ತಮ್ಮ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ: ಡಿಕೆ ಶಿವಕುಮಾರ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

Nice Road Project: ನೈಸ್ ರಸ್ತೆ ಯೋಜನೆ ಬಗ್ಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ನಡುವೆ ವಾಕ್ಸಮರ ಆರಂಭಗೊಂಡಿದೆ. ನೈಸ್ ಯೋಜನೆಗೆ ದೇವೇಗೌಡರು ಸಹಿ ಹಾಕಿದ್ದು ಎಂದು ಹೇಳಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ: ಡಿಕೆ ಶಿವಕುಮಾರ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಹೆಚ್​ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್
Rakesh Nayak Manchi

Updated on: Jul 22, 2023 | 3:00 PM

ಬೆಂಗಳೂರು, ಜುಲೈ 22: ನೈಸ್ ರಸ್ತೆ ಯೋಜನೆ ಒಬ್ಬಂದದ ಬಗ್ಗೆ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ. ನೈಸ್ ಯೋಜನೆಗೆ ಹೆಚ್​ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ. ಆದರೆ, ಅದೇ ದೇವೇಗೌಡರ (HD Deve Gowda) ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಅವರದ್ದು ಧ್ಯಾನಸ್ಥ ಮೌನವಹಿಸಿದ್ದಾರೆ. ಯಾಕೆ ಎಂದು ಪ್ರಶ್ನಿಸಿದ್ದಾರೆ.

ಸರಣಿ ಟ್ವೀಟ್ ಮಾಡಿದ ಕುಮಾರಸ್ವಾಮಿ, ನೈಸ್ ರಸ್ತೆಯ ‘ತಿರುಚಿದ ಒಪ್ಪಂದ’ದ ಬಗ್ಗೆಯೂ ಅವರು ಹೇಳಬೇಕಿತ್ತಲ್ಲವೇ? ಬ್ರ್ಯಾಂಡ್ ಬೆಂಗಳೂರು ಟೀಮಿನ ಮುಖ್ಯಸ್ಥರ ಕರಾಮತ್ತಿನ ಬಗ್ಗೆಯೂ ಬೆಳಕು ಚೆಲ್ಲಬೇಕಲ್ಲವೇ? ಅದು ಬಿಟ್ಟು, ಸತ್ಯ ಮರೆಮಾಚಿ ಬರೀ ‘ಸಹಿ’ಯ ಬಗ್ಗೆ ನೀವು ಗೊಣಗಿದ್ದು ಯಾಕೆ? ಸದನ ಸಮಿತಿ ವರದಿಯ ಬಗ್ಗೆಯೂ ಚಕಾರ ಎತ್ತದಿರುವುದು ಯಾಕೋ? ಏನಿದು ಈ ನಿಗೂಢ ಸೋಜಿಗ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ ಉರುಫ್ ನೈಸ್ ರಸ್ತೆ ಯೋಜನೆಗೆ ರಾಜ್ಯ ಸರಕಾರದಿಂದ ನಯಾಪೈಸೆ ಕೊಡುವುದಿಲ್ಲ, ಪೂರ್ಣ ಹೂಡಿಕೆ ಹಣವನ್ನು ಕಂಪನಿಯೇ ಭರಿಸಬೇಕು, ಭೂಸ್ವಾಧೀನವೂ ಸೇರಿ ಸರಕಾರದ ಮೇಲೆ ಯಾವುದೇ ಹೊರೆ ಇರುವಂತಿಲ್ಲ. ಇದು ದೇವೇಗೌಡರ ಕಾಲದಲ್ಲಿ ಆದ ಮೂಲ ಒಪ್ಪಂದದ ಸಾರಾಂಶ. ಹಾಗಾದರೆ, ಈ ಯೋಜನೆ ‘ಸಾರ’ವಾಗಿದ್ದು ಯಾರಿಗೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಆಲ್ಕೊಹಾಲಿನ ನಂತರ ಹಾಲಿನ ಬೆಲೆಯನ್ನೂ ಏರಿಸಿದೆ, ಜನರ ಬದುಕೇ ಹಾಲಾಹಲವಾಗಿದೆ -ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ಆಕ್ರೋಶ

ಬ್ರ್ಯಾಂಡ್ ಬೆಂಗಳೂರು ಹರಿಕಾರಾಗಲು ಹೊರಟಿರುವ ನೀವು, ‘ತಿರುಚಿದ ಒಪ್ಪಂದ’ದ ಸೂತ್ರಧಾರರನ್ನೇ ಪಕ್ಕದಲ್ಲಿ ಇಟ್ಟುಕೊಂಡಿದ್ದೀರಿ. ತಿರುಚಿದ ಪರಿಣಾಮ ರಾಜ್ಯವು ಕೋರ್ಟ್ ಕಟಕಟೆಯಲ್ಲಿ ನಿಲ್ಲಬೇಕಾಯಿತು. ಸಾವಿರಾರು ಕೋಟಿ ಲೂಟಿಯಾಯಿತು. ಸರಕಾರ ಮತ್ತು ಜನರ ಸಾವಿರಾರು ಎಕರೆ ಭೂಮಿ ಭೂಗಳ್ಳರ ಪಾಲಾಯಿತು ಎಂದು ಟ್ವೀಟ್​ನಲ್ಲಿ ಅವರು ಉಲ್ಲೇಖಿಸಿದ್ದಾರೆ.

ಬ್ರ್ಯಾಂಡ್ ಬೆಂಗಳೂರು ಎಂದರೆ ಬುಲ್ಡೋಜ್ ಬೆಂಗಳೂರಾ? ಇಡೀ ಬೆಂಗಳೂರು ನಗರವನ್ನು ಛಿದ್ರಛಿದ್ರ ಮಾಡಿ ಪೋಗದಸ್ತಾಗಿ ಬುಲ್ಡೋಜ್ ಮಾಡಿ ಕಿಸೆ ತುಂಬಿಸಿಕೊಳ್ಳುವುದಾ? ಕರ್ನಾಟಕವನ್ನು ಕಡಲೇಪುರಿಯಂತೆ ಮುಕ್ಕಿ ತಿನ್ನುವುದಾ? ಎಂದು ಮಾಜಿ ಸಿಎಂ ಪ್ರಶ್ನಿಸಿದ್ದಾರೆ.

2014-2 016ರಲ್ಲಿನ ಸದನ ಸಮಿತಿ ವರದಿಯನ್ನು ತಾವು ಓದಿಲ್ಲವೇ? ಅಥವಾ ಅದನ್ನು ಕಸದ ಬುಟ್ಟಿಗೆ ಎಸೆದಿದ್ದೀರಾ? ಕೊಳ್ಳೆ ಹೊಡೆದ ಈಸ್ಟ್ ಇಂಡಿಯಾದಂಥ ಕಂಪನಿ ಜತೆ ಕೈ ಜೋಡಿಸಿದ ನಿಮಗೆ, ದೇವೇಗೌಡರ ಹೆಸರು ಹೇಳುವ ಅರ್ಹತೆ ಇದೆಯಾ? ರಾಜ್ಯದ ಅಭ್ಯುದಯಕ್ಕೆ ಬದುಕನ್ನೇ ಮೀಸಲಿಟ್ಟ ಆ ಹಿರಿಯ ಜೀವದ ಬಗ್ಗೆ ನಾಲಿಗೆ ಜಾರಿ ಬಿಡಲು ನಾಚಿಕೆ ಆಗುವುದಿಲ್ಲವೇ? ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ನೈಸ್ ಕರ್ಮವನ್ನೆಲ್ಲ ಒಮ್ಮೆ ಕಣ್ಮುಚ್ಚಿ ನೆನಪು ಮಾಡಿಕೊಳ್ಳಿ. ಅಲ್ಲಿ ನೀವೆಲ್ಲಿ ನಿಲ್ಲುತ್ತಿರಿ ಎಂದು ಊಹಿಸಿಕೊಳ್ಳಿ, ಮಾಡಿದ ಪಾಪಗಳೆಲ್ಲವೂ ಸ್ಲೈಡುಗಳಂತೆ ಪ್ರತ್ಯಕ್ಷವಾಗುತ್ತವೆ. ಗಂಗೆಯಲ್ಲಿ ಸಾವಿರ ಸಲ ಮುಳುಗಿದರೂ ಅಳಿಯದ ಪಾಪವದು. ರಾಜ್ಯವನ್ನೇ ದೋಚಿದ ಖಾಸಗಿ ಕಂಪನಿಗೆ ‘ಪೊಲಿಟಿಕಲ್ ಏಜೆಂಟ್’ ಆಗುವುದಕ್ಕೆ ಅಸಹ್ಯ ಅನಿಸುವುದಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ನೈಸ್ ಯೋಜನೆ ಯಾರಿಗೆಲ್ಲಾ ಕಾಮಧೇನು, ಕಲ್ಪವೃಕ್ಷವಾಗಿದೆ ನನಗಿಂತ ನಿಮಗೆ ಚೆನ್ನಾಗಿ ಗೊತ್ತು. ಧನಪಿಶಾಚಿ ರಾಜಕಾರಣಿಗಳು, ಮುಖ್ಯ ಕಾರ್ಯದರ್ಶಿ ಮಟ್ಟದವರೂ ಸೇರಿ ಅನೇಕ ಅಧಿಕಾರಿಗಳ ‘ಅನೈತಿಕ ಭ್ರಷ್ಟವ್ಯೂಹ’ ಕರ್ನಾಟಕವನ್ನು ಕಂಡರಿಯದ ರೀತಿಯಲ್ಲಿ ಲೂಟಿ ಮಾಡಿದೆ. ಈ ಲೂಟಿಯ ಕಥೆಯಲ್ಲಿ ನಿಮ್ಮ ಪಾತ್ರವೇನು? ಎಂದು ಡಿಕೆ ಶಿವಕುಮಾರ್ ಅವರನ್ನು ಕುಮಾರಸ್ವಾಮಿ ಪ್ರಶ್ನಿಸಿದರು.

ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳು ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ? ಎಂದು ಕುಮಾರಸ್ವಾಮಿ ಪ್ರಶ್ನಸಿದರು.

ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. 135 ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರಕಾರ ನಿಮ್ಮದಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸುವಿರಾ? ಎಂದು ಸವಾಲಿನ ಪ್ರಶ್ನೆ ಹಾಕಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sat, 22 July 23

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us