ಸಾತನೂರಿನಲ್ಲಿ ಮುಸ್ಲಿಂ ಯುವಕನ ಬಳಿ 2 ಲಕ್ಷ ನೀಡುವಂತೆ ಪೀಡಿಸಿ ನಂತರ ಕೊಂದಿದ್ದಾರೆ: ಡಿಕೆ ಶಿವಕುಮಾರ್ ಆರೋಪ
ಸಾತನೂರಿನಲ್ಲಿ ನೈತಿಕ ಪೊಲೀಸ್ಗಿರಿ ನೆಪದಲ್ಲಿ ಕೊಲೆ ನಡೆದಿದೆ. ಮೃತನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಮುಖ್ಯಾಂಶಗಳು
- ಸಾತನೂರಿನಲ್ಲಿ ನೈತಿಕ ಪೊಲೀಸ್ಗಿರಿ ನೆಪದಲ್ಲಿ ಕೊಲೆ ನಡೆದಿದೆ: ಡಿಕೆ ಶಿವಕುಮಾರ್
- ಬೀದರ್ನಿಂದ ಚಾಮರಾಜನಗರದ ವರೆಗೆ ಅನೇಕರು ಕಾಂಗ್ರೆಸ್ ಸೇರುತ್ತಾರೆ: ಡಿಕೆ ಶಿವಕುಮಾರ್
- ಯೋಗೇಶ್ ಬಾಬುಗೆ ಟಿಕೆಟ್ ನೀಡುವಂತೆ ಬೆಂಬಲಿಗರಿಂದ ಒತ್ತಾಯ
ಬೆಂಗಳೂರು: ಕಸಾಯಿಖಾನೆಗೆ ಜಾನುವಾರು ಸಾಗಣೆ (Transportation of cattle to slaughterhouses) ಮಾಡುತ್ತಿದ್ದ ವಾಹನದ ಮೇಲೆ ಹಿಂದೂ ಕಾರ್ಯಕರ್ತರ (Hindu activists) ದಾಳಿ ನಡೆಸಿದಾಗ ಸಿಕ್ಕಿಬಿದ್ದಿದ್ದ ವ್ಯಕ್ತಿಯ ನಿಗೂಢ ಸಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ (Araga Jnanendra) ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಆರೋಪಿಸಿದ್ದಾರೆ. ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ಇರ್ಗೀಷ್ ಪಾಷಾ ಅನುಮಾನಸ್ಪದ ಸಾವಿನ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಸಾತನೂರಿನಲ್ಲಿ ನೈತಿಕ ಪೊಲೀಸ್ಗಿರಿ ನೆಪದಲ್ಲಿ ಕೊಲೆ ನಡೆದಿದೆ. ಮೃತನ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು, ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಹತ್ಯೆಯಾದ ವ್ಯಕ್ತಿ ಬಳಿ 2 ಲಕ್ಷ ನೀಡುವಂತೆ ಪೀಡಿಸಿ ಕೊಂದಿದ್ದಾರೆ. ನಿಮ್ಮ ಕಾರ್ಯಕರ್ತ, ಸಹಪಾಠಿಯೇ ಕೊಲೆ ಮಾಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತರಿಗೆ ತೊಂದರೆ ಕೊಡುವ ಕೆಲಸ ಆಗುತ್ತಿದೆ. ರಾಜ್ಯದಲ್ಲಿ ಗೊಂದಲದ ವಾತಾವರಣ ನಿರ್ಮಾಣ ಮಾಡುತ್ತಿರುವುದು ಖಂಡನೀಯ. ಕೊಲೆಗಾರರನ್ನು ಕೂಡಲೇ ಬಂಧಿಸದಿದ್ದರೆ ನಾವು ಸುಮ್ಮನಿರುವುದಿಲ್ಲ ಎಂದು ಡಿಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಯೋಗೇಶ್ ಬಾಬುಗೆ ಟಿಕೆಟ್ ನೀಡುವಂತೆ ಬೆಂಬಲಿಗರಿಂದ ಒತ್ತಾಯ
ಇತ್ತೀಚೆಗೆ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿಸುವ ಎನ್ ವೈ ಗೋಪಾಲಕೃಷ್ಣ ಅವರಿಗೆ ಚಿತ್ರದುರ್ಗದ ಮೊಳಕಾಲ್ಮುರು ಕ್ಷೇತ್ರದ ಟಿಕೆಟ್ ನೀಡಿದರೆ ಮತ್ತೊಬ್ಬ ಟಿಕೆಟ್ ಆಕಾಂಕ್ಷಿ ಯೋಗೇಶ್ ಬಾಬು ಬಂಡಾಯ ಏಳುವ ಸಾಧ್ಯತೆ ಇದೆ. ಅವರಿಗೆ ಟಿಕೆಟ್ ನೀಡಿದರೆ ನಂತರ ನನ್ನ ನಿರ್ಧಾರ ಪ್ರಕಟಿಸುತ್ತೇನೆ ಅಂತ ಯೋಗೇಶ್ ಪರೋಕ್ಷವಾಗಿ ಬಂಡಾಯದ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಬೆಂಬಲಿಗರು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ಗೆ ಜೈಕಾರ ಹಾಕಿ ಯೋಗೇಶ್ ಬಾಬು ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ನೋಟು ಎಸೆದ ಪ್ರಕರಣ; ಡಿಕೆ ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಈ ಬಗ್ಗೆ ಹೇಳಿಕೆ ನೀಡಿದ ಡಿಕೆಶಿವಕುಮಾರ್, ರಾಜ್ಯದ ಜನರ ಧ್ವನಿ ಕಾಂಗ್ರೆಸ್ ಕಡೆ ಆಗುತ್ತಿದೆ. ನಮ್ಮ ನಡೆ ಅಧಿಕಾರದ ಕಡೆಗೆ ಇದೆ ಎನ್ನೋದಕ್ಕೆ ಜನರುತೋರಿಸುತ್ತಿರುವ ಪ್ರೀತಿ, ಬಿಜೆಪಿ ತೊರೆದು ನಮ್ಮ ಪಕ್ಷದ ಬಾಗಿಲು ತಟ್ಟುತ್ತಿರುವ ಅನೇಕ ನಾಯಕರೇ ಸಾಕ್ಷಿ. ಎನ್ ವೈ ಗೋಪಾಲಕೃಷ್ಣ ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ನಮ್ಮಲ್ಲಿಗೆ ಬಂದಿದ್ದಾರೆ. ಏ.9ರಂದು ಜೆಡಿಎಸ್ನ ಶಾಸಕ ಸ್ಥಾನಕ್ಕೆ ಶಿವಲಿಂಗೇಗೌಡ ತಮ್ಮ ಕ್ಷೇತ್ರದಲ್ಲಿಯೇ ಕಾಂಗ್ರೆಸ್ ಸೇರುತ್ತಾರೆ. ದಲಿತ ಕವಿ ಸಿದ್ದಲಿಂಗಯ್ಯ ಮಾತು ನೆನಪಾಗ್ತದೆ, ಹೋರಾಟದ ಸಾಗರ ಸಾವಿರಾರು ನದಿಗಳು ಸಾಲು ಎಲ್ಲ ನದಿಗಳು ಸಮುದ್ರಕ್ಕೆ ತಲುಪುತ್ತದೆ. ಕಾಂಗ್ರೆಸ್ ಅಂದರೆ ಹೋರಾಟದ ಸಾಗರ. ಇದಕ್ಕೆ ನಾಯಕರು ಬಂದು ನದಿಗಳಂತೆ ಸೇರುತ್ತಿದ್ದಾರೆ ಎಂದರು.
ಭ್ರಷ್ಟಾಚಾರದ ವಿರುದ್ದ ಜನ ಕಾಂಗ್ರೆಸ್ಗೆ ಬೆಂಬಲ ನೀಡುತ್ತಿದ್ದಾರೆ. ನಾಲ್ಕು ಐದು ಬಾರಿ ಶಾಸಕರಾದವರೆಲ್ಲರೂ ಕಾಂಗ್ರೆಸ್ ಸೇರುತ್ತಿದ್ದಾರೆ. ಪುಟ್ಟಣ್ಣ, ಬಾಬೂರಾವ್ ಚಿಂಚನಸೂರ್, ಗೋಪಾಲಕೃಷ್ಣ ಕೂಡ ಹಿಂದೆ ನಮ್ಮಿಂದ ಗೆದ್ದಿದ್ದರು. ಬದಲಾವಣೆಗೆ ಜನ ತೀರ್ಮಾನ ಮಾಡಿದ್ದಾರೆ. ಡಬಲ್ ಇಂಜಿನ್ ಸರ್ಕಾರದಿಂದ ಯಾವುದೇ ಅನುಕೂಲ ಆಗಿಲ್ಲ. ಬೀದರ್ನಿಂದ ಚಾಮರಾಜನಗರದ ತನಕ ಅನೇಕ ಶಾಸಕರು ಕಾಂಗ್ರೆಸ್ ಸೇರುತ್ತಾರೆ ಎಂದರು.
ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:05 pm, Mon, 3 April 23



