Madal Virupakshappa: ಕೊನೆಗೂ ಜೈಲಿನಿಂದ ಹೊರಬಂದ ಮಾಡಾಳ್ ವಿರೂಪಾಕ್ಷಪ್ಪ​​, ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿದ್ದಿಷ್ಟು

|

Updated on: Apr 15, 2023 | 9:47 PM

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಮಾಡಾಳ್​ ಬಿಡುಗಡೆ ಆಗಿದ್ದಾರೆ.

Madal Virupakshappa: ಕೊನೆಗೂ ಜೈಲಿನಿಂದ ಹೊರಬಂದ ಮಾಡಾಳ್ ವಿರೂಪಾಕ್ಷಪ್ಪ​​, ಮುಂದಿನ ರಾಜಕೀಯ ನಡೆ ಬಗ್ಗೆ ಹೇಳಿದ್ದಿಷ್ಟು
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ
Follow us on

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಟೆಂಡರ್​ಗಾಗಿ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ (Madal Virupakshapp) ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶನಿವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಪ್ರಕ್ರಿಯೆ ಮುಗಿಸಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಮಾಡಾಳ್​ ಬಿಡುಗಡೆ ಆಗಿದ್ದಾರೆ. ಬಳಿಕ ಪ್ರತಿಕ್ರಿಯೆ ನೀಡಿದ ಮಾಡಾಳ್ ವಿರೂಪಾಕ್ಷಪ್ಪ, ಭಾರತದ ನ್ಯಾಯಾಂಗದ ಬಗ್ಗೆ ನನಗೆ ವಿಶ್ವಾಸದೆ. ಈ ಆರೋಪದಿಂದ ನಾನು ಮುಕ್ತನಾಗುತ್ತೇನೆ. ನಾಲ್ಕು ಗೋಡೆಗಳ ಮಧ್ಯೆ ನಾನಿದ್ದೆ. ಯಾವುದೇ ಟಿವಿ ಮಾಧ್ಯಮಗಳು ಅಲ್ಲಿಲ್ಲ. ಮನೆಗೆ ಹೋದ ಮೇಲೆ ಮಾಧ್ಯಮಗಳನ್ನ ನೋಡಿದ ಮೇಲೆ ರಾಜಕೀಯ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಏನನ್ನ ಹೇಳುವ ಪರಿಸ್ಥಿತಿಯಲ್ಲಿಲ್ಲ. ಹೊರಗಡೆ ಏನು ನಡೆದಿದೆ ಎಂಬುದರ ಅರಿವಿಲ್ಲ. ಮನೆಗೆ ಹೋಗಿ ಮುಂದಿನ ರಾಜಕೀಯ ನಡೆಯ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ ಎಂದು ಹೇಳಿದರು.

ವಿವಾಹ ವಾರ್ಷಿಕೋತ್ಸವದ ದಿನವೇ ಜಾಮೀನು  

ವಿವಾಹ ವಾರ್ಷಿಕೋತ್ಸವದ ದಿನವೇ ಮಾಡಾಳ್​ಗೆ ಜಾಮೀನು ಮಂಜೂರು ಮಾಡಿದ್ದು 19 ದಿನ ಜೈಲು ವಾಸ ಮುಗಿಸಿ ನಾಳೆ ಮನೆಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆ ಮತ್ತೆ ಚನ್ನಗಿರಿ ರಾಜಕೀಯದಲ್ಲಿ ಸಂಚಲನ ಶುರುವಾಗಿದೆ. ತಂದೆಯ ಆಗಮನದ ಹಿನ್ನೆಲೆ ಹಿರಿಯ ಪುತ್ರ ಮಾಡಾಳ್ ಮಲ್ಲಿಕಾರ್ಜುನ ನಾಳೆ ಬೆಂಬಲಿ ಸಭೆ ಕರೆದಿದ್ದಾರೆ. ಈಗಾಗಲೇ ಚನ್ನಗಿರಿ ಬಿಜೆಪಿ ಟಿಕೆಟ್ ಎಚ್​​.ಎಸ್ ಶಿವಕುಮಾರ್ ಎಂಬುವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಗಾಗಿ ಪಕ್ಷೇತರವಾಗಿ ಸ್ಪರ್ಧಿಸುವ ಕುರಿತು ತಂದೆ ಜೊತೆ ಚರ್ಚಿಸಿ ಮಾಡಾಳ್ ಮಲ್ಲಿಕಾರ್ಜುನ ನಿರ್ಧಾರ ತೆಗೆದುಕೊಳ್ಳಲ್ಲಿದ್ದಾರೆ. ಪುತ್ರನ ರಾಜಕೀಯ ಭವಿಷ್ಯದ ಹಿನ್ನೆಲೆ ಮಾಡಾಳ್ ಮತ್ತೆ ರಾಜಕೀಯ ಅಖಾಡಕ್ಕೆ ನುಗ್ಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮಾಡಾಳ್ ಪುತ್ರ ಪ್ರಶಾಂತ್ ಬೆಂಗಳೂರು ಜಲಪೂರೈಕೆ ಮತ್ತು ಒಳಚರಂಡಿ ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದು, ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಯಿಟ್ಟಿದ್ದರು ಎಂಬ ಆರೋಪ ಅವರ ಮೇಲಿದೆ. ಲೋಕಾಯುಕ್ತ ದಾಳಿ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿದ್ದವು. ನಂತರ ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಮೊದಲ ಆರೋಪಿಯನ್ನಾಗಿ ಹೆಸರಿಸಿದ್ದರು.

ಇದನ್ನೂ ಓದಿ: Madal Virupakshappa: ಲಂಚ ಪ್ರಕರಣ; ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಮಾಡಾಳ್ ಅವರ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀರ ಬಲೆಗೆ ಬಿದ್ದಿದ್ದರು. ನಂತರ ಮಾಡಾಳ್ ವಿರೂಪಾಕ್ಷಪ್ಪ ಅವರ ದಾವಣಗೆರೆ ನಿವಾಸದ ಮೇಲೂ ಲೋಕಾಯುಕ್ತ ದಾಳಿ ನಡೆದಿತ್ತು. ಅಲ್ಲಿಯೂ ಕೋಟ್ಯಂತರ ರೂ. ನಗದು ಪತ್ತೆಯಾಗಿತ್ತು. ಬಳಿಕ ನಾಪತ್ತೆಯಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ದೊರೆತ ನಂತರ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು. ಅವರಿಗೆ ತರಾತುರಿಯಲ್ಲಿ ಜಾಮೀನು ಮಂಜೂರು ಮಾಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು.

ಮಾಡಾಳ್ ವಿರೂಪಾಕ್ಷಪ್ಪ ಹೋರಾಟ

ಮಾಡಾಳ್ ವಿರೂಪಾಕ್ಷಪ್ಪ 2004ರಲ್ಲಿ ಮೊದಲ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಬಳಿಕ 2008ರಲ್ಲಿ ಗೆಲ್ಲುವ ಮೂಲಕ ಚನ್ನಗಿರಿಯಲ್ಲಿ ಕಮಲ ಅರಳಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ 2013ರಲ್ಲಿ ಯಡಿಯೂರಪ್ಪನವರ ಹಿಂದೆ ಹೋಗಿ ಕೆಜೆಪಿಯಿಂದ ಸ್ಪರ್ಧಿಸಿದ್ದ ಮಾಡಾಳ್​, ವಡ್ನಾಳ್​ ರಾಜಣ್ಣ ವಿರುದ್ಧ ಸೋಲು ಅನುಭವಿಸಿದ್ದರು.

ಇದನ್ನೂ ಓದಿ: Madal Virupakshappa: ಪಕ್ಷದಿಂದ ಉಚ್ಚಾಟಿಸುವುದಾಗಿ ಸಿಎಂ ಹೇಳಿದ್ದರು; ಮಾಡಾಳ್ ವಿರೂಪಾಕ್ಷಪ್ಪ

ಇನ್ನು ಕಳೆದ ಚುನಾವಣೆಯಲ್ಲಿ ಅಂದ್ರೆ 2028ರಲ್ಲಿ ನಡೆದ ಚುನಾವಣೆಯಲ್ಲಿ ಮತ್ತೆ ವಾಪಸ್​ ಬಿಜೆಪಿಯಿಂದ ಕಣಕ್ಕಿಳಿದು ವಡ್ನಾಳ್​ ರಾಜಣ್ಣ ವಿರುದ್ಧ ವಿಜಯ ಪತಾಕೆ ಹಾರಿಸಿದ್ದರು. ಈ ಮೂಲಕ ಸೋಲಿ ಸೇಡು ತೀರಿಸಿಕೊಂಡಿದ್ದರು. ಹೀಗೆ ಈ ಇಬ್ಬರು ಪ್ರತಿಸ್ಪರ್ಧಿಗಳಾಗಿ ಒಮ್ಮೆ ವಡ್ನಾಳ್ ರಾಜಣ್ಣ ಮತ್ತೊಮ್ಮೆ ಮಾಡಾಳ್​ ಗೆಲ್ಲುತ್ತಾ ಬಂದಿದ್ದಾರೆ. ಆದ್ರೆ, ಈ ಬಾರಿ ಮಾಡಾಳ್​ ಜೈಲು ಸೇರಿದ್ದು, ಬಿಜೆಪಿ ಟಿಕೆಟ್​ ಬೇರೆಯವರ ಪಾಲಾಗುವ ಸಾಧ್ಯತೆಗಳು ಹೆಚ್ಚಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:41 pm, Sat, 15 April 23