AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಟರ್ ರವಿಗೆ ಕೈಮುಗಿದ ಮೋದಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಿಯಾಕ್ಷನ್ ಹೀಗಿದೆ

ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೌಡಿಶೀಟರ್​ ಫೈಟರ್ ರವಿ ಕೂಡ ಸ್ವಾಗತಿಸಿದ್ದು, ಮೋದಿಯೂ ಆತನಿಗೆ ಕೈ ಮುಗಿದಿದ್ದಾರೆ. ಇದು ಚುನಾವಣೆ ಸಮೀಪದಲ್ಲಿ ಬಿಜೆಪಿಯನ್ನು ಟೀಕಿಸಲು ಕಾಂಗ್ರೆಸ್​ಗೆ ಅಸ್ತ್ರ ಸಿಕ್ಕಿದಂತಾಗಿದೆ. ರವಿ ಎದುರು ಕೈ ಮುಗಿದು ನಿಂತ ಮೋದಿ ವಿರುದ್ಧ ಕರ್ನಾಟಕ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸುತ್ತಿದೆ.

ಫೈಟರ್ ರವಿಗೆ ಕೈಮುಗಿದ ಮೋದಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರಿಯಾಕ್ಷನ್ ಹೀಗಿದೆ
ಪ್ರಧಾನಿ ಮೋದಿಯನ್ನು ಸ್ವಾಗತಿಸುತ್ತಿರುವ ಫೈಟರ್ ರವಿ (ಎಡ ಚಿತ್ರ) ಮತ್ತು ಶೋಭಾ ಕರಂದ್ಲಾಜೆ (ಬಲ ಚಿತ್ರ)
Rakesh Nayak Manchi
|

Updated on:Mar 13, 2023 | 4:30 PM

Share

ಬೆಂಗಳೂರು: ರೌಡಿಶೀಟರ್​ ಫೈಟರ್ ರವಿ (Rowdy sheeter fighter Ravi) ಯಾರೆಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರಿಗೆ ಗೊತ್ತಿರಲಿಲ್ಲ. ಇದಕ್ಕೆ ಮೋದಿ ಜವಾಬ್ದಾರರಲ್ಲ ಎಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೌಡಿಶೀಟರ್​ ಫೈಟರ್ ರವಿ ಕೂಡ ಸ್ವಾಗತಿಸಿದ್ದು, ಮೋದಿಯೂ ಆತನಿಗೆ ಕೈ ಮುಗಿದಿದ್ದಾರೆ. ಇದು ಚುನಾವಣೆ ಸಮೀಪದಲ್ಲಿ ಬಿಜೆಪಿಯನ್ನು ಟೀಕಿಸಲು ಕಾಂಗ್ರೆಸ್​ಗೆ ಅಸ್ತ್ರ ಸಿಕ್ಕಿದಂತಾಗಿದೆ. ರವಿ ಎದುರು ಕೈ ಮುಗಿದು ನಿಂತ ಮೋದಿ ವಿರುದ್ಧ ಕರ್ನಾಟಕ ಕಾಂಗ್ರೆಸ್ (Karnataka Congress) ತೀವ್ರ ವಾಗ್ದಾಳಿ ನಡೆಸುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸ್ವಾಗತ ಕೋರುವವರ ಪಟ್ಟಿಯಲ್ಲಿ ರವಿ ಹೆಸರು ಹೇಗೆ ಬಂತು ಎಂಬುದು ಗೊತ್ತಿಲ್ಲ ಎಂದರು.

ಪ್ರಧಾನಿ ಮೋದಿಗೆ ಫೈಟರ್ ರವಿ ಸ್ವಾಗತ ಕೋರಿರುವುದು ಲೋಪವಾಗಿದೆ. ಫೈಟರ್ ರವಿ ಸ್ವಾಗತ ಅಲ್ಲಿನ ಸ್ಥಳೀಯರ ಕಣ್ತಪ್ಪಿನಿಂದ ಆಗಿರುವ ಸಾಧ್ಯತೆ ಇದೆ. ಸ್ವಾಗತ ಕೋರುವವರ ಪಟ್ಟಿಯನ್ನು ಮೋದಿಯವರು ಮೊದಲೇ ಗಮನಿಸಿಲ್ಲ. ಸ್ವಾಗತ ಕೋರುವ ಪಟ್ಟಿಯಲ್ಲಿ ರವಿ ಹೆಸರು ಹೇಗೆ ಬಂತು ಎಂಬುದನ್ನು ಪರಿಶೀಲನೆ ಮಾಡಲಾಗುವುದು. ಕಾಂಗ್ರೆಸ್ ನಾಯಕರು ಇದರಲ್ಲಿ ಹುಳುಕು ನೋಡೋದು ಬೇಡ ಎಂದರು.

ಇದನ್ನೂ ಓದಿ: Assembly Polls: ಪ್ರಧಾನಿ ನರೇಂದ್ರ ಮೋದಿ ಮಂಡ್ಯಗೆ ಹತ್ತು ಸಲ ಬಂದರೂ ಜೆಡಿಎಸ್ ಅವಕಾಶಗಳ ಮೇಲೆ ಪ್ರಭಾವ ಬೀರಲಾರರು: ಹೆಚ್ ಡಿ ಕುಮಾರಸ್ವಾಮಿ

ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಕಳೆದೆರಡು ವರ್ಷಗಳಿಂದ ಮಂಡ್ಯದ ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಈ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿದ್ದಾರೆ. 2022ರ ನವೆಂಬರ್ ತಿಂಗಳಲ್ಲಿ ಸಚಿವರಾದ ಅಶ್ವತ್ಥ ನಾರಾಯಣ, ಗೋಪಾಲಯ್ಯ, ನಾರಾಯಣಗೌಡ ಅವರ ಸಮ್ಮುಖದಲ್ಲಿ ಮಂಡ್ಯದಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಮಾತ್ರವಲ್ಲದೆ, ಇತ್ತೀಚೆಗೆ ನಾಗಮಂಗಲದಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ್ದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಾಗಮಂಗಲ ತಾಲ್ಲೂಕಿನಲ್ಲಿ ನಮ್ಮ ಪಕ್ಷದ ಅಭ್ಯರ್ಥಿ ಮಲ್ಲಿಕಾರ್ಜುನ್ ಫೈಟರ್ ರವಿ ಅವರ ಗೆಲುವು ನಿಶ್ಚಿತ ಎಂದು ಹೇಳಿಕೆ ನೀಡಿದ್ದರು.

ಬಿಜೆಪಿಯ ಹಿರಿಯರಿಗೆ ಸಿಗದ ಸ್ಥಾನಗಳೂ ಸೋಮಣ್ಣಗೆ ಸಿಕ್ಕಿದೆ: ಶೋಭಾ ಕರಂದ್ಲಾಜೆ

ಸಚಿವ ವಿ ಸೋಮಣ್ಣ ಅವರು ಬಿಜೆಪಿ ಮೇಲೆ ಮುನಿಸುಗೊಂಡು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಬಗ್ಗೆ ಪ್ರತಿಕ್ರಿಯಿಸಿದ ಶೋಭ ಕರಂದ್ಲಾಜೆ, ಸೋಮಣ್ಣ ಅವರು ಬಿಜೆಪಿಯ ಉನ್ನತ ನಾಯಕರು. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾದ ನಂತರ ಹಲವು ಜವಾಬ್ದಾರಿಗಳನ್ನು ನೀಡಲಾಗಿದೆ. ಬಿಜೆಪಿಯ ಹಿರಿಯರಿಗೆ ಸಿಗದ ಸ್ಥಾನಗಳೂ ಸೋಮಣ್ಣ ಅವರಿಗೆ ಸಿಕ್ಕಿದೆ. ಅವರು ಉಪ ಚುನಾವಣೆಯಲ್ಲಿ ಸೋತಿದ್ದರೂ ಅವರನ್ನು ಎಮ್‌ಎಲ್​ಸಿ ಮಾಡಲಾಗಿದೆ. ಸೂಕ್ತ ಸ್ಥಾನಮಾನ ಸಿಕ್ಕಿಲ್ಲ ಅಂತ ಅವರು ಬೇಸರವಾಗುವುದು ಬೇಡ. ಅವರಿಗೆ ಬೇಸರ ಇದೆ ಅನ್ನೋದು ಊಹಾಪೋಹ. ಅವರು ತಮ್ಮ ಕ್ಷೇತ್ರದ ಕಡೆ ಗಮನ ಕೊಡುತ್ತಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:30 pm, Mon, 13 March 23