Karnataka Cabinet: ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್​ಗೆ ಹೆಚ್ಚುವರಿ ಖಾತೆ; ಇಲ್ಲಿದೆ ವಿವರ

ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರವು 33 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ದಿನಗಳಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ.ಪಾಟೀಲ್ ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ.

Karnataka Cabinet: ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್​ಗೆ ಹೆಚ್ಚುವರಿ ಖಾತೆ; ಇಲ್ಲಿದೆ ವಿವರ
ಎಂಬಿ ಪಾಟೀಲ್ ಹಾಗೂ ಪ್ರಿಯಾಂಕ್ ಖರ್ಗೆ

Updated on: May 31, 2023 | 10:26 PM

ಬೆಂಗಳೂರು: ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರವು 33 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ದಿನಗಳಲ್ಲಿ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಮತ್ತು ಎಂ.ಬಿ.ಪಾಟೀಲ್ (MB Patil) ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಈ ಕುರಿತು ಸಚಿವ ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ಮಾಹಿತಿ ನೀಡಲಾಗಿದೆ.

ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜೊತೆಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ ಮತ್ತು ಬಿಟಿ) ಖಾತೆ ಹಂಚಿಕೆ ಮಾಡಲಾಗಿದೆ. ಎಂಬಿ ಪಾಟೀಲ್ ಅವರಿಗೆ ಈ ಹಿಂದೆ ಮಂಜೂರು ಮಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಜೊತೆಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಅಭಿವೃದ್ಧಿ ಖಾತೆ ನೀಡಲಾಗಿದೆ. ಈ ಎರಡೂ ಖಾತೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದವು.

ವರದಿಗಳ ಪ್ರಕಾರ, ಖಾತೆ ಹಂಚಿಕೆಯ ಕರಡು ಪಟ್ಟಿಯಲ್ಲಿ ಐಟಿ ಮತ್ತು ಬಿಟಿಯನ್ನು ಖರ್ಗೆ ಅವರಿಗೆ ನೀಡಲಾಗಿತ್ತು. ಆದರೆ ಈ ಖಾತೆಗಾಗಿ ಪಾಟೀಲ್ ಅವರು ಲಾಬಿ ಮಾಡಿದ್ದರು. ಹೀಗಾಗಿ ಸಿದ್ದರಾಮಯ್ಯ ಅವರು ಆ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಇದೀಗ ಸಿದ್ದರಾಮಯ್ಯ ಅವರು ಐಟಿ ಮತ್ತು ಬಿಟಿ ಖಾತೆಯನ್ನು ಪ್ರಿಯಾಂಕ್ ಖರ್ಗೆ ಅವರಿಗೇ ನೀಡಿದ್ದಾರೆ. ಸದ್ಯ ಪಾಟೀಲ್ ಅವರನ್ನು ಸಮಾಧಾನಪಡಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Karnataka Cabinet Expansion Highlights: ಖಾತೆ ಹಂಚಿಕೆ ವಿಚಾರದಲ್ಲಿ ಅಸಮಾಧಾನ: ಸಚಿವರಿಗೆ ಕರೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ

ರಾಮಲಿಂಗಾ ರೆಡ್ಡಿ ಮತ್ತು ಕೆ.ಎಚ್.ಮುನಿಯಪ್ಪ ಅವರಂತಹ ಹಲವು ಸಚಿವರು ಖಾತೆ ಹಂಚಿಕೆ ಬಗ್ಗೆ ಅತೃಪ್ತರಾಗಿದ್ದರು. ಆದರೆ ಅವರ ಖಾತೆಗಳಲ್ಲಿ ಮುಖ್ಯಮಂತ್ರಿಗಳು ಯಾವುದೇ ಬದಲಾವಣೆ ಮಾಡಿಲ್ಲ.

ಕಳೆದ ಶನಿವಾರ ಕರ್ನಾಟಕ ಸಚಿವ ಸಂಪುಟವನ್ನು ಭರ್ತಿ ಮಾಡಲಾಗಿತ್ತು. ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದರು. ಅದಾದ ಒಂದು ದಿನದ ನಂತರ ಅವರಿಗೆ ಖಾತೆ ಹಂಚಿಕೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:18 pm, Wed, 31 May 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us