ಮಕ್ಕಳು ತೆರಿಗೆ ಪಾವತಿಸಿದ್ರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಇಲ್ಲ: ಮತ್ತೊಂದು ಗೊಂದಲ ತಂದಿಟ್ಟ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಇಲ್ಲ. ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿಸಿದರೆ ಯೋಜನೆ ಅನ್ವಯಿಸಲ್ಲ ಎಂದು ಹೇಳುವ ಮೂಲಕ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಮತ್ತೆ ಗೊಂದಲ ಸೃಷ್ಟಿಮಾಡಿದ್ದಾರೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್​ ಸರ್ಕಾರದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಜನರಲ್ಲಿ ಸಾಕಷ್ಟು ಗೊಂದಲಗಳಿವೆ. ಸದ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರ​ ಹೇಳಿಕೆ ಮತ್ತೆ ಗೊಂದಲ ಮೂಡಿಸಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆ ಸಂಬಂಧ ಇಲಾಖಾ ಸಚಿವರ ಜೊತೆ ಸಿಎಂ ಸಿದ್ಧರಾಮಯ್ಯ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಇಲ್ಲ. ಪತಿ, ಪತ್ನಿ ಇಬ್ಬರಲ್ಲಿ ಒಬ್ಬರು ತೆರಿಗೆ ಪಾವತಿಸಿದರೆ ಯೋಜನೆ ಅನ್ವಯಿಸಲ್ಲ. ಈ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದಿದ್ದಾರೆ.

ಮುಂದಿನ ದಿನಗಳಲ್ಲಿ BPL​ ಕಾರ್ಡ್​ ಇಲ್ಲದ ಮಹಿಳೆಯರಿಗೂ ಯೋಜನೆ ವಿಸ್ತರಣೆ  

ಈಗ ಮಕ್ಕಳು ತೆರಿಗೆ ಪಾವತಿಸಿದರೆ ಆ ಕುಟುಂಬಕ್ಕೆ ಗೃಹಲಕ್ಷ್ಮೀ ಯೋಜನೆ ಇಲ್ಲ. ಗೃಹ ಲಕ್ಷ್ಮೀ ಯೋಜನೆ ಅಡಿ ಮನೆಯೊಡತಿಗೆ 2 ಸಾವಿರ ರೂ. ಸಿಗಲ್ಲ. BPL​ ಕಾರ್ಡ್​ ಇಲ್ಲದ ಮಹಿಳೆಯರಿಗೂ ಯೋಜನೆ ವಿಸ್ತರಣೆಗೆ ಚಿಂತನೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಹಲವರು ಈಗ ಬಿಪಿಎಲ್​ ಕಾರ್ಡ್​ಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಅಧಿಕಾರಿಗಳು ಸುಖಾಸುಮ್ಮನೆ ಅರ್ಜಿ ತಿರಸ್ಕರಿಸುವಂತಿಲ್ಲ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Karnataka BJP: ಇಂದು ಬಿಜೆಪಿಯ ಮಹತ್ವದ ಸಭೆ, ಯಾರಾಗಲಿದ್ದಾರೆ ವಿರೋಧ ಪಕ್ಷದ ನಾಯಕ, ರಾಜ್ಯಾಧ್ಯಕ್ಷ?

ಸರ್ಕಾರಿ ನೌಕರರಿಗೆ ಯೋಜನೆ ಸಿಗಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದು, ಇನ್ನೊಮ್ಮೆ ಉತ್ತರ ಕೊಡ್ತೀನಿ. ಯಾರಿಗೆ ಉಪಯೋಗ ಆಗಬೇಕು ಅವರಿಗೆ ಯೋಜನೆ ಸಿಗಲಿದೆ. ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಹಣ ಕೊಡ್ತೀವಿ ಅಂತ ಹೇಳಿದ್ರು. ಅವರನ್ನ ಕೇಳಿ ಎಂದು ಟಾಂಗ್​ ನೀಡಿದರು.

ಆನ್​ಲೈನ್​​ ಮತ್ತು ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಗೃಹಲಕ್ಷ್ಮೀ ಯೋಜನೆಗೆ ಆನ್​ಲೈನ್​​ ಮತ್ತು ನಾಡಕಚೇರಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಅರ್ಜಿಯಲ್ಲಿ ನಮೂದಿಸಿರುವ ಕಾಲಂ ವಿಚಾರ ಸಿಎಂ ಗಮನಕ್ಕೆ ತಂದಿದ್ದೇವೆ. ವೋಟರ್ ಐಡಿ, ಪಾಸ್‌ ಬುಕ್ ಸಂಖ್ಯೆ ಬೇಡವೆಂದು ಸಿಎಂ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ವರ್ಷಾಂತ್ಯದೊಳಗೆ ಬಿಬಿಎಂಪಿ ಚುನಾವಣೆ ನಡೆಸಲು ಸಿದ್ಧತೆ: ಸಭೆಯಲ್ಲಿ ಸಿದ್ದರಾಮಯ್ಯಗೆ ಮಾಜಿ ಕಾರ್ಪೊರೇಟರ್​​ ಮಹತ್ವದ ಸಲಹೆ

ಯೋಜನೆಗಳ ಬಗ್ಗೆ ಸಿಎಂ ಸಿದ್ಧರಾಮಯ್ಯ ಹೇಳಿದಿಷ್ಟು 

ಸಿಎಂ ಸಿದ್ಧರಾಮಯ್ಯ ಈ ಕುರಿತಾಗಿ ಮಾತನಾಡಿದ್ದು, ಬಿಪಿಎಲ್​​, ಎಪಿಎಲ್​​ ಕಾರ್ಡ್​ದಾರರಿಗೆ ಗೃಹಲಕ್ಷ್ಮೀ ಯೋಜನೆ ಅನ್ವಯವಾಗಲಿದೆ ಎಂದು ಸ್ಪಷ್ಟನೆ ನೀಡಿದರು. ತೆರಿಗೆ ಪಾವತಿದಾರರು, GST ನೋಂದಣಿದಾರರಿಗೆ ಯೋಜನೆ ಇಲ್ಲ. ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತೆ ಎಂದು ತಿಳಿಸಿದರು.

ಗೃಹಜ್ಯೋತಿ ಯೋಜನೆ ಬಗ್ಗೆ ಸಭೆಯಲ್ಲಿ ಚರ್ಚೆಯಾದ ಅಂಶಗಳು

  • ಗೃಹಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡಲು ಚಿಂತನೆ.
  • ಮಾರ್ಗಸೂಚಿಗಳ ಕುರಿತಾದ ಎಲ್ಲ ಗೊಂದಲ ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ
  • ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶ
  • ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲು‌ ಸೂಚನೆ
  • ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭ
  • ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌, ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ
  • ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ
  • ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು
  • ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ
  • ಈ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:08 pm, Thu, 8 June 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us