ಸಿದ್ದರಾಮಯ್ಯ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್! ಏನದು?

ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರ ರಚನೆಗೂ ಮುನ್ನವೇ ಮುಖ್ಯಮಂತ್ರಿ ಆಯ್ಕೆ ವಿಚಾರ ಪಕ್ಷದ ಹೈಕಮಾಂಡ್​ಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿದ್ದು, ಹೈಕಮಾಂಡ್ ಜತೆ ಮಾತುಕತೆ ನಡೆಸಿದ್ದಾರೆ.

ಸಿದ್ದರಾಮಯ್ಯ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿದ ಡಿಕೆ ಶಿವಕುಮಾರ್! ಏನದು?
ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್

Updated on: May 16, 2023 | 7:57 PM

ನವದೆಹಲಿ: ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರ ರಚನೆಗೂ ಮುನ್ನವೇ ಮುಖ್ಯಮಂತ್ರಿ ಆಯ್ಕೆ ವಿಚಾರ ಪಕ್ಷದ ಹೈಕಮಾಂಡ್​ಗೆ ಕಗ್ಗಂಟಾಗಿ ಪರಿಣಮಿಸಿದೆ. ಈ ಮಧ್ಯೆ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ದೆಹಲಿಯಲ್ಲಿದ್ದು, ಹೈಕಮಾಂಡ್ ಜತೆ ಮಾತುಕತೆ ನಡೆಸಿದ್ದಾರೆ. ಡಿಕೆ ಶಿವಕುಮಾರ್ ಹಾಗೂ ಮಲ್ಲಿಕಾರ್ಜುನ ಖರ್ಗೆ ರಾಜ್ಯ ರಾಜಕೀಯದ ಬೆಳವಣಿಗೆಗಳಿಗೆ ಸಂಬಂಧಿಸಿ ಮಂಗಳವಾರ ಸಂಜೆ ಸಮಾಲೋಚನೆ ನಡೆಸಿದರು.

ಇದೇ ವೇಳೆ, ಶಿವಕುಮಾರ್ ಅವರು ಸಿದ್ದರಾಮಯ್ಯ ಕಾಂಗ್ರೆಸ್​ಗೆ ಬಂದಾಗಿನಿಂದ ಈವರೆಗೆ ನಡೆದಿರುವ ಸಂಪೂರ್ಣ ರಾಜಕೀಯ ಚಿತ್ರಣವನ್ನು ಖರ್ಗೆ ಮುಂದಿಟ್ಟಿದ್ದಾರೆ ಎನ್ನಲಾಗಿದೆ.

ಸಮ್ಮಿಶ್ರ ಸರ್ಕಾರ ಪತನವನ್ನೇ ಟ್ರಂಪ್ ಕಾರ್ಡ್ ಮಾಡಿರುವ ಡಿಕೆ ಶಿವಕುಮಾರ್, 2021ರಲ್ಲಿ ಸರ್ಕಾರ ಬೀಳಲು ಕಾರಣ ಯಾರೆಂದು ನಿಮಗೆ ತಿಳಿದಿದೆ. ಚಾಮುಂಡೇಶ್ವರಿ ಉಪಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗೆ ನಾನೇ ಕಾರಣ. ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಸೋಲಿನ ಬಳಿಕ ಪಕ್ಷ ಕಟ್ಟಿದ್ದೇನೆ ಎಂದು ಖರ್ಗೆ ಬಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಲಿತರೆಲ್ಲರೂ ಸಿದ್ದರಾಮಯ್ಯ ಹಿಂದೆ ಇದ್ದಾ ಎಂಬುದು ನಿಮಗೆ ತಿಳಿದಿಲ್ವಾ? ನೀವೇ ಹೇಳಿ ಎಂದು ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಡಿಕೆಶಿ ಪ್ರಶ್ನಿಸಿದ್ದಾರೆ. ಈ ಬಾರಿ ಒಕ್ಕಲಿಗ ಹಾಗೂ ಲಿಂಗಾಯತ ಮತಗಳು ನಮ್ಮ ಕೈ ಹಿಡಿದಿವೆ. ಇದನ್ನು ಪರಿಗಣಿಸಿ ಈ ಬಾರಿ ನನಗೆ ಅವಕಾಶ ನೀಡಲೇಬೇಕೆಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಮಹಾಭಾರತ ಕಥೆ ಉಲ್ಲೇಖಿಸಿದ ಡಿಕೆ ಶಿವಕುಮಾರ್, ಹೋರಾಟದಲ್ಲಿ ಯಶಸ್ಸು ಗಳಿಸುವ ಸೂತ್ರವನ್ನು ವಿವರಿಸಿದ್ದು ಹೀಗೆ

ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಪೈಪೋಟಿ ಮುಂದುವರಿದಿರುವ ಮಧ್ಯೆಯೇ, ಕುರುಬ ಸಮುದಾಯದ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಮತ್ತೆ ಸಭೆ ಸೇರಲು ಒಕ್ಕಲಿಗ ಮುಖಂಡರು ತೀರ್ಮಾನಿಸಿದ್ದಾರೆ. ಡಿಕೆಶಿ ಪರ ಇಂದು ಪಾದಯಾತ್ರೆಗಾಗಿ ಮುಂದಾಗಿದ್ದ ಒಕ್ಕಲಿಗರು ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಪಾದಯಾತ್ರೆ ರದ್ದುಪಡಿಸಿದ್ದರು.

ಕುರುಬ ಸಮುದಾಯದ ಮುಖಂಡರಿಂದ ಪದೇಪದೆ ಒತ್ತಡ ಹಿನ್ನೆಲೆಯಲ್ಲಿ ಇದೀಗ ಒಕ್ಕಲಿಗ ಸಮುದಾಯದ ಮುಖಂಡರಿಂದಲೂ ಆಕ್ರೋಶ ವ್ಯಕ್ತವಾಗುತ್ತಿದೆ. ನಾಳೆಯೊಳಗೆ ಮುಖ್ಯಮಂತ್ರಿ ಯಾರೆಂಬ ತೀರ್ಮಾನ ಆಗದಿದ್ರೆ ಪಾದಯಾತ್ರೆ ನಡೆಸಲು ಒಕ್ಕಲಿಗ ಮುಖಂಡರು ಯೋಜನೆ ರೂಪಿಸುತ್ತಿದ್ದಾರೆ. ಪಾದಯಾತ್ರೆ ಮೂಲಕ ಡಿಕೆ ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂಬ ಆಗ್ರಹ ವ್ಯಕ್ತಪಡಿಸಲು ಅವರು ನಿರ್ಧರಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:56 pm, Tue, 16 May 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us