ಕೆಎನ್ ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದ ತೆಗೆದಿದ್ದು!
ಮಾಜಿ ಸಚಿವ ಕೆಎನ್ ರಾಜಣ್ಣ ಅವರು ತಮ್ಮದೇ ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ಇದು ಸಹಜವಾಗಿ ಪಕ್ಷದ ನಾಯಕರು ಮುಜುಗುರಕ್ಕೆ ಒಳಗಾಗುವಂತೆ ಮಾಡುತ್ತಿತ್ತು. ಇತ್ತೀಚಿಗೆ, ಮತ ಕಳ್ಳತನಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಮಾಡಿದ್ದ ಆರೋಪದ ವಿರುದ್ಧ ಕೆಎನ್ ರಾಜಣ್ಣ ಹೇಳಿಕೆಗಳನ್ನು ನೀಡಿದ್ದರು. ಇದು, ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದ್ದು, ಅವರನ್ನು ಸಂಪುಟದಿಂದ ಕೈ ಬಿಡುವಂತೆ ಮಾಡಿದೆ.

ಬೆಂಗಳೂರು, ಆಗಸ್ಟ್ 11: ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಕೆಎನ್ ರಾಜಣ್ಣ (KN Rajanna) ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಮೂಲಕ ಕೆಎನ್ ರಾಜಣ್ಣ ಅವರು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ತೊಡೆ ತಟ್ಟಿದ್ದರು. ಇದು ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದೆ. ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ ರವಾನಿಸಲಾಗಿದೆ.
ಹೌದು, ಸಚಿವ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ಕೈ ಬಿಡುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಕೆಎನ್ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜಭವನದಿಂದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಹೋಗಿದೆ.
ರಾಜಭವನದಿಂದ ಬಂದ ಪತ್ರದಲ್ಲಿ ಏನಿದೆ?
“ಮುಂದಿನ ಅಗತ್ಯ ಕ್ರಮಕ್ಕಾಗಿ, ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ತೆಗೆದುಹಾಕುವ ಕುರಿತು ರಾಜ್ಯಪಾಲರು ಸಹಿ ಮಾಡಿದ ಮೂಲ ಅಧಿಸೂಚನೆಯನ್ನು ಈ ಪತ್ರದೊಂದಿಗೆ ಕಳುಹಿಸಲು ನನಗೆ ನಿರ್ದೇಶಿಸಲಾಗಿದೆ” ಎಂದು ಪತ್ರದಲ್ಲಿದೆ.
ಇದನ್ನೂ ಓದಿ: ಸಚಿವ ರಾಜಣ್ಣ ರಾಜೀನಾಮೆ ರಹಸ್ಯ; ದಿಢೀರ್ ನಿರ್ಧಾರದ ಹಿಂದಿನ ಕೈವಾಡ ಯಾರದ್ದು?
ರಾಜೀನಾಮೆ ನೀಡಿದ ರಾಜಣ್ಣ
ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲೇ ಶಾಸಕ ಕೆಎನ್ ರಾಜಣ್ಣ ಅವರು ಸೋಮವಾರ (ಆ.11) ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಕೆ.ಎನ್.ರಾಜಣ್ಣ ನೀಡಿದ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಗೀಕರಿಸಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಎನ್ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದರು.
ಇದನ್ನೂ ಓದಿ: ಪಕ್ಷ ವಿರೋಧಿ ಹೇಳಿಕೆಗಳೇ ರಾಜೀನಾಮೆಗೆ ಕಾರಣವಾಯ್ತೇ? ಕೆಎನ್ ರಾಜಣ್ಣ ವಿವಾದದ ಹಾದಿ
ರಾಜಣ್ಣ ನೀಡಿದ್ದ ಪಕ್ಷ ವಿರೋಧಿ ಹೇಳಿಕೆ
ಲೋಕಸಭಾ ಚುನಾವಣೆಯಲ್ಲಿ ಸಮಯದಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ ಮತಗಳ ಕಳ್ಳತನವಾಗಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಆರೋಪಿಸಿದ್ದರು. ಆದರೆ, “ವೋಟರ್ ಲಿಸ್ಟ್ನ್ನು ನಮ್ಮದೇ ಸರ್ಕಾರ ಇರುವಾಗ ಮಾಡಿರುವುದು. ಆಗ ಕಣ್ಮುಚ್ಚಿ ಕುಳಿತಿದ್ದು ಈಗ ಹೇಳಿದರೆ ಏನು ಪ್ರಯೋಜನ” ಎಂದು ಸಚಿವ ಕೆ.ಎನ್ ರಾಜಣ್ಣ ಹೇಳುವ ಮೂಲಕ ತಮ್ಮದೇ ಪಕ್ಷದ ನಾಯಕರು ಮುಜುಗರಕ್ಕೀಡಾಗುವಂತೆ ಮಾಡಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:29 pm, Mon, 11 August 25




