ಮತ್ತೆ ದಲಿತ ಸಿಎಂ ಧ್ವನಿ ಎತ್ತಿದ ಪರಮೇಶ್ವರ್, 2018ರಲ್ಲಿ ದಲಿತರನ್ನು ಕಡೆಗಣಿಸಿದ್ದಕ್ಕೆ ಕಾಂಗ್ರೆಸ್​ಗೆ ಸೋಲಾಯ್ತು ಎಂದ ಸಚಿವ​

ಸಚಿವ ಡಾ ಜಿ ಪರಮೇಶ್ವರ್ ಅವರು ಮತ್ತೆ ದಲಿತ ಮುಖ್ಯಮಂತ್ರಿ ಧ್ವನಿ ಎತ್ತಿದ್ದಾರೆ. ಅಲ್ಲದೇ ಪರೋಕ್ಷವಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

ಮತ್ತೆ ದಲಿತ ಸಿಎಂ ಧ್ವನಿ ಎತ್ತಿದ ಪರಮೇಶ್ವರ್, 2018ರಲ್ಲಿ ದಲಿತರನ್ನು ಕಡೆಗಣಿಸಿದ್ದಕ್ಕೆ ಕಾಂಗ್ರೆಸ್​ಗೆ ಸೋಲಾಯ್ತು ಎಂದ ಸಚಿವ​
ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್

Updated on: Jun 13, 2023 | 6:32 PM

ಬೆಂಗಳೂರು: ಈ ಬಾರಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿ ಅಧಿಕಾರಕ್ಕೇರಿದೆ. ಉಪಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಾ.ಜಿ ಪರಮೇಶ್ವರ್​ ಅವರಿಗೆ ನಿರಾಸೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಸಚಿವ ಪರಮೇಶ್ವರ್ ಮತ್ತೆ ದಲಿತ ಮುಖ್ಯಮಂತ್ರಿ ಬಗ್ಗೆ ಧ್ವನಿ ಎತ್ತಿ ರಾಜ್ಯ ರಾಜಕಾರಣದಲ್ಲಿ ಚರ್ಚೆ ಹುಟ್ಟುಹಾಕಿದ್ದಾರೆ. ಬೆಂಗಳೂರಿನ ವಸಂತ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ದಲಿತ ಸಮುದಾಯದ ಸಚಿವರಿಗೆ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಪರಮೇಶ್ವರ್, ನಾನು ಯಾಕೆ ಸಿಎಂ ಆಗಬಾರದು. ಮುನಿಯಪ್ಪ ಯಾಕಾಗಬಾರದು? ಮಹದೇವಪ್ಪ ಯಾಕಾಗಬಾರದು? ನಮಗೆ ಸಿಎಂ ಆಗುವ ಅವಕಾಶಗಳನ್ನು ತಪ್ಪಿಸಿದ್ದಾರೆ. ನಮ್ಮಲ್ಲಿ ಕೀಳರಿಮೆ ಇರಬಾರದು. ನಮ್ಮಲ್ಲಿ ಒಗ್ಗಟ್ಟು ಇದ್ದರೆ ಮಾತ್ರ ಉಳಿದುಕೊಳ್ಳುತ್ತೇವೆ. ಅದನ್ನು ಬಿಟ್ಟು ಎಡಗೈ, ಬಲಗೈ ಸಮುದಾಯ ಅಂತಿದ್ದರೆ ಸಾಧಿಸಲಾಗಲ್ಲ. ನಮ್ಮಲ್ಲಿ ಒಗ್ಗಟ್ಟು ಮೂಡಿದರೆ ಮಾತ್ರ ಏನಾದರೂ ಸಾಧಿಸಲು ಸಾಧ್ಯ ಎಂದು ಗುಡುಗಿದರು.

ನನ್ನ ನೇತೃತ್ವದಲ್ಲಿ 2013ರ ಚುನಾವಣೆಯಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿತ್ತು. ಆದ್ರೆ ಪರಮೇಶ್ವರ್ ನೇತೃತ್ವದಲ್ಲಿ ಅಧಿಕಾರಕ್ಕೆ ಬಂತು ಯಾರೂ ಹೇಳಲಿಲ್ಲ. ನನ್ನ ನೇತೃತ್ವದಲ್ಲಿ ಅಧಿಕಾರ ಬಂತು ಎಂದು ನಾನು ಹೇಳಿಕೊಳ್ಳಲಿಲ್ಲ. ಆದ್ರೆ, 2018ರಲ್ಲಿ ದಲಿತರನ್ನು ಕಡೆಗಣಿಸಿದ್ದಕ್ಕೆ ಕಾಂಗ್ರೆಸ್​ ಪಕ್ಷಕ್ಕೆ ಸೋಲಾಯಿತು. ಯಾವ ಸಮುದಾಯ ಕಡೆಗಣಿಸಿದ್ರೋ ಅವರಿಂದ ಪಾಠ ಕಲಿಬೇಕಾಯ್ತು ಎಂದು ಪರೋಕ್ಷವಾಗಿ ತಮನ್ನು ಸಿಎಂ ಮಾಡದೇ ಕಡೆಗಣಿಸಿದಕ್ಕೆ 2018ರಲ್ಲಿ ಕಾಂಗ್ರೆಸ್ ಸೋಲಾಯ್ತು ಎಂದು ಹೇಳಿದರು. ಅಲ್ಲದೇ ಸಿದ್ದರಾಮಯ್ಯನವರಿಗೆ ಟಾಂಗ್ ಕೊಟ್ಟರು.

ಮುನಿಯಪ್ಪ ನೇತೃತ್ವದಲ್ಲಿ ಜಗಜೀವನ್ ರಾಮ್ ಜಯಂತಿ‌ ಮಾಡಲು ಹೇಳಿದ್ರು. ನನ್ನ ನೇತೃತ್ವದಲ್ಲಿ ಡಾ.ಅಂಬೇಡ್ಕರ್ ಜಯಂತಿ ಮಾಡಲು ಹೇಳಿದ್ರು. ಜಗಜೀವನರಾಮ್ ಎಡಗೈ ಅಂಬೇಡ್ಕರ್ ಬಲಗೈ ಅಂತ ನಮಗೆ ಮಾಡುವುದಕ್ಕೆ ಹೇಳ್ತಿದಾರೆ. ಇದರೊಂದಿಗೆ ಅಲ್ಲೂ ನಮ್ಮನ್ನು ಒಡೆದು ಆಳುವುದಕ್ಕೆ ನೋಡಿದರು. ನಾವು ಮಾಡುವುದು ಬೇಡ ಒಪ್ಪೋದು ಬೇಡ ಅಂತ ಮುನಿಯಪ್ಪಗೆ ನಾನೇ ಹೇಳಿದ್ದೆ ಎಂದು ತಿಳಿಸಿದರು.

ನಮ್ಮ ಪಕ್ಷದ ಆಂತರಿಕ ವಲಯದಲ್ಲಿ ಗೆಲುವಿನ ಪರಮರ್ಷೆ ಮಾಡುವಾಗ ಈ ಬಾರಿ ದಲಿತರು ನಮ್ಮನ್ನು ಕೈ ಹಿಡಿದಿದ್ದಾರೆ ಎಂದು ಮಾತನಾಡುತ್ತಾರೆ. ಮುಸ್ಲಿಮರು 100% ನಮ್ಮ ಕೈ ಹಿಡಿದಿದ್ದಾರೆ ಎಂದು ಹೇಳುತ್ತಾರೆ. . ನಮ್ಮ ಬಗ್ಗೆ ಈಗ ಎಲ್ಲರಿಗೆ ಗೊತ್ತಾಗಿದೆ. 51 ಮೀಸಲು ಕ್ಷೇತ್ರಗಳ ಪೈಕಿ 32ರಲ್ಲಿ ಗೆದ್ದಿದ್ದೇವೆ. ಕಾಂಗ್ರೆಸ್​​​ ಪಕ್ಷದ ಪ್ರಣಾಳಿಕೆ ಸಮಿತಿಗೆ ನಾನೇ ಅಧ್ಯಕ್ಷನಾಗಿದ್ದೆ . ಮೊದಲ ಅಧಿವೇಶನದಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಮಂಡಿಸುತ್ತೇವೆ ಎಂದರು.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us