ಯಾರನ್ನೂ ಮೆಚ್ಚಿಸುವ ಅಗತ್ಯವಿಲ್ಲ, ನಿಷ್ಠೆಯಿಂದ ಪಕ್ಷದ ಕೆಲಸ ಮಾಡುವಂತೆ ತಾಕೀತು ಮಾಡಿದ ಮಾಜಿ ಸಿಎಂ HD ಕುಮಾರಸ್ವಾಮಿ

ಯಾವುದೇ ಕ್ಷಣದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆ ಯಾವಾಗ ಬೇಕಾದರೂ ಬರಲಿ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

ಯಾರನ್ನೂ ಮೆಚ್ಚಿಸುವ ಅಗತ್ಯವಿಲ್ಲ, ನಿಷ್ಠೆಯಿಂದ ಪಕ್ಷದ ಕೆಲಸ ಮಾಡುವಂತೆ ತಾಕೀತು ಮಾಡಿದ ಮಾಜಿ ಸಿಎಂ HD ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

Updated on: Jun 01, 2023 | 5:29 PM

ಬೆಂಗಳೂರು: ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಬೆಂಗಳೂರು ಮಹಾನಗರದ ಎಲ್ಲಾ 28 ಕ್ಷೇತ್ರಗಳ ಪ್ರಮುಖ ಮುಖಂಡರ ಜತೆ ಇಂದು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಬಿಡದಿಯ ತೋಟದಲ್ಲಿ ಸಭೆ ನಡೆದಿದ್ದು, ಪಕ್ಷ ಸಂಘಟನೆ ಹಾಗೂ ಪಾಲಿಕೆ ಚುನಾವಣೆಯ ಬಗ್ಗೆ ಮುಖಂಡರಿಗೆ ಹೆಚ್.ಡಿ.ಕುಮಾರಸ್ವಾಮಿ  ಕೆಲ ಗಂಭೀರ ಸೂಚನೆಗಳನ್ನು ನೀಡಿದರು. ವಿಧಾನಸಭೆ ಚುನಾವಣೆಯ ಸೋಲಿನ ಕಾರಣಗಳನ್ನು ಮುಂದಿಟ್ಟುಕೊಂಡು ಕೆಲ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದು, ಗುಂಪುಗಾರಿಕೆ ಬೇಡ, ಕೆಲಸ ಮಾಡುವವರಷ್ಟೇ ಬೇಕು, ಯಾವುದೇ ಕಾರಣಕ್ಕೂ ಗುಂಪುಗಾರಿಕೆ ಸಹಿಸುವ ಪ್ರಶ್ನೆ ಇಲ್ಲ ಎಂದಿದ್ದಾರೆ.

ಯಾರು ಯಾರನ್ನೂ ಮೆಚ್ಚಿಸುವ ರೀತಿಯಲ್ಲಿ ಕೆಲಸ ಮಾಡುವ ಅಗತ್ಯವಿಲ್ಲ, ಪಕ್ಷವನ್ನು ಇನ್ನೂ ಅಧೋಗತಿಗೆ ತಳ್ಳುವುದು ಬೇಡ. ಪಕ್ಷದ ನೆಲೆ ಇರುವ ವಾರ್ಡುಗಳಲ್ಲಿ ಉತ್ತಮವಾಗಿ ಕೆಲಸ ಮಾಡಿ. ಜನರ ಸಂಪರ್ಕದಲ್ಲಿರಿ ಹಾಗೂ ಅವರಲ್ಲಿ ವಿಶ್ವಾಸ ಮೂಡಿಸಿ ಎಂದು ತಾಕೀತು ಮಾಡಿದರು.

ಇದನ್ನೂ ಓದಿ: ಬಿಜೆಪಿ ಅವಧಿಯಲ್ಲಿನ ಯೋಜನೆಗಳಿಗೆ ಅನುದಾನ ಕಡಿತಗೊಳಿಸದಂತೆ ಸಿಎಂ ಸಿದ್ಧರಾಮಯ್ಯಗೆ ಪತ್ರ ಬರೆದ ಮಾಜಿ ಸಿಎಂ ಬೊಮ್ಮಾಯಿ

ಪ್ರತಿ ವಾರ್ಡಿನ, ಪ್ರತಿ ಮತಗಟ್ಟೆಯಲ್ಲಿ ಪಕ್ಷದ ಕಾರ್ಯಕರ್ತರನ್ನು ಬೆಳೆಸಿ, ಜನರು ಹೆಚ್ಚೆಚ್ಚು ಪಕ್ಷಕ್ಕೆ ಸೇರಿಸಿಕೊಳ್ಳುವ ವಾತಾವರಣವನ್ನು ಸೃಷ್ಟಿ ಮಾಡಿ. ಜನರಲ್ಲಿ ಪಕ್ಷದ ಪರ ಒಲವು ವ್ಯಕ್ತವಾಗುವ ರೀತಿಯಲ್ಲಿ ಕೆಲಸ ಮಾಡಿ ಎಂದು ಮುಖಂಡರಿಗೆ ಕಿವಿಮಾತು ಹೇಳಿದರು.

ಯಾವುದೇ ಕ್ಷಣದಲ್ಲಿ ಬಿಬಿಎಂಪಿ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. ಚುನಾವಣೆ ಯಾವಾಗ ಬೇಕಾದರೂ ಬರಲಿ. ನಮ್ಮ ಸಿದ್ಧತೆಗಳನ್ನು ನಾವು ಮಾಡಿಕೊಳ್ಳೋಣ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದೇವೆ ಎನ್ನುವ ಅಧೈರ್ಯ ಬೇಡ. ಅನೇಕ ಸೋಲುಗಳನ್ನು ದಾಟಿಕೊಂಡು ಜೆಡಿಎಸ್ ಪಕ್ಷ ಫೀನಿಕ್ಸ್ ಪಕ್ಷಿಯಂತೆ ಮೇಲೆದ್ದು ಬಂದಿದೆ ಎಂದರು.

ಇದನ್ನೂ ಓದಿ: ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ: ಸಚಿವ ಎಂಬಿ ಪಾಟೀಲ್

ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನು ಕೊಟ್ಟ ಕುಮಾರಸ್ವಾಮಿ, ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯುವಂತೆ ಹೇಳಿದರಲ್ಲದೆ, ಮಾಡಿದ ತಪ್ಪನ್ನೇ ಮತ್ತೆ ಮತ್ತೆ ಮಾಡಬೇಡಿ ಎಂದು ಎಚ್ಚರಿಕೆ ನೀಡಿದರು. ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಸೇರಿದಂತೆ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು  ಓದಲು ಇಲ್ಲಿ ಕ್ಲಿಕ್ ಮಾಡಿ.

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us