AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ವಿಚಾರದಲ್ಲಿ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿರುವ ದ್ರೋಹಿಗಳು: ಡಿಎಂಕೆ ಪ್ರಣಾಳಿಕೆ ಪ್ರಸ್ತಾಪಿಸಿ ಅಶೋಕ್ ವಾಗ್ದಾಳಿ

ಲೋಕಸಭೆ ಚುನಾವಣೆಯಲ್ಲಿ ಗೆದ್ದರೆ ಮೇಕೆದಾಟು ಯೋಜನೆಗೆ ತಡೆಯುಟ್ಟುವುದಾಗಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಅಂಗ ಪಕ್ಷವಾಗಿರುವ ಡಿಎಂಕೆ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರಸ್ತಾಪಿಸಿರುವುದು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ.

ಮೇಕೆದಾಟು ವಿಚಾರದಲ್ಲಿ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿರುವ ದ್ರೋಹಿಗಳು: ಡಿಎಂಕೆ ಪ್ರಣಾಳಿಕೆ ಪ್ರಸ್ತಾಪಿಸಿ ಅಶೋಕ್ ವಾಗ್ದಾಳಿ
ಆರ್ ಅಶೋಕ & ಡಿಕೆ ಶಿವಕುಮಾರ್
Ganapathi Sharma
|

Updated on: Mar 21, 2024 | 11:22 AM

Share

ಬೆಂಗಳೂರು, ಮಾರ್ಚ್ 21: ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಗೆದ್ದರೆ ಕರ್ನಾಟಕ ಸರ್ಕಾರದ ಮೇಕೆದಾಟು ಯೋಜನೆಗೆ ತಡೆಯೊಡ್ಡಲಾಗುವುದು ಎಂದು ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವುದನ್ನು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಖಂಡಿಸಿದ್ದಾರೆ. ಅಲ್ಲದೆ ಈ ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೇಕೆದಾಟು ಯೋಜನೆ ಜಾರಿಗೊಳಿಸುವುದಾಗಿ ಹೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದವರು ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಡಿಎಂಕೆ ಚುನಾವಣಾ ಪ್ರಣಾಳಿಕೆ ವಿಚಾರವಾಗಿ ಮಾಧ್ಯಮ ವರದಿಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅಶೋಕ್, ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

‘ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ‘ಇಂಡಿಯಾ’ ಮಿತ್ರಪಕ್ಷ ಡಿಎಂಕೆ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ’ ಎಂದು ಅಶೋಕ್ ಪ್ರಶ್ನೆ ಮಾಡಿದ್ದಾರೆ.

‘ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ’ ಎಂದು ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ

‘ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸಲಾಗುವುದು ಎಂದು ಘಂಟಾಘೋಷವಾಗಿ ಹೇಳಿರುವ ತಮಿಳು ನಾಡಿನ ಮುಖ್ಯ ಮಂತ್ರಿಗಳಾದ ಸ್ಟಾಲಿನ್ ಅವರ ಮಾತುಗಳನ್ನು ಧಿಕ್ಕರಿಸಿ ಇಂಡಿಯಾ ಮೈತ್ರಿಕೂಟದಿಂದ ಡಿಎಂಕೆಯನ್ನು ಕಿತ್ತೆಸೆಯುವ ತಾಕತ್ತು, ಕನ್ನಡಿಗರ ನೀರನ್ನು ಹಕ್ಕನ್ನು ರಕ್ಷಿಸುವ ಸ್ವಾಭಿಮಾನ ಕಾಂಗ್ರೆಸ್ ಪಕ್ಷಕ್ಕೆ ಇದೆಯೇ? ಕುಡಿಯುವ ನೀರಿನ ಯೋಜನೆಗೆ ಕಡಿವಾಣ ಹಾಕುವ ಪಕ್ಷಕ್ಕೆ ಕನ್ನಡಿಗರು ಮತ ಹಾಕಬೇಕೆ’ ಎಂದು ವಿಜಯಪುರ ಬಿಜೆಪಿ ಶಾಸಕ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್​ಗೆ ಮುಜುಗರ

‘ಇಂಡಿಯಾ’ ಮೈತ್ರಿಕೂಟದ ಸದಸ್ಯ ಪಕ್ಷವಾಗಿರುವ ಡಿಎಂಕೆ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೆದಾಟು ಪ್ರಸ್ತಾಪಿಸಿರುವುದು ಕರ್ನಾಟಕ ಕಾಂಗ್ರೆಸ್​​ಗೆ ಮುಜುಗರ ಉಂಟುಮಾಡಿದೆ. ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗು ಮುನ್ನ ‘ನಮ್ಮ ನೀರು ನಮ್ಮ ಹಕ್ಕು’ ಎಂದು ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಾದಯಾತ್ರೆ ನಡೆಸಿತ್ತು.

ಇದನ್ನೂ ಓದಿ: ಬಿಜೆಪಿ ತೊರೆದ ಸಂಸದ ಬಿ.ಎನ್ ಬಚ್ಚೇಗೌಡ, ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಈಗಾಗಲೇ ತಮಿಳುನಾಡಿಗೆ ನೀರು ಬಿಟ್ಟಿರುವ ವಿಚಾರವಾಗಿ ಕಾಂಗ್ರೆಸ್ ಸರ್ಕಾರವನ್ನು ಪ್ರತಿಪಕ್ಷ ಬಿಜೆಪಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಸಮಸ್ಯೆಗೆ ಕಾಂಗ್ರೆಸ್ ಸಿಕ್ಕಿಹಾಕಿಕೊಂಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ