ರಾಜಕೀಯ ಲಾಭದ ದುರುದ್ದೇಶದ ಪರಿಷ್ಕೃತ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ: ಸಿದ್ದರಾಮಯ್ಯ

|

Updated on: Mar 24, 2023 | 10:47 PM

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಇಂದು ಕೈಗೊಂಡ ನಿರ್ಣಯದಂತೆ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ.

ರಾಜಕೀಯ ಲಾಭದ ದುರುದ್ದೇಶದ ಪರಿಷ್ಕೃತ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ: ಸಿದ್ದರಾಮಯ್ಯ
ಸಿದ್ದರಾಮಯ್ಯ ಮತ್ತು ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಪರಿಷ್ಕೃತ ಮೀಸಲಾತಿ ನೀತಿ ‘ಕನ್ನಡಿಯೊಳಗಿನ ಗಂಟು’ ಅಷ್ಟೆ. ಚುನಾವಣೆಯಲ್ಲಿ ರಾಜಕೀಯ ಲಾಭದ ದುರುದ್ದೇಶದ ಈ ಮೀಸಲಾತಿ ನೀತಿಯಿಂದ ಯಾವ ಸಮುದಾಯಕ್ಕೂ ಲಾಭ ಇಲ್ಲ. ಇಂತಹ ಗಿಮಿಕ್​ಗಳಿಗೆ ಜನ ಬಲಿಯಾಗಬಾರದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಹಿಂದುಳಿದ ಜಾತಿಗುಂಪಿನಲ್ಲಿದ್ದ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇಕಡಾ 4ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿ ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಲಾಗಿದೆ. ಒಬ್ಬರಿಂದ ಕಿತ್ತು ಇನ್ನೊಬ್ಬರಿಗೆ ನೀಡುವ ಮೂಲಕ ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ ಎಂದರು.

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿಯ ಅನುಷ್ಠಾನ ಒಂದು ದೀರ್ಘ ಪ್ರಕ್ರಿಯೆ. ಇದಕ್ಕಾಗಿ ಸಂವಿಧಾನದ ಪರಿಚ್ಛೇದ 341ಕ್ಕೆ ತಿದ್ದುಪಡಿ ಮಾಡಬೇಕಾಗುತ್ತದೆ. ಈ ಬಗ್ಗೆ ಸಂಪುಟ ಕೈಗೊಂಡಿದ್ದ ತೀರ್ಮಾನವನ್ನು ಇಲ್ಲಿಯವರೆಗೆ ಕೇಂದ್ರ ಸರ್ಕಾರಕ್ಕೆ ಕಳಿಸದೆ ಇರುವುದು ರಾಜ್ಯ ಸರ್ಕಾರದ ಅಪ್ರಮಾಣಿಕತೆಗೆ ಸಾಕ್ಷಿ. ಮುಸ್ಲಿಮರಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿಗಳು ಹೇಳಿದ್ದರೂ ಇದು ಸುಲಭಸಾಧ್ಯ ಅಲ್ಲ. ಬೇರೆ ರಾಜ್ಯಗಳಲ್ಲಿಯೂ ಮುಸ್ಲಿಮರು ಇರುವ ಕಾರಣ ಒಂದು ರಾಜ್ಯದ ವ್ಯಾಪ್ತಿಯಲ್ಲಿ ಮೀಸಲಾತಿ ಮರುಹಂಚಿಕೆ ಮಾಡಲು ಸಾಧ್ಯ ಇಲ್ಲ ಎಂದರು.

ಇದನ್ನೂ ಓದಿ: ಸಿದ್ದರಾಮಯ್ಯಜಿ ಬಾದಾಮಿಯಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡುತ್ತೇನೆ: ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ ಹೆಚ್ಚಿಸಲಾಗಿದೆ. ಇದಕ್ಕಾಗಿ ಮುಸ್ಲಿಮರಿಗೆ 2ಬಿ ಅಡಿ ನೀಡಲಾಗುತ್ತಿದ್ದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ. ಆದರೆ ಅವರಿಗೆ ಆರ್ಥಿಕವಾಗಿ ಹಿಂದುಳಿದವರ ವರ್ಗದಲ್ಲಿ (EWS) ಮೀಸಲಾತಿ ನೀಡಲು ನಿರ್ಧರಿಸಲಾಗಿದೆ. ಈ ಮೂಲಕ ಚುನಾವಣೆ ಸಂದರ್ಭದಲ್ಲಿ ಎರಡು ಬೃಹತ್ ಸಮುದಾಯಗಳನ್ನು ಸೆಳೆಯುವ ತಂತ್ರಗಾರಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡಿದೆ.

ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ವಾತಂತ್ರ್ಯ ಬಂದ ನಂತರ ಪ್ರಮುಖ ನಿರ್ಣಯ ಕೈಗೊಳ್ಳಲಾಗಿದೆ. ಕಾಲಕಾಲಕ್ಕೆ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಹಲವು ಸಮಿತಿಗಳನ್ನು ರಚಿಸಲಾಗಿದೆ, ಆದರೆ, ನಂತರ ಅವುಗಳ ಶಿಫಾರಸನ್ನು ಜಾರಿಮಾಡಿರಲಿಲ್ಲ. ಹಲವಾರು ವರದಿಗಳ ಜಾರಿಗೆ ಸರ್ಕಾರಗಳು ಮುಂದಾಗಿರಲಿಲ್ಲ. ಜೇನುಗೂಡಿಗೆ ಕೈಹಾಕಿದಂತೆ ಎಂದು ಸರ್ಕಾರಗಳು ಸುಮ್ಮನಾಗುತ್ತಿದ್ದವು. ಆದರೆ ನಾವು ಎಸ್​​ಸಿ ಎಸ್​ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಹಿಂದುಳಿದ ವರ್ಗದಲ್ಲಿ ಒಂದೇ ಕೆಟಗರಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರಿಗೆ 7 ರಾಜ್ಯಗಳಲ್ಲಿ ಒಬಿಸಿ ಮೀಸಲಾತಿ ಇಲ್ಲ. 2ಬಿ ಅಡಿ ಮೀಸಲಾತಿ ನೀಡಿಲ್ಲ. 2C ಅಡಿ ಒಕ್ಕಲಿಗರಿಗೆ ಶೇಕಡಾ 6ರಷ್ಟು ಮೀಸಲಾತಿ ಹಾಗೂ 2D ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು. ಎಸ್​​ಸಿಎಸ್​​ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಈಗ ಅದು ಅನುಷ್ಠಾನ ಹಂತದಲ್ಲಿ ಇದೆ. ನೇಮಕಾತಿ, ಬಡ್ತಿ ಇದೇ ಆಧಾರದಲ್ಲಿ ಆಗುತ್ತಿದೆ. 9 ನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡಿದ್ದೇವೆ. ಒಳಮೀಸಲಾತಿ ಬಗ್ಗೆ ಕ್ಯಾಬಿನೆಟ್ ಉಪ ಸಮಿತಿ ಸಹ ರಚನೆ ಮಾಡಲಾಗಿತ್ತು. ಎಸ್​​ಸಿ ಮೀಸಲಾತಿಯಲ್ಲಿ ಎಲ್ಲರಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಆರ್ಟಿಕಲ್ 341 (2) ಅನ್ವಯ ನಾಲ್ಕು ಗುಂಪುಗಳಾಗಿ ವರ್ಗೀಕರಣ ಮಾಡಲಾಗಿದೆ. ಎಸ್​ಸಿ ಲೆಫ್ಟ್ 6,‌ ಎಸ್​​ಸಿ ರೈಟ್ 5.5, ಸ್ಪರ್ಶ 4.5 ಹಾಗೂ ಇತರರಿಗೆ 1 ಮೀಸಲಾತಿ ಶಿಫಾರಸ್ಸು ಮಾಡಲು ಸಂಪುಟ ಸಮ್ಮತಿಸಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Fri, 24 March 23