ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಭೂಕಬಳಿಕೆ ಆರೋಪ: ತನಿಖೆಗೆ ಎಸ್ಐಟಿ ರಚನೆ
ರಾಮನಗರದ ಕೇತಗಾನಹಳ್ಳಿಯಲ್ಲಿನ ಸರ್ಕಾರಿ ಜಮೀನು ಕಬಳಿಕೆ ಆರೋಪದ ಹಿನ್ನೆಲೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕುಟುಂಬದ ಸದಸ್ಯರ ವಿರುದ್ಧ ಎಸ್ಐಟಿ ತನಿಖೆ ಆರಂಭವಾಗಿದೆ. ಹೈಕೋರ್ಟ್ನ ನಿರ್ದೇಶನದ ಮೇರೆಗೆ ರಚಿಸಲಾದ ಈ ತನಿಖಾ ತಂಡವು ಕರ್ನಾಟಕ ಭೂ ಕಂದಾಯ ಕಾಯ್ದೆ ಮತ್ತು ಭೂ ಕಬಳಿಕೆ ನಿಷೇಧ ಕಾಯ್ದೆಯಡಿ ತನಿಖೆ ನಡೆಸಲಿದೆ. ಎಸ್.ಆರ್. ಹಿರೇಮಠ ಅವರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ ಈ ತನಿಖೆ ಪ್ರಾರಂಭವಾಗಿದೆ.

ಬೆಂಗಳೂರು, ಫೆಬ್ರವರಿ 01: ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ (HD Kumaraswamy) ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದೆ.
ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ಈ ಎಸ್ಐಟಿ ತಂಡದಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸ್ಸಾರ್ ಅಹಮ್ಮದ್, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಇಸ್ಲಾವುದ್ದೀ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಇದ್ದಾರೆ.
ಹೆಚ್ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ವೆ ನಂ. 8,9,10, 16, 17 ಮತ್ತು 79ರಲ್ಲಿನ ಜಮೀನುಗಳನ್ನು ಕಬಳಿಸಿದ್ದಾರೆ ಎಂಬ ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್ಆರ್ ಹಿರೇಮಠ ಹೈಕೋರ್ಟ್ನಲವಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು.
ಇದನ್ನೂ ಓದಿ: ಗುತ್ತಿಗೆದಾರರು 1 ವರ್ಷ ಯಾವುದೇ ಗುತ್ತಿಗೆ ಪಡೆಯಬೇಡಿ, ಕೆಲಸ ಮಾಡಬೇಡಿ: ಕುಮಾರಸ್ವಾಮಿ
ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಸರ್ಕಾರ ಎಸ್ಐಟಿ ರಚನೆ ಮಾಡಿದೆ.
ಹೈಕೋರ್ಟ್ ಸೂಚನೆ ಮೇರೆಗೆ ತನಿಖಾ ತಂಡ ರಚನೆ: ಕೃಷ್ಣಭೈರೇಗೌಡ
ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಸರ್ಕಾರಿ ಜಾಗ ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾತನಾಡಿ, ಹೈಕೋರ್ಟ್ ಸೂಚನೆ ಮೇರೆಗೆ ತನಿಖಾ ತಂಡವನ್ನು ರಚನೆ ಮಾಡಲಾಗಿದೆ. ಹೈಕೋರ್ಟ್ ಸೂಚನೆಯನ್ನು ಪಾಲಿಸಲು ಅಧಿಕಾರಿಗಳಿಗೆ ಹೇಳಿದ್ದೇನೆ. ಹೈಕೋರ್ಟ್ ಸೂಚನೆ ಕೊಟ್ಟಾಗ ಸರ್ಕಾರ ಗೌರವಿಸಬೇಕಾಗುತ್ತದೆ. ಹೈಕೋರ್ಟ್ ಕೊಟ್ಟಿರುವ ಸಮಯದೊಳಗೆ ಸಮಿತಿ ವರದಿ ನೀಡುತ್ತೆ ಎಂದು ಹೇಳಿದರು.