ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಿಷ್ಟು

ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಮುಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವ ಗುರಿ ಹೊಂದಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರ್ಯಕರ್ತರಿಗೆ ಸೂಚಿಸಿದರು.

ಹಳೇ ಮೈಸೂರು ಭಾಗವನ್ನೇ ಟಾರ್ಗೆಟ್ ಮಾಡಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಿಷ್ಟು
ಬಿವೈ ವಿಜಯೇಂದ್ರ
Edited By: ವಿವೇಕ ಬಿರಾದಾರ

Updated on: Nov 20, 2023 | 11:03 AM

ಮೈಸೂರು ನ.20: ಮೈಸೂರು (Mysore) ಮತ್ತು ಮಂಡ್ಯ ಜಿಲ್ಲೆ ಪ್ರವಾಸ ಮಾಡಿದ್ದೇನೆ. ಮೈಸೂರು ಜಿಲ್ಲೆಗೂ ನನಗು ಅವಿನಾಭಾವ ಸಂಬಂಧವಿದೆ. ಬಿವೈ ವಿಜಯೇಂದ್ರರನ್ನು (BY Vijayendra) ಗುರುತಿಸಿ, ಶಾಸಕ ಆಗಲು ಭದ್ರ ಬುನಾದಿ ಹಾಕಿರುವುದು ವರುಣ ಕ್ಷೇತ್ರ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಮುಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು. ಬಿಜೆಪಿಗೆ ಕರ್ನಾಟಕ ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ ಬಂದರೂ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ತರುವ ಗುರಿ ಹೊಂದಬೇಕು. ಲೋಕಸಭೆ ಮತ್ತು ವಿಧಾಸಭೆ ಚುನಾವಣೆಯಷ್ಟೇ ಮಹತ್ವ ಸ್ಥಳೀಯ ಸಂಸ್ಥೆಗೂ ನೀಡಲಾಗುವುದು. ಅದು ನಮ್ಮ ಕಾರ್ಯಕರ್ತರ ಚುನಾವಣೆ, ಅದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

ಚುನಾವಣೆ ವೇಳೆ ಕಾಂಗ್ರೆಸ್ ಸಾಕಷ್ಟು ಭರವಸೆ ನೀಡಿತ್ತು. ಆದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಆದರೆ ಇವರ ಆಡಳಿತದಿಂದ ಜನ ನಿರಾಶರಾಗಿದ್ದು, ಆಕ್ರೋಶಗೊಂಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಜೋಡೆತ್ತುಗಳಂತೆ ಇದ್ದರು. ಈಗ ಹಾದಿ ಬೀದಿಯಲ್ಲಿ ಸಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ಡಿ ಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ಹುನ್ನಾರ ನಡೆದಿದೆ. ಹಾಗೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಲು ಡಿ ಕೆ ಶಿವಕುಮಾರ್ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಇದರ ಬಗ್ಗೆ ನಮಗೆ ಯಾವ ಆಸಕ್ತಿಯೂ ಇಲ್ಲ. ಆದರೆ ರಾಜ್ಯದ ಜನರಿಗೆ ಏನು ಕೊಟ್ಟಿದ್ದೀರಾ? ಎಂದು ಪ್ರಶ್ನಿಸಿದರು.

ನಿಮ್ಮ ಶಾಸಕರು ತಮ್ಮ ಕ್ಷೇತ್ರದಲ್ಲಿ ತಲೆ ಎತ್ತಿಕೊಂಡು ಓಡಾಡಲು ಆಗದಂತೆ ಮಾಡಿದ್ದೀರಿ. ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಇವರ ಸಾಧನೆಯಾಗಿದೆ. ಒಬ್ಬ ಸಚಿವ ಅವರ ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೇನೆ ಅಂತಾ ಹೇಳಲಿ. ಬರದ ಬಗ್ಗೆ ಚರ್ಚೆ ಮಾಡಿದ್ದಾರಾ? ಬಿಎಸ್​ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ರೈತರಿಗೆ ನಿರಂತರ ವಿದ್ಯುತ್ ನೀಡಲಾಗುತ್ತಿತ್ತು. ರೈತ ವಿರೋಧಿ ಸರ್ಕಾರ, ಬಡವರ ವಿರೋಧಿ ಸರ್ಕಾರ. ಅಧಿಕಾರದ ಅಮಲಿನಲ್ಲಿ ರಾಜ್ಯ ಸರ್ಕಾರ ತೇಲುತ್ತಿದೆ. ರಾಜ್ಯದ ಜನರು ಇವರಿಗೆ ಶಾಪ ಹಾಕುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ಯತ್ನಾಳ್ ಅಸಮಾಧಾನದ ಬಗ್ಗೆ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಖಡಕ್ ಮಾತು

ಸಿಎಂ ಸಿದ್ದರಾಮಯ್ಯ ಅವರ ಪ್ರವಾಸದ ವೇಳೆ ರೈತರನ್ನು ಪೊಲೀಸರು ವಶಕ್ಕೆ ಪಡೆದ ವಿಚಾರವಾಗಿ ಮಾತನಾಡಿದ ಅವರು ಸೌಜನ್ಯಕ್ಕೂ ಸಿದ್ದರಾಮಯ್ಯ ಭೇಟಿ ಮಾಡದೆ ಅಧಿಕಾರ ಬಳಸಿ ಬಂಧಿಸಿದ್ದಾರೆ. ಬರಗಾಲದ ವೇಳೆ ಆಡಳಿತ ಯಂತ್ರ ಕುಸಿದಿದೆ. ಜಿಲ್ಲಾ ಉಸ್ತುವಾರಿ ಸಚಿವರು ಶಾಸಕರು ರೈತರಿಗೂ ಸ್ಪಂದಿಸುತ್ತಿಲ್ಲ. ಜಿಲ್ಲೆಯಲ್ಲಿ ಸರಿಯಾಗಿ ಕೆಲಸ ಆಗುತ್ತಿಲ್ಲ ಅಂತಾ ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ ವೈಖರಿ ಕಣ್ಣೀರು ತರಿಸುತ್ತಿದೆ ಎಂದರು.

ಸಚಿವ ಜಮೀರ್ ಅಹಮದ್ ಅವರ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಇದು ಹುಡುಗಾಟದ ಮಾತಲ್ಲ ಜಮೀರ್ ಅಹಮದ್ ಅವರ ಮನದಾಳದ ಮಾತು. ನ್ಯಾಯಾದೇವತೆ ಅಂತಾ ಗೌರವ ಕೊಡುತ್ತೇವೆ. ಅದಕ್ಕೂ ಮಸಿ ಬಳಿಯುವ ಕೆಲಸ ಮಾಡಿದ್ದಾರೆ. ಬೇರೆ ಸಿಎಂ ಆಗಿದ್ದರೆ ಜಮೀರ್ ರಾಜೀನಾಮೆ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಸರ್ಕಾರ ಈ ಹೇಳಿಕೆ ಖಂಡಿಸುವ ಕೆಲಸ ಸಹ ಮಾಡಿಲ್ಲ. ಜಮೀರ್ ಅಹಮದ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರ ಶಾಶ್ವತ ಅನ್ನೋ ಭ್ರಮೆಯಲ್ಲಿದ್ದಾರೆ. ಗೂಂಡಾಗಿರಿ ಕಲುಬುರುಗಿ ಜಿಲ್ಲೆಯಲ್ಲಿ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಿಯಾಂಕ್ ತವರು ಜಿಲ್ಲೆಯಲ್ಲಿ ಗುಂಡಾಗಿರಿ ಹೆಚ್ಚಾಗಿದೆ. ಮಣಿಕಂಠ ರಾಥೋಡ್ ಮೇಲೆ ರಾಜಕೀಯ ಪುಡಾರಿಗಳಿಂದ ಹಲ್ಲೆ ನಡೆಸಲಾಗಿದೆ. ಅಧಿಕಾರದ ದರ್ಪದಿಂದ ಏನೇ ಮಾಡಿದರು ನಡೆಯುತ್ತದೆ ಅಂದುಕೊಂಡಿದ್ದಾರೆ. ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಹೇಳಿದರು.

ಅಧಿಕಾರದ ದರ್ಪದಿಂದ ಕಾಂಗ್ರೆಸ್‌ನವರು ಆಡಳಿತ ಅಭಿವೃದ್ಧಿ ಮರೆತಿದ್ದಾರೆ. ಮುಂದಿನ ಲೋಕಸಭಾ ಚುನಾವಣೆ ಹಾಗೂ ಮುಂದಿನ ಎಲ್ಲಾ ಚುನಾವಣೆ ಒಗ್ಗಟ್ಟಾಗಿ ಒಂದಾಗಿ ಎದುರಿಸುತ್ತೇವೆ. ರಾಜ್ಯ ಸರ್ಕಾರದ ವಿರುದ್ಧ ಬೇಸರಕ್ಕೆ ಪರ್ಯಾಯ ಬಿಜೆಪಿ. ಇದನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us