ಕುಮಾರಸ್ವಾಮಿ ಆರೋಪಗಳೆಲ್ಲ ಸತ್ಯ, ಒಗ್ಗಟ್ಟಾಗಿ ಹೋರಾಡುತ್ತೇವೆ; ಜೆಡಿಎಸ್, ಬಿಜೆಪಿ ಮೈತ್ರಿ ಸುಳಿವು ನೀಡಿದ ಯಡಿಯೂರಪ್ಪ

ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದೆಲ್ಲ ಸತ್ಯ ಮತ್ತು ಅವರ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ. ಮುಂದೆಯೂ ಒಗ್ಗಟ್ಟಾಗಿ ಹೋರಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಕುಮಾರಸ್ವಾಮಿ ಆರೋಪಗಳೆಲ್ಲ ಸತ್ಯ, ಒಗ್ಗಟ್ಟಾಗಿ ಹೋರಾಡುತ್ತೇವೆ; ಜೆಡಿಎಸ್, ಬಿಜೆಪಿ ಮೈತ್ರಿ ಸುಳಿವು ನೀಡಿದ ಯಡಿಯೂರಪ್ಪ
ಯಡಿಯೂರಪ್ಪ ಮತ್ತು ಕುಮಾರಸ್ವಾಮಿ

Updated on: Jul 04, 2023 | 3:21 PM

ಬೆಂಗಳೂರು: ಕರ್ನಾಟಕದ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಹಾಗೂ ಜೆಡಿಎಸ್ (BJP JDS) ಮೈತ್ರಿ ಮಾಡಿಕೊಳ್ಳಲಿವೆಯೇ ಎಂಬ ಕುತೂಹಲ ಹೆಚ್ಚಾಗಿದೆ. ಈ ಮಧ್ಯೆ, ಬಿಜೆಪಿ ಹಿರಿಯ ನಾಯಕ, ಸಂಸದೀಯ ಮಂಡಳಿ ಸದಸ್ಯರೂ ಆಗಿರುವ ಬಿಎಸ್ ಯಡಿಯೂರಪ್ಪ (BS Yediyurappa) ಅವರು, ತಮ್ಮ ಪಕ್ಷ ಮತ್ತು ಜೆಡಿಎಸ್ ಜತೆಯಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಅದರ ಸರ್ಕಾರದ ವಿರುದ್ಧ ಹೋರಾಡಲಿವೆ ಎಂದು ಹೇಳಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪ ಹೊತ್ತಿರುವ ನೂತನ ಕಾಂಗ್ರೆಸ್ ಸರ್ಕಾರದ ಮೇಲೆ ಕುಮಾರಸ್ವಾಮಿ ವಾಗ್ದಾಳಿ ನಡೆಸಿರುವುದನ್ನು ಬೆಂಬಲಿಸಿದರು. ಮುಖ್ಯಮಂತ್ರಿಗಳ ಕಚೇರಿಯಲ್ಲಿ ಅಧಿಕಾರಿಗಳ ವರ್ಗಾವಣೆಗೆ ಲಂಚ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯನವರ ಪುತ್ರ ಡಾ.ಯತೀಂದ್ರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿದ್ದಾರೆ.

ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದೆಲ್ಲ ಸತ್ಯ ಮತ್ತು ಅವರ ಹೇಳಿಕೆಯನ್ನು ನಾನು ಬೆಂಬಲಿಸುತ್ತೇನೆ. ಮುಂದೆಯೂ ಒಗ್ಗಟ್ಟಾಗಿ ಹೋರಾಡುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಯಡಿಯೂರಪ್ಪ ಅವರ ಮೈತ್ರಿ ಕುರಿತ ಸುಳಿವಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬಹುಶಃ ಇದು ವರ್ಷಾಂತ್ಯದಲ್ಲಿ ಅಥವಾ ಲೋಕಸಭೆ ಚುನಾವಣೆಯ ನಂತರ ಆಗಬಹುದು ಎಂದು ತಿಳಿಸಿರುವುದಾಗಿ ‘ನ್ಯೂಸ್ 9’ ವರದಿ ಮಾಡಿದೆ.

ಜಿಎಸ್‌ಟಿ ಇದೆ ಮತ್ತು ಜತೆಗೆ ವೈಎಸ್‌ಟಿಯೂ (ಯತೀಂದ್ರ ವಿಶೇಷ ತೆರಿಗೆ) ಇದೆ ಎಂದು ಕುಮಾರಸ್ವಾಮಿ ಒಂದೆರಡು ದಿನಗಳ ಹಿಂದೆ ಹೇಳಿದ್ದರು. ವರ್ಗಾವಣೆಗಾಗಿ ಕೆಎಸ್‌ಆರ್‌ಟಿಸಿ ಮತ್ತು ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಸಿಂಡಿಕೇಟ್‌ಗಳಿವೆ ಎಂದಿದ್ದರು. ಬಿಜೆಪಿಯ ಫೈರ್‌ಬ್ರಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡ ಕುಮಾರಸ್ವಾಮಿ ಆರೋಪವನ್ನು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಂತೆ ರಾಜ್ಯದಲ್ಲೂ ಕ್ಷಿಪ್ರಕ್ರಾಂತಿ, ಕರ್ನಾಟಕದ ಅಜಿತ್ ಪವಾರ್​ ಕಾಯುತ್ತಿದ್ದಾನೆ: ಈಶ್ವರಪ್ಪ ಬಾಂಬ್

ಇತ್ತೀಚಿನ ಚುನಾವಣೆಯಲ್ಲಿ ತಮ್ಮ ಪಕ್ಷದ ಪತನದ ನಂತರ, ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಿಶೇಷವಾಗಿ ಆರೋಪಗಳ ಸುರಿಮಳೆಗೈಯುತ್ತಿದ್ದಾರೆ.

ಬಿಜೆಪಿಯೇತರ 19 ಪಕ್ಷಗಳು ಬಹಿಷ್ಕರಿಸಿರುವ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಮೂಲಕ ಬಿಜೆಪಿಗೆ ಹತ್ತಿರವಾಗುವ ಮೊದಲ ಸುಳಿವನ್ನು ಕುಮಾರಸ್ವಾಮಿ ಅವರ ತಂದೆ ಮತ್ತು ಪಕ್ಷದ ವರಿಷ್ಠ ಹೆಚ್​​ಡಿ ದೇವೇಗೌಡ ನೀಡಿದ್ದರು.

ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:19 pm, Tue, 4 July 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us