನ್ನ ಸುವಿಧಾ ಘೋಷಿಸಿದ ಸಿದ್ದರಾಮಯ್ಯ: ಮನೆ ಬಾಗಿಲಿಗೆ ಬರಲಿದೆ ಆಹಾರ ಧಾನ್ಯ

ಸಿಎಂ ಸಿದ್ದರಾಮಯ್ಯ ಒಟ್ಟು 3 ಗಂಟೆ 14 ನಿಮಿಷ ಸುದೀರ್ಘ ಬಜೆಟ್ ಭಾಷಣ ಮಾಡಿದ್ದಾರೆ. ಅವರು ಈ ಬಾರಿ ಮಂಡಿಸಿದ ಬಜೆಟ್ ಗಾತ್ರ ಒಟ್ಟು 3,71,383 ಕೋಟಿ ರೂಪಾಯಿ ಆಗಿದೆ. ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ನೀಡುವ ದೊಡ್ಡ ಸವಾಲು ಸಿದ್ದರಾಮಯ್ಯ ಮುಂದೆ ಇದ್ದು, ಬಜೆಟ್ ಗಾತ್ರ ಮತ್ತು ಸಾಲದ ಹೊರೆ ಹೆಚ್ಚಾಗಬಹುದು ಎಂದು ಮಂಡನೆಗೂ ಮುನ್ನವೇ ಊಹಿಸಲಾಗಿತ್ತು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us