
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಭ್ರಷ್ಟಾಚಾರ ಮುಕ್ತ (Corruption Free) ಆಡಳಿತ ನೀಡುತ್ತೇವೆ ಎಂದು ಹೇಳಲಿ ನೋಡೋಣ. ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳಲಿ. ಪಂಚರತ್ನ ಯಾತ್ರೆ ಮಾಡುತ್ತಿದ್ದಾರಲ್ಲ ಅಲ್ಲಿ ಹೇಳಲಿ. ಎಲ್ಲವನ್ನೂ ರಾಜ್ಯದ ಜನರು ತಿರ್ಮಾನ ಮಾಡುತ್ತಾರೆ ಎಂದು ಸಚಿವ ಡಾ. ಕೆ. ಸುಧಾಕರ್ (K Sudhakar) ಸವಾಲ್ ಹಾಕಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sahah) ಬಳ್ಳಾರಿ (Bellary) ಭೇಟಿ ವೇಳೆ ಮುಂದಿನ ಬಾರಿ ಅಧಿಕಾರಕ್ಕೆ ಬಂದರೇ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದರು. ಈ ವಿಚಾರವಾಗಿ ಹೆಚ್. ಡಿ ಕುಮಾರಸ್ವಾಮಿ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡುತ್ತೇವೆ ಎನ್ನುವವರು ಮೂರು ವರ್ಷದಿಂದ ಏನ್ ಮಾಡಿದ್ರು..? ಎಂದು ಟಾಂಗ್ ಕೊಟ್ಟಿದ್ದರು.
ಈ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಯಾರ ಕಾಲದಲ್ಲಿ ಏನಾಗಿದೆ ಎಂದು ಆತ್ಮಾಲೋಕನ ಮಾಡಿಕೊಳ್ಳಲಿ. ಬಿಜೆಪಿ ಹಿರಿಯ ನಾಯಕರಾಗಿ ಅಮಿತ್ ಶಾ ಜನರಿಗೆ ಭರವಸೆ ನೀಡಿದ್ದಾರೆ. ಭ್ರಷ್ಟಾಚಾರ ಮುಕ್ತ ಆಡಳಿತ ಕೊಡುತ್ತೇವೆ ಅಂತ ಅಮಿತ್ ಶಾ ಹೇಳಿದ್ದಾರೆ. ಹೆಚ್ ಡಿ ಕುಮಾರಸ್ವಾಮಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಲಿ ನೋಡೋಣ ಎಂದು ಪ್ರಶ್ನಿಸಿದರು.
17 ಕ್ಷೇತ್ರಗಳ ಉಪಚುನಾವಣೆ ವೇಳೆ ಬಿಜೆಪಿಗೆ ಎಲ್ಲಿಂದ ಹಣ ಬಂತು? ಎಂಬ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಧಾಕರ್ ರಾಜಕೀಯ ಕ್ಷೇತ್ರದಲ್ಲಿ ಅವ್ಯವಸ್ಥೆ ಆಗಿರುವುದನ್ನು ನಾನು ಒಪ್ಪಿಕೊಳ್ಳುವೆ. ಆರೋಪ, ಪ್ರತ್ಯಾರೋಪಗಳಿಂದ ಜನರ ನಂಬಿಕೆ ಕಳೆದುಕೊಳ್ಳುತ್ತೇವೆ. ನಾವೆಲ್ಲರೂ ಸೇರಿ ವ್ಯವಸ್ಥೆಯನ್ನು ಸರಿಪಡಿಸಬೇಕು ಎಂದರು.
ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ. ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಸರ್ಕಾರ, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲೂ ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ. ಹೆಚ್.ಡಿ.ಕುಮಾರಸ್ವಾಮಿ ಕೇವಲ ಸುಳ್ಳು ಆರೋಪ ಮಾಡುತ್ತಾರೆ. ಹೆಚ್.ಡಿ ಕುಮಾರಸ್ವಾಮಿ ತಮ್ಮ ಆರೋಪಗಳಿಗೆ ಯಾವುದೇ ದಾಖಲೆ ಒದಗಿಸಿಲ್ಲ ಎಂದು ವಾಗ್ದಾಳಿ ಮಾಡಿದರು.
ರಾಜ್ಯದಲ್ಲಿ ಮಠ ಪಾಲಿಟಿಕ್ಸ್ ಆರೋಪ ವಿಚಾರವಾಗಿ ಮಾತನಾಡಿದ ಅವರು ಬಿಜೆಪಿ ಹಿಂದುತ್ವದ ಆಶಯ ಇಟ್ಟುಕೊಂಡಿದೆ. ಮಠ ಮಾನ್ಯಗಳಿಗೆ ಜನ ವಿಶೇಷ ಸ್ಥಾನಮಾನ ಕೊಟ್ಟಿದ್ದಾರೆ. ಭಕ್ತರು ಮಠಗಳಿಗೆ ಹೋಗುವ ರೀತಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರು ಮಠಗಳಿಗೆ ಹೊಗುತ್ತಾರೆ. ಮಠಗಳಿಗೆ ಹೋಗಿ ಆಶಿರ್ವಾದ ಪಡೆಯುವುದರಲ್ಲಿ ಏನು ವಿಶೇಷ ಇದೆ. ಈಗ ಚುನಾವಣೆ ಹಿನ್ನಲೆ ವಿಪಕ್ಷಗಳು ಆರೋಪ ಮಾಡುತ್ತಾರೆ ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ