
ಕೋಲಾರ, ಜೂ.6: ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಅವರು ಕಾಂಗ್ರೆಸ್ ಸರ್ಕಾರ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಮುಂದಿನ ಒಂದು ವರ್ಷದೊಳಗೆ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ದೆಹಲಿಯಿಂದ ಬಂದ ಮಾಹಿತಿ ಬಂದಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ವಿಕೆಟ್ ಮೇಲೆ ವಿಕೆಟ್ ಉರುಳುತ್ತಿದ್ದು, ಇದು ಸರ್ಕಾರದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಮತ್ತು ಅಸಮಾಧಾನವನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತದೆ. ಕೆ.ಎಚ್. ಮುನಿಯಪ್ಪ ಅವರಂತಹ ಹಿರಿಯ ನಾಯಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಕೂಡ ಕಾಂಗ್ರೆಸ್ನಿಂದ ದೂರು ಹೋಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈಗಾಗಲೇ ಸಚಿವ ರಾಮಲಿಂಗಾರೆಡ್ಡಿ ಸಹ ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುತ್ತಿದೆ ಎಂದು ಹೇಳಿಕೆ ನೀಡಿರುವುದನ್ನು ಮಂಜುನಾಥ್ ನೆನಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ ನಾಯಕರಿಗೆ ಸೂಕ್ತ ಮರ್ಯಾದೆ ಸಿಗುತ್ತಿಲ್ಲ, ಅವರಿಗೆ ಅವಮಾನವಾಗುತ್ತಿದೆ ಎಂದು ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದ್ದಾರೆ.
ಅನುದಾನ ಹಂಚಿಕೆಯಲ್ಲಿ ತಾರತಮ್ಯ ನಡೆಯುತ್ತಿದೆ. ಕೆಲವರಿಗೆ ಮೆಚ್ಚುಗೆಗಾಗಿ ಅನುದಾನ ನೀಡಲಾಗುತ್ತಿದ್ದು, ಉಳಿದವರನ್ನು ಕಡೆಗಣಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಮತ ಕೇಳಲು ಹೋದರೆ, ಜನ ಮೂರು ವರ್ಷವೂ ಆಗಿಲ್ಲ ಮತ್ತೆ ಚುನಾವಣೆಯೇ ಎಂದು ಪ್ರಶ್ನಿಸುತ್ತಾರೆ. ಅಭಿವೃದ್ಧಿ ಇಲ್ಲ, ಅನುದಾನ ಇಲ್ಲದ ಕಾರಣ ಜನರು ಬೇಸರಗೊಂಡಿದ್ದಾರೆ ಎಂದು ಮಂಜುನಾಥ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರವು ಅಗ್ನಿಪರೀಕ್ಷೆ ಎದುರಿಸುತ್ತಿದೆ ಎಂದು ಮಂಜುನಾಥ್ ಹೇಳಿದ್ದಾರೆ. ಸರ್ಕಾರದಲ್ಲಿ ಸೀನಿಯರ್ ನಾಯಕರಿಗೆ ಅಗೌರವ ತೋರಲಾಗುತ್ತಿದ್ದು, ಇದನ್ನು ಆದಷ್ಟು ಬೇಗ ನಿಲ್ಲಿಸಬೇಕು. ಇಲ್ಲವಾದಲ್ಲಿ ವಿಕೆಟ್ ಮೇಲೆ ವಿಕೆಟ್ ಬೀಳುತ್ತಾ ಹೋಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಮುಖ್ಯಾಂಶಗಳು:
ಕಾಂಗ್ರೆಸ್ ಸರ್ಕಾರ ಕುರಿತು ಗಂಭೀರ ಆರೋಪ ಮಾಡಿದ ಶಾಸಕ ಸಮೃದ್ಧಿ ಮಂಜುನಾಥ್
ಒಂದು ವರ್ಷದೊಳಗೆ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ
ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ ನಾಯಕರಿಗೆ ಸೂಕ್ತ ಮರ್ಯಾದೆ ಸಿಗುತ್ತಿಲ್ಲ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಕ್ಕೆ ಬಂದ ನಂತರ ಸರ್ಕಾರಕ್ಕೆ “ಅಗ್ನಿಪರೀಕ್ಷೆ”
ಇದನ್ನೂ ಓದಿ: ಸಿಎಂ ಡಿಕೆ ಶಿವಕುಮಾರ್ ಹೇಳಿದ ಆ ಒಂದು ಮಾತು ನನ್ನ ನಿರ್ಧಾರ ಬದಲಿಸಿದೆ ಎಂದ ರಾಮಲಿಂಗಾರೆಡ್ಡಿ
ಕೋಲಾರ ಜಿಲ್ಲೆಯ ಅಭಿವೃದ್ಧಿ ಕುರಿತು ಮಾತನಾಡಿದ ಸಮೃದ್ಧಿ ಮಂಜುನಾಥ್ , ಜಿಲ್ಲೆಯ ನಾಡಿಮಿಡಿತ ಗೊತ್ತಿಲ್ಲದವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದು ಆರೋಪಿಸಿದ್ದಾರೆ. ಕೋಲಾರ ಜಿಲ್ಲೆಗೆ ನ್ಯಾಯ ಸಿಗಬೇಕಾದರೆ, ಜಿಲ್ಲೆಯ ಬಗ್ಗೆ ಸಮಗ್ರ ಅರಿವಿರುವ ಸ್ಥಳೀಯ ಶಾಸಕರೊಬ್ಬರನ್ನು ಸಚಿವರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ. ಇದು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ನಿರ್ಣಾಯಕವಾಗಲಿದೆ ಎಂದು ಅವರು ಒತ್ತಿಹೇಳಿದ್ದಾರೆ. ಹಿಂದೆ ಹೊರಗಿನವರು ಸಚಿವರಾಗಿ ಒನ್ ವೇ ರಾಜಕೀಯ ಮಾಡಿದ್ದಾರೆ. ಅದರಿಂದ ಜಿಲ್ಲೆಗೆ ಪ್ರಯೋಜನವಾಗಿಲ್ಲ ಎಂದು ಮಂಜುನಾಥ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಮೂರು-ನಾಲ್ಕು ಜನ ಸಮರ್ಥ ಶಾಸಕರಲ್ಲಿ ಒಬ್ಬರನ್ನು ಸಚಿವರನ್ನಾಗಿ ಮಾಡಿದರೆ, ಜಿಲ್ಲೆಗೆ ನ್ಯಾಯ ಸಿಕ್ಕಂತಾಗುತ್ತದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ