ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ, ಬೊಮ್ಮಾಯಿ ಹಿಂದೂ ವಿರೋಧಿಯೋ? ನಳಿನ್ ಕುಮಾರ್ ಕಟೀಲ್​ಗೆ​ ಸಿದ್ದರಾಮಯ್ಯ ತಿರುಗೇಟು

ತಿರುಪತಿಗೆ ಕರ್ನಾಟಕ ನಂದಿನಿ ತಪ್ಪ ಸರಬರಾಜು ಸ್ಥಗಿತಗೊಳಿಸಿದ್ದಕ್ಕೆ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇದೀಗ ಇದಕ್ಕೆ ಸ್ವತಃ ಸಿದ್ದರಾಮಯ್ಯ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲೇ ತಿರುಪತಿಗೆ ತುಪ್ಪ ಪೂರೈಕೆ ಸ್ಥಗಿತ, ಬೊಮ್ಮಾಯಿ ಹಿಂದೂ ವಿರೋಧಿಯೋ? ನಳಿನ್ ಕುಮಾರ್ ಕಟೀಲ್​ಗೆ​ ಸಿದ್ದರಾಮಯ್ಯ ತಿರುಗೇಟು
ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Aug 01, 2023 | 2:01 PM

ಬೆಂಗಳೂರು, (ಆಗಸ್ಟ್ 01): ತಿರುಪತಿ ಲಡ್ಡು Tirupati Laddu) ಅಂದ್ರೆ ವಿಶ್ವ ಪ್ರಸಿದ್ಧಿ ಪಡೆದುಕೊಂಡಿದೆ. ಇದೇ ತಿರುಪತಿ ಲಡ್ಡುವಿನ ರುಚಿಗೆ ಕರ್ನಾಟಕದ(Karnataka) ನಂದಿನಿ ತುಪ್ಪದ(Nandini Ghee) ಘಮಲು ಕೂಡ ಕಾರಣವಾಗಿತ್ತು. ಆದ್ರೆ, ಕರ್ನಾಟಕದ ಕೆಎಂಎಫ್‌ (KMF) ತಿರುಪತಿಗೆ ಸರಬರಾಜು ಮಾಡುತ್ತಿದ್ದ ನಂದಿನಿ ತುಪ್ಪವನ್ನ ಸ್ಥಗಿತಗೊಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಲಡ್ಡು ಲಡಾಯಿಗೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಇನ್ನು ಇದೀಗ ಇದಕ್ಕೆ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿ ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ತಿರುಪತಿ ಲಡ್ಡುಗೆ ನಂದಿನಿ ತು‍ಪ್ಪ ಸ್ಥಗಿತ, ಬಿಜೆಪಿ ಆರೋಪಗಳಿಗೆ ಕೆಎಂಎಫ್ ಅಧ್ಯಕ್ಷ ತಿರುಗೇಟು

ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾಡಿರುವ ಟ್ವೀಟ್​ಗೆ ಸಿದ್ದರಾಮಯ್ಯ ರೀಟ್ವೀಟ್ ಮಾಡಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ತಿರುಪತಿಗೆ ತುಪ್ಪ ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ನಳಿನ್ ಕುಮಾರ್ ಕಟೀಲ್​ ಅವರೇ ಈಗ ಹೇಳಿ, ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ? ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ? ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಗಳಿಲ್ಲ ಎಂದು ನಳಿನ್ ಕುಮಾರ್​ ಕಟೀಲ್​ಗೆ ಟಾಂಗ್ ಕೊಟ್ಟಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 1:56 pm, Tue, 1 August 23