ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಬಿಜೆಪಿ ಚಿಂತನೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟುಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ಈ ಅಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಕೇಳಿಬಂದಿದೆ. ಅಲ್ಲದೆ ಸಿಎಂ ಪತ್ನಿ ಹೆಸರಿನಲ್ಲೂ ಜಮೀನು ಇದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ರಾಜಿನಾಮೆ ಆಗ್ರಹಿಸಿ ಬಿಜೆಪಿ ಬೆಂಗಳೂರು-ಮೈಸೂರು ಪಾದಯಾತ್ರೆ ನಡೆಸಲಿದೆ.

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಬಿಜೆಪಿ ಚಿಂತನೆ
ವಿಜಯೇಂದ್ರ, ಸಿದ್ದರಾಮಯ್ಯ
ವಿವೇಕ ಬಿರಾದಾರ

Updated on: Jul 24, 2024 | 10:37 AM

ಬೆಂಗಳೂರು, ಜುಲೈ 24: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶ ಹಂಚಿಕೆಯಲ್ಲಿ ಭಾರೀ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಅದರಲ್ಲೂ ಈ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೆಸರು ಕೇಳಿಬಂದಿದ್ದರಿಂದ ಅವರ ರಾಜೀನಾಮೆಗೆ ವಿಪಕ್ಷಗಳು ಆಗ್ರಹಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರುವರೆಗೆ ವಿಪಕ್ಷ ಬಿಜೆಪಿ (BJP) ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದೆ.
ಮುಡಾದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣದ ಬಗ್ಗೆ ಬಿಜೆಪಿ ಅಧಿವೇಶನದಲ್ಲಿ ನಿಲುವಳಿ ಮುಂಡಲಿಸಲು ಸಿದ್ಧತೆ ನಡೆಸಿದೆ. ನಂತರ ಸನ್ನಿವೇಶ ಆಧರಿಸಿ ಮುಖ್ಯಮಂತ್ರಿಗಳ ರಾಜಿನಾಮೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ಬಿಜೆಪಿ ತೀರ್ಮಾನ ಕೈಗೊಳ್ಳಲಿದೆ.

ಹಗರಣದಲ್ಲಿ ಸಿಎಂ ಕುಟುಂಬದ ಹೆಸರು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಅರ್ಹತೆಗೂ ಮೀರಿ ಎರಡು ಕೋಟಿ ರೂಪಾಯಿ. ಬೆಲೆಬಾಳುವ 14 ನಿವೇಶನ​ಗಳನ್ನು ಪ್ರತಿಷ್ಠಿತ ವಿಜಯನಗರ ಬಡಾವಣೆಯಲ್ಲಿ ಹಂಚಿಕೆ ಮಾಡಲಾಗಿದೆ. ಅರ್ಹತೆ ಪ್ರಕಾರ ಪಾರ್ವತಿ ಅವರಿಗೆ ನೀಡಬೇಕಾಗಿದ್ದು ಕೇವಲ ಎರಡು ಜಮೀನು ಮಾತ್ರ. ಆದರೆ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಬಿಜೆಪಿ ಮತ್ತು ಜೆಡಿಎಸ್‌ ಗಂಭೀರ ಆರೋಪ ಮಾಡುತ್ತಿದೆ.

ಈ ಆರೋಪಕ್ಕೆ ಸಿದ್ದರಾಮಯ್ಯ, ನಿಯಮದ ಪ್ರಕಾರವೇ ಎಲ್ಲರಿಗೂ ಹಂಚಿಕೆಯಾಗುವಂತೆ ಮುಡಾದಿಂದ ಸೈಟ್‌ ಹಂಚಿಕೆಯಾಗಿದೆ. ನಾವು ಯಾವುದೇ ತಪ್ಪು ಮಾಡಿಲ್ಲ. ನಾವು ಅಲ್ಲೇ ಸೈಟ್‌ ನೀಡಬೇಕೆಂದು ಕೇಳಿಕೊಂಡಿಲ್ಲ. ಮುಡಾದವರು ಹಂಚಿಕೆ ಮಾಡಿದ್ದಾರೆ. ಯಾವುದೇ ಅಕ್ರಮ ನಡೆಸಿಲ್ಲ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ಮುಡಾ ಅಕ್ರಮ ಆರೋಪ: ಬಾಮೈದ ಜಮೀನನ್ನ ಅರಿಶಿನ, ಕುಂಕಮ ರೀತಿಯಲ್ಲಿ ನನ್ನ ಹೆಂಡಿತಿಗೆ ಗಿಫ್ಟ್​​ ನೀಡಿದ್ದಾನೆ; ಸಿದ್ದರಾಮಯ್ಯ

ಕಾಂಗ್ರೆಸ್​ನ ಬೆಂಗಳೂರು ಟು ಬಳ್ಳಾರಿ ಪಾದಯಾತ್ರೆ ಮೆಲುಕು

2010ರ ಜುಲೈನಲ್ಲಿ ಮುಂಗಾರು ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ರೆಡ್ಡಿ ಸಹೋದರರ ವಿರುದ್ಧ ದಿನೇಶ್​ ಗುಂಡೂರಾವ್​ ಅಕ್ರಮ ಗಣಿಗಾರಿಕೆ ಆರೋಪ ಮಾಡಿದ್ದರು. ಇದರಿಂದ ಸದನದಲ್ಲಿ ಮಾತಿನ ಚಕಮಕಿ ಆರಂಭವಾಯಿತು. ಈ ವೇಳೆ ಅಂದಿನ ಬಿಜೆಪಿ ಶಾಸಕ ಟಿ.ಎಸ್​ ಸುರೇಶ್​ ಬಾಬು ಗುಂಡುರಾವ್​ ವಿರುದ್ಧ ಹರಿಹಾಯ್ದರು. ಬಳ್ಳಾರಿಗೆ ಬಾ ನೋಡಿಕೊಳ್ಳುತ್ತೇವೆ ಎಂದು ಸವಾಲು ಎಸೆದರು.

ಇದರಿಂದ ಸದನ ಮತ್ತಷ್ಟು ಗದ್ದಲಮಯವಾಯಿತು. ಬಳ್ಳಾರಿ ಶಾಸಕರು ತೋಳೇರಿಸಿಕೊಂಡು ವಿಪಕ್ಷ ನಾಯಕರ ಬಳಿ ಹೊರಟರು. ಇವರಲ್ಲಿ ಮೂವರು ರೆಡ್ಡಿ ಸಹೋದರರೂ ಇದ್ದರು. ಆಗ ಸಿಟ್ಟಿಗೆದ್ದ ಸಿದ್ದರಾಮಯ್ಯ ತೋಳು ತಟ್ಟಿ ‘ಬಳ್ಳಾರಿಗೆ ಬರ್ತೇವೆ, ರೆಡ್ಡಿ ಮನೆ ಮುಂದೆಯೇ ಮೆರವಣಿಗೆ ಮಾಡ್ತೆವೆ’ ಎಂದು ಅಬ್ಬರಿಸಿ ಸವಾಲೆಸೆದರು. ನಂತರ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್​ ನಾಯಕರು ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ಮಾಡಿದರು. ನಂತರ ನಡೆದಿದೆಲ್ಲ ಇತಿಹಾಸ

ಇದೀಗ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದಲ್ಲಿ ಭಾಗಿಯಾದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಬೆಂಗಳೂರು ಟು ಬಳ್ಳಾರಿ ಮಾದರಿಯಲ್ಲಿ ಬೆಂಗಳೂರು ಟು ಮೈಸೂರಿಗೆ ಪಾದಯಾತ್ರೆ ನಡೆಸಲು ಚಿಂತನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Follow Us