ಬಾಗಲಕೋಟೆ: ಬಿಜೆಪಿ ಸಭೆಯಲ್ಲಿ ಜಟಾಪಟಿ, ಬೊಮ್ಮಾಯಿ, ಯತ್ನಾಳ್ ಭಾಗವಹಿಸಿದ್ದ ಸಭೆಯಲ್ಲೇ ಕಾರ್ಯಕರ್ತರ ಗಲಾಟೆ

ಬಿಜೆಪಿ ನಾಮನಿರ್ದೇಶಿತ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪೂಜಾರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಬಾಗಲಕೋಟೆ: ಬಿಜೆಪಿ ಸಭೆಯಲ್ಲಿ ಜಟಾಪಟಿ, ಬೊಮ್ಮಾಯಿ, ಯತ್ನಾಳ್ ಭಾಗವಹಿಸಿದ್ದ ಸಭೆಯಲ್ಲೇ ಕಾರ್ಯಕರ್ತರ ಗಲಾಟೆ
ಬಿಜೆಪಿ ಕಾರ್ಯಕರ್ತರ ಗಲಾಟೆ

Updated on: Jun 26, 2023 | 4:57 PM

ಬಾಗಲಕೋಟೆ: ಪಕ್ಷದ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲಿಗೆ ಎರಡು ಬಣಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಂಡಿದ್ದರಿಂದ ಸೋಮವಾರ ಬಾಗಲಕೋಟೆಯಲ್ಲಿ (Bagalkot) ನಡೆದ ಬಿಜೆಪಿ (BJP) ಜಿಲ್ಲಾ ಮುಖಂಡರ ಸಭೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಮಾಜಿ ಸಚಿವರಾದ ಗೋವಿಂದ್ ಕಾರಜೋಳ ಹಾಗೂ ಮುರುಗೇಶ್ ನಿರಾಣಿ ಅವರ ಎದುರೇ ಈ ಘಟನೆ ನಡೆದಿದೆ. ಬಿಜೆಪಿ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಮುಂದಿನ ಲೋಕಸಭೆ ಚುನಾವಣೆಗೆ ಸಿದ್ಧತೆಗಾಗಿ ಮತ್ತು ಕೇಂದ್ರದ ನರೇಂದ್ರ ಮೋದಿ ಸರ್ಕಾರ 9 ವರ್ಷ ಪೂರೈಸಿದ ಸಂಭ್ರಮಾಚರಣೆಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಭಾಗವಹಿಸಿದ್ದರು.

ಪ್ರಮುಖರು ಸ್ಥಳಕ್ಕೆ ಆಗಮಿಸುವ ಮುನ್ನವೇ ಬಿಜೆಪಿ ಅಭ್ಯರ್ಥಿ ಸೋಲಿಗೆ ಎರಡು ಗುಂಪುಗಳು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡಿಕೊಂಡವು. ಇದರಿಂದ ಗದ್ದಲದ ವಾತಾವರಣ ಸೃಷ್ಟಿಯಾಯಿತು.

ಬಿಜೆಪಿ ನಾಮನಿರ್ದೇಶಿತ ಅಭ್ಯರ್ಥಿ ವೀರಣ್ಣ ಚರಂತಿಮಠ ವಿರುದ್ಧ ಬಿಜೆಪಿ ಎಂಎಲ್‌ಸಿ ಪಿಎಚ್ ಪೂಜಾರ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದಕ್ಕೆ ಪೂಜಾರ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದು, ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆಯಿತು.

ಪೂಜಾರ ಪಾಳಯದ ಕೆಲವು ಬೆಂಬಲಿಗರನ್ನು ಸಭೆಯಿಂದ ಹೊರಗಿಡುವಂತೆ ಚರಂತಿಮಠ ಬೆಂಬಲಿಗರು ಒತ್ತಾಯಿಸಿದರು. ಚರಂತಿಮಠ ಅವರೇ ಪದೇ ಪದೇ ಮನವಿ ಮಾಡಿದರೂ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಇದನ್ನೂ ಓದಿ: ಪ್ರಧಾನಿ ಮೋದಿ ಸೋಲಲ್ಲ, ರಾಹುಲ್ ಗಾಂಧಿಗೆ ಮದುವೆ ಆಗಲ್ಲ: ಬಸವರಾಜ ಬೊಮ್ಮಾಯಿ

ಸ್ಥಳೀಯ ಮುಖಂಡರು ಮಧ್ಯಪ್ರವೇಶಿಸಿದರು ಮತ್ತು ಎರಡೂ ಬಣಗಳ ಕೆಲವು ಬೆಂಬಲಿಗರನ್ನು ಸ್ಥಳದಿಂದ ಹೊರಹೋಗುವಂತೆ ಕೇಳಲಾಯಿತು.

ಸ್ವಲ್ಪ ಸಮಯದ ನಂತರ ಬೊಮ್ಮಾಯಿ ಮತ್ತು ಯತ್ನಾಳ್ ಸ್ಥಳಕ್ಕೆ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಚ್​​​ವೈ ಮೇಟಿ ವಿರುದ್ಧ ಬಿಜೆಪಿ ಅಭ್ಯರ್ಥಿ ಚರಂತಿಮಠ ಪರಾಭವಗೊಂಡಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us