ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ: ಸಿಎಂ ಬೊಮ್ಮಾಯಿ

|

Updated on: Mar 26, 2023 | 11:03 AM

ಜೇನು ಗೂಡಿಗೆ ಕೈ ಹಾಕದೇ ಇದ್ದಲ್ಲಿ ಜೇನು ಸಿಗಲ್ಲ ಅಂತ ಗೊತ್ತಿತ್ತು. ನಾನು ಜೇನುಗೂಡಿಗೆ ಕೈಹಾಕುತ್ತೇನೆ, ಜೇನು ನೊಣದಿಂದ ಕಚ್ಚಿಸಿಕೊಂಡರೂ ಪರ್ವಾಗಿಲ್ಲ ಎಸ್​ಸಿ ಎಸ್​ಟಿ ಜನಾಂಗಕ್ಕೆ ಜೇನಿನ ಹನಿಯನ್ನು ಕೊಡಿಸಲು ಸಿದ್ಧ ಅಂತ ಹೇಳಿದ್ದೆ. ಈಗ ಅದನ್ನು ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಹುಬ್ಬಳ್ಳಿ: ಜೇನು ನೊಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಒಳ ಮೀಸಲಾತಿ ವಿಚಾರ ಮುವ್ವತ್ತು ವರ್ಷಗಳಿಂದ ಇತ್ತು. ಆದರೆ ಕಾಂಗ್ರೆಸ್ (Congress) ನಾಯಕರು ಆ ಜನಾಂಗದವರ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಹೀಗಾಗಿ ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ ಸಮಿತಿ ರಚಿಸಿ, ಕಾನೂನು ಪ್ರಕಾರ ಮಾಡಿದ್ದೇವೆ ಎಂದರು.

ನಾವು ಮಾಡಲು ಆಗದ್ದನ್ನು ಬಿಜೆಪಿಯವರು ಮಾಡಿದ್ದಾರೆ ಅಂತ ಕಾಂಗ್ರೆಸ್​ನವರು ಹತಾಶೆಯಿಂದ ಮಾತನಾಡುತ್ತಿದ್ದಾರೆ. ಆದರೆ ಅದ್ಯಾವುದಕ್ಕೂ ಬೆಲೆ ಇಲ್ಲ. ಅವರು ಯಾವಾಗಲೂ ಎಸ್​ಸಿ ಎಸ್​ಟಿ ಸಮುದಾಯದವರನ್ನು ಯಾಮಾರಿಸಿಕೊಂಡೇ ಬಂದಿದ್ದರು. ಹೇಳಿಕೆಗಳ ಮೂಲಕ ಸಹಾನುಭೂತಿ ತೋರಿಸಿ ಈ ಚುನಾವಣೆಯಲ್ಲಿಯೂ ಯಾಮಾರಿಸಬಹುದು ಅಂತ ಅಂದುಕೊಂಡಿದ್ದರು ಎಂದು ಸಿಎಂ ಬೊಮ್ಮಾಯಿ ವಿಪಕ್ಷ ಕಾಂಗ್ರೆಸ್ ಅನ್ನು ಟೀಕಿಸಿದರು.

ಇದನ್ನೂ ಓದಿ: Cabinet Decision: ಮುಸ್ಲಿಮರ 2ಬಿ ಮೀಸಲಾತಿ ರದ್ದು, ಒಕ್ಕಲಿಗ, ಲಿಂಗಾಯತರಿಗೆ ಹೆಚ್ಚಳ; ಸಿಎಂ ಬೊಮ್ಮಾಯಿ ಘೋಷಣೆ

ಸಾಮಾಜಿಕ, ಅಭಿವೃದ್ಧಿ ವಿಚಾರದಲ್ಲಿ ಸಂಘ ಸಂಸ್ಥೆಗಳ ಜೊತೆ ಚರ್ಚಿಸಿ ಹಲವಾರು ತೀರ್ಮಾನ ಮಾಡಿದ್ದೇವೆ. ನಿರ್ಣಾಯಕ ತೀರ್ಮಾನ ಕೈಗೊಳ್ಳಲು ನಮ್ಮ ಬದ್ಧತೆಯೇ ಕಾರಣವಾಗಿದೆ. ಆ ಜನಾಂಗಕ್ಕೆ ನ್ಯಾಯ ಕೊಡಿಸುವವರೆಗೂ ವಿಶ್ರಮಿಸಲ್ಲ. ಇವರೆಲ್ಲ ಜೇನುಗೂಡಿಗೆ ಕೈಹಾಕುತ್ತಿದ್ದಾರೆ ಅಂತ ಹೇಳುತ್ತಿದ್ದರು. ಆದರೆ ಜೇನು ಗೂಡಿಗೆ ಕೈ ಹಾಕದೇ ಇದ್ದಲ್ಲಿ ಜೇನು ಸಿಗಲ್ಲ ಅಂತ ಗೊತ್ತಿತ್ತು. ನಾನು ಜೇನುಗೂಡಿಗೆ ಕೈ ಹಾಕುತ್ತೇನೆ, ಜೇನು ನೊಣದಿಂದ ಕಚ್ಚಿಸಿಕೊಂಡರೂ ಪರ್ವಾಗಿಲ್ಲ ಆ ಜನಾಂಗಕ್ಕೆ ಜೇನಿನ ಹನಿಯನ್ನು ಕೊಡಿಸಲು ಸಿದ್ಧ ಅಂತ ಹೇಳಿದ್ದೆ, ಈಗ ಅದನ್ನು ಮಾಡಿದ್ದೇನೆ ಎಂದರು.

ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಒಬಿಸಿ ಮೀಸಲಾತಿ ರದ್ದುಗೊಳಿಸಿ ಇಡಬ್ಲ್ಯುಎಸ್​ಗೆ ಸೇರ್ಪಡೆ ಮಾಡಲಾಗಿದೆ. ಇದನ್ನ ಖಂಡಿಸಿರುವ ವಿಪಕ್ಷಗಳು ಅಲ್ಪಸಂಖ್ಯಾತರಿಗೆ ದೊಡ್ಡ ಅನ್ಯಾಯ ಮಾಡಿದೆ ಎಂದು ಆರೋಪಿಸಿವೆ. ಎಂದ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ, ಮೊದಲು ಶೇ.4 ಪರ್ಸೆಂಟ್ ಮೀಸಲಾತಿ ಇತ್ತು. ಈಗ ಶೇ. 10 ರಷ್ಟು ಮೀಸಲಾತಿ ಇರುವ ಕಡೆ ಹಾಕಿದ್ದೇವೆ. ಅದು ಹೇಗೆ ಅನ್ಯಾಯ ಆಗುತ್ತದೆ? ಅಲ್ಪಸಂಖ್ಯಾತರ ಹಿತರಕ್ಷಣೆ ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದರು.

ಚುನಾವಣಾ ಪ್ರಕ್ರಿಯೆ ಮಹದಾಯಿ ಯೋಜನೆಗೆ ತೊಡಕಾಗಲ್ಲ: ಸಿಎಂ ಬೊಮ್ಮಾಯಿ

ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ಮಹದಾಯಿ ಯೋಜನೆ ಕಾಮಗಾರಿ ಆರಂಭಕ್ಕೆ ತೊಡಕಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಚುನಾವಣಾ ಪ್ರಕ್ರಿಯೆ ಇದಕ್ಕೆ ತೊಡಕಾಗುವುದಿಲ್ಲ. ನೀತಿ ಸಂಹಿತೆ ಜಾರಿಯಾದರೂ ಟೆಂಡರ್ ಪ್ರಕ್ರಿಯೆ ನಡೆಯುತ್ತದೆ. ಅಷ್ಟರೊಳಗಾಗಿ ಅರಣ್ಯ ಇಲಾಖೆ ಕ್ಲಿಯರೆನ್ಸ್ ಸಿಗುವ ವಿಶ್ವಾಸವಿದೆ. ಚುನಾವಣೆ ನಂತರ ಕಾಮಗಾರಿ ಆರಂಭವಾಗುತ್ತದೆ ಎಂದರು.

ಚುನಾವಣೆ ಘೋಷಣೆ ನಂತರ ಬಿಜೆಪಿ ಪಟ್ಟಿ ರಿಲೀಸ್

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಜೆಡಿಎಸ್, ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷಗಳು ಈಗಾಗಲೇ ಬಿಡುಗಡೆ ಮಾಡಿವೆ. ಆದರೆ ಬಿಜೆಪಿ ಮಾತ್ರ ಇನ್ನೂ ಪಟ್ಟಿ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಮಾತನಾಡಿದ ಬೊಮ್ಮಾಯಿ, ಚುನಾವಣೆ ಘೋಷಣೆ ಆದ ನಂತರವೇ ಬಿಜೆಪಿ ಪಟ್ಟಿ ಬಿಡುಗಡೆಯಾಗುತ್ತದೆ. ಸರಿಯಾದ ಸಮಯದಲ್ಲಿ ನಮ್ಮ ಪಟ್ಟಿ ಬಿಡುಗಡೆಯಾಗುತ್ತದೆ. ಇವತ್ತಿನ ಕೋರ್ ಕಮಿಟಿಯಲ್ಲಿ ಚುನಾವಣಾ ನಿರ್ವಹಣೆ ಬಗ್ಗೆ ಚರ್ಚೆಯಾಗುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Sun, 26 March 23