ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್

ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ಶ್ರೀಕಾಂತ್ ಪೂಜಾರಿ ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್: ದಿನೇಶ್​ ಗುಂಡೂರಾವ್
ದಿನೇಶ್ ಗುಂಡೂರಾವ್
Edited By:

Updated on: Jan 04, 2024 | 1:05 PM

ಬೆಂಗಳೂರು, ಜನವರಿ 4: ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ (Srikanth Poojari) ಹಾಗೂ ಇತರರ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ (BJP Protest) ತೀವ್ರಗೊಳಿಸಿದೆ. ಈ ಮಧ್ಯೆ, ಬಿಜೆಪಿ ಪ್ರತಿಭಟನೆಯ ಬೆಂಕಿಗೆ ತುಪ್ಪ ಸುರಿಯುವಂಥ ಹೇಳಿಕೆಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಶ್ರೀಕಾಂತ್ ಪೂಜಾರಿ ಶ್ರೀರಾಮ ಅಥವಾ ಶ್ರೀಕೃಷ್ಣನಂತೆ ಆದರ್ಶ ಪುರುಷ ಅಲ್ಲ. ರಾಮಭಕ್ತನ ಸೋಗಿನಲ್ಲಿರುವ ವೃತ್ತಿಪರ ಕ್ರಿಮಿನಲ್ ಎಂದು ಟೀಕಿಸಿದ್ದಾರೆ.

‘ಹಳೆಯ ಪ್ರಕರಣವೊಂದರಲ್ಲಿ ಹುಬ್ಬಳ್ಳಿ ಪೊಲೀಸರು ಬಂಧಿಸಿರುವ ಶ್ರೀಕಾಂತ್ ಪೂಜಾರಿ ಶ್ರೀರಾಮನಂತೆ ಆದರ್ಶ ಪುರುಷನೂ ಅಲ್ಲ, ಶ್ರೀಕೃಷ್ಣನಂತೆ ಅವತಾರ ಪುರುಷನೂ ಅಲ್ಲ. ಆತ ವೃತ್ತಿಪರ ಕ್ರಿಮಿನಲ್ ಅಷ್ಟೆ‌. ಶ್ರೀಕಾಂತ್ ಪೂಜಾರಿ ವಿರುದ್ಧ 1992 ರಿಂದ 2014 ರವರೆಗೆ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಸುಮಾರು 16 ಕ್ರಿಮಿನಲ್ ಪ್ರಕರಣ ದಾಖಲಾಗಿವೆ‌. ಇಂತಹ ಕ್ರಿಮಿನಲ್ ಹಿನ್ನೆಲೆಯಿರುವ ವ್ಯಕ್ತಿ ರಾಮಭಕ್ತ ಎಂಬ ಸೋಗು ಹಾಕಿಕೊಂಡರೆ ಕಾನೂನು ಕ್ರಮ ತೆಗೆದುಕೊಳ್ಳಬಾರದೆ’ ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

‘ರಾಜಕೀಯ ಕಾರಣಗಳಿಗಾಗಿ ಕ್ರಿಮಿನಲ್ ಹಿನ್ನೆಲೆ ಹೊಂದಿರುವ ವ್ಯಕ್ತಿಯ ಬೆಂಬಲಕ್ಕೆ ನಿಂತಿರುವ ರಾಜ್ಯ ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಮತ್ತು ಸಂಸ್ಕಾರವೇ ಇಲ್ಲದಂತಾಗಿದೆ. ದೀರ್ಘಾವಧಿಯಿಂದ ಬಾಕಿ ಉಳಿದಿರುವ ಪ್ರಕರಣಗಳ‌ ವಿಚಾರಣಾ ಪ್ರಮಾಣಪತ್ರವನ್ನು ನ್ಯಾಯಾಲಯ ಕೇಳಿದೆ. ಅದರಂತೆ‌ ಪೊಲೀಸರು ಇತ್ಯರ್ಥವಾಗದ ಹಳೆಯ ಪ್ರಕರಣ ಸಂಬಂಧ ಶ್ರೀಕಾಂತ್ ಪೂಜಾರಿ ಹೆಸರಿದ್ದುದರಿಂದ ಬಂಧಿಸಿದ್ದಾರೆ. ನ್ಯಾಯಾಲಯದ ಸೂಚನೆಯ ಅನುಸಾರ ಪೊಲೀಸರು ಕ್ರಮ ತೆಗೆದುಕೊಂಡಿದ್ದಾರೆ. ಈ ವಿಚಾರ ತಿಳಿದಿದ್ದರೂ ರಾಜ್ಯ ಬಿಜೆಪಿ ನಾಯಕರು ಕ್ರಿಮಿನಲ್ ಪರ ಪ್ರತಿಭಟನೆ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಾರು ಈ ಶ್ರೀಕಾಂತ್ ಪೂಜಾರಿ? ರಾಮ ಜನ್ಮಭೂಮಿ ಹೋರಾಟಗಾರನ ಹಿನ್ನೆಲೆ ಇಲ್ಲಿದೆ ನೋಡಿ

ಈ ಮಧ್ಯೆ, ಕರಸೇವಕರ ಬಂಧನ ಖಂಡಿಸಿ ಎರಡನೇ ದಿನವೂ ಬಿಜೆಪಿ ಪ್ರತಿಭಟನೆ ಮುಂದುವರಿದಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಬಿಜೆಪಿ ನಾಯಕರು ಪ್ರೊಫೈಲ್ ಪಿಕ್ಚರ್ ಬದಲಾಯಿಸುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ