
ಬೆಂಗಳೂರು, ಆ.26: ನಾನು ಹೇಳಿದಕ್ಕೆ ಪರಮೇಶ್ವರ್ ಅವರಿಗೆ ಡಿಸಿಎಂ ಸ್ಥಾನ ನೀಡಿದ್ದಾರೆ. “ಒಬ್ಬರಿಗೇ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಬೇಕು ಹಾಗೂ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಬೇಕು ಎಂದು ಹೈಕಮಾಂಡ್ಗೆ ಹೇಳಿದ್ದೆ” ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ಇದೀಗ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ಹೈಕಮಾಂಡ್ ಚರ್ಚೆ ವೇಳೆ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಆದರೆ ಅವರು ನನ್ನ ಜತೆಗೆ ಕೆಲವೊಂದು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಎಂದು ಪರಮೇಶ್ವರ್ ಹೇಳಿದ್ದಾರೆ.
“ಒಳಗಡೆ ಚರ್ಚೆಯ ವೇಳೆ ಸಿದ್ದರಾಮಯ್ಯ ಅವರು ಒಂದೇ ಡಿಸಿಎಂ ಸ್ಥಾನ ಇರಲಿ ಮತ್ತು ಪರಮೇಶ್ವರ್ ಅವರಿಗೆ ಆ ಸ್ಥಾನ ನೀಡಿ ಎಂದು ಹೈಕಮಾಂಡ್ಗೆ ಹೇಳಿದ್ದರು. ಈ ವಿಷಯವನ್ನು ಸಿದ್ದರಾಮಯ್ಯ ಅವರು ನನ್ನ ಬಳಿಯೂ ಹೇಳಿದ್ದರು. ಹಾಗಾಗಿ ನಿನ್ನೆ ಅವರು ನೀಡಿರುವ ಹೇಳಿಕೆಯಲ್ಲಿ ನಿಜವಿದೆ” ಎಂದು ಪರಮೇಶ್ವರ್ ತಿಳಿಸಿದರು.
“ತಮ್ಮ ರಾಜೀನಾಮೆ ಸಂದರ್ಭದಲ್ಲಿ ನನ್ನನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಹೈಕಮಾಂಡ್ಗೆ ಮನವಿ ಮಾಡಿರುವುದಾಗಿ ಸಿದ್ದರಾಮಯ್ಯ ನಮಗೆಲ್ಲ ಹೇಳಿದ್ದರು. ಆದರೆ, ಅವರ ಆ ಸಲಹೆಯನ್ನು ಹೈಕಮಾಂಡ್ ಪರಿಗಣಿಸಲಿಲ್ಲ”. ಡಿಸಿಎಂ ಸ್ಥಾನದ ಆಯ್ಕೆ ಸಂದರ್ಭದಲ್ಲಿ ಅನೇಕ ನಾಯಕರ ಹೆಸರುಗಳು ಕೇಳಿಬರುತ್ತಿದ್ದವು. ಆದರೆ ಒಂದೇ ಡಿಸಿಎಂ ಹುದ್ದೆ ಇರಬೇಕು ಎಂಬುದು ಸಿದ್ದರಾಮಯ್ಯ ಅವರ ನಿಲುವಾಗಿತ್ತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ‘ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ’: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ!
ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಯೊಂದು ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ (SC) ಸಮುದಾಯಕ್ಕೆ ತಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ ಕೊಡುಗೆಗಳ ಕುರಿತು ಮಾತನಾಡುತ್ತಿದ್ದಾಗ, ಸಭಿಕರೊಬ್ಬರು ‘ದಲಿತ ಸಿಎಂ’ ವಿಚಾರವನ್ನು ಪ್ರಸ್ತಾಪಿಸಿದರು. ಇದರಿಂದ ಕೊಂಚ ಭಾವೋದ್ವೇಗಕ್ಕೊಳಗಾದ ಸಿದ್ದರಾಮಯ್ಯ ಅವರು ನೇರವಾಗಿಯೇ ಹೈಕಮಾಂಡ್ ಹಂತದ ನಿರ್ಧಾರವನ್ನು ಬಹಿರಂಗಪಡಿಸಿದರು. “ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿ (DCM) ಮಾಡಿದ್ದು ಯಾರು? ಆರಂಭದಲ್ಲಿ ನಾಲ್ಕೈದು ಜನರನ್ನು ಡಿಸಿಎಂ ಮಾಡುವ ಯೋಜನೆಯಿತ್ತು. ಆದರೆ, ಒಬ್ಬರಿಗಷ್ಟೇ ಡಿಸಿಎಂ ಹುದ್ದೆ ನೀಡಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರಿ, ಕೊನೆಗೆ ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿಸಿದ್ದು ನಾನೇ” ಎಂದು ಸಿದ್ದರಾಮಯ್ಯ ನೇರವಾಗಿ ಹೇಳಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ