ಮೂರು ಡಿಸಿಎಂ ಸೃಷ್ಟಿ ವಿಚಾರ: ಸ್ಪಷ್ಟನೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯದಲ್ಲಿ ಇನ್ನೂ ಮೂರು ಡಿಸಿಎಂ ಸ್ಥಾನ ಸೃಷ್ಟಿಸುವಂತೆ ಕಾಂಗ್ರೆಸ್ ​ಹೈಕಮಾಂಡ್​ ಮೇಲೆ ಸಿದ್ದರಾಮಯ್ಯ ಆಪ್ತ ಬಣ ಒತ್ತಡ ಹೇರುತ್ತಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಮೂರು ಡಿಸಿಎಂ ಸೃಷ್ಟಿ ವಿಚಾರ: ಸ್ಪಷ್ಟನೆ ನೀಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ
Edited By:

Updated on: Jan 09, 2024 | 11:49 AM

ಕಲಬುರಗಿ, ಜನವರಿ 09: ದಲಿತ ಮತಗಳನ್ನು ಭದ್ರಪಡಿಸಿಕೊಳ್ಳಲು ಲೋಕಸಭಾ ಚುನಾವಣೆಗೂ (Lok Sabha Election) ಮುನ್ನ ಇನ್ನೂ ಮೂರು ಡಿಸಿಎಂ (DCM) ಸ್ಥಾನ ಸೃಷ್ಟಿಸುವಂತೆ ಕಾಂಗ್ರೆಸ್ (Congress)​ ಹೈಕಮಾಂಡ್​ ಮೇಲೆ ಸಿದ್ದರಾಮಯ್ಯ (Siddaramaiah) ಆಪ್ತ ಬಣ ಒತ್ತಡ ಹೇರುತ್ತಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ. ಈ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ (Mallikarjun Kharge) ಮಾತನಾಡಿ, ಮೂವರು ಡಿಸಿಎಂ ವಿಚಾರ ಹೈಕಮಾಂಡ್​ ಮುಂದೆ ಇಲ್ಲ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಅವರನ್ನೇ ಕೇಳಿ ಎಂದಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಹೆಚ್ಚುವರಿ ಡಿಸಿಎಂ ವಿಚಾರವಾಗಿ ನಮ್ಮ ಮುಂದೆ ಪ್ರಸ್ತಾವನೆ ಇಲ್ಲ. ಹೆಚ್ಚುವರಿ ಡಿಸಿಎಂ ಉಹಾಪೋಹ. ಎಲೆಕ್ಷನ್ ಸಂದರ್ಭದಲ್ಲಿ ಇಂತಹ ವಿಚಾರ ಚರ್ಚೆಗೆ ಬರಬಾರದು. ಸದ್ಯಕ್ಕೆ ಸರ್ಕಾರ ನಡೆಸುವ ಕಡೆ, ಸಮಸ್ಯೆ ಕಡೆ ಗಮನ ಕೊಡಬೇಕು. ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರುವ ಕಡೆಗೆ ಗಮನ ಕೊಡಬೇಕು. ನಮ್ಮ ಗುರಿ ಮುಟ್ಟುವವರೆಗೆ ಇಂತಹದ್ದಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆಗೆ ವಿಚಾರವಾಗಿ ನಾಳೆ (ಜ.10) ರಂದು ಸಭೆ ನಡೆಯಲಿದೆ. ಯಾರನ್ನು ಕಣಕ್ಕಿಳಿಸಬೇಕು ಎಂದು ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಇಂಡಿಯಾ ಒಕ್ಕೂಟ ಒಟ್ಟಾಗಿ ಹೋಗುವ ನಿರ್ಣಯ ಕೈಗೊಂಡಿದ್ದೇವೆ. ಬುಧವಾರ ದೆಹಲಿಯಲ್ಲಿ ಅನೇಕ ಘಟಕಗಳ ಸಭೆ ಕೂಡ ಕರೆದಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಚುನಾವಣೆ ಗೆಲ್ಲಲು ಜಾತಿಗೊಂದು ಡಿಸಿಎಂ ಗುಂಗಿನಲ್ಲಿದ್ದಾರೆ: ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲವನ್ನೂ ವೈಯಕ್ತಿಕವಾಗಿ ತೆಗೆದುಕೊಳ್ಳುತ್ತಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಮೊದಲು ನಾವು ನಮ್ಮ ಅಕ್ಕ-ಪಕ್ಕ ರಾಷ್ಟ್ರಗಳ ಜೊತೆಗೆ ಚೆನ್ನಾಗಿರಬೇಕು. ಕೆಟ್ಟ ಪರಿಸ್ಥಿತಿ ಬಂದಾಗ ನಾವು ಹೋರಾಟಕ್ಕೂ ಸಿದ್ದರಾಗಬೇಕಾಗುತ್ತದೆ. ಇಂದಿರಾಗಾಂಧಿ ಯಾವ ರೀತಿ ಪಾಕಿಸ್ತಾನವನ್ನು ಬೇರ್ಪಡಿಸಿ ಬಾಂಗ್ಲಾದೇಶ ನಿರ್ಮಾಣ ಮಾಡಿದರೋ ಅಂತಹ ಹೋರಾಟ ಮಾಡಬೇಕಾಗುತ್ತದೆ. ಅಂತರಾಷ್ಟ್ರೀಯ ಪಾಲಿಸಿ ವಿಚಾರದಲ್ಲಿ ಮೋದಿಯವರು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದರು.

ಯಾವಾಗ ಯಾರನ್ನು ಬೇಕಾದರೂ ತಬ್ಬಿಕೊಳ್ಳುತ್ತಾರೆ, ಯಾರನ್ನು ಬೇಕಾದರೂ ತೆಗಳುತ್ತಾರೆ. ನಾವು ನಮ್ಮ ಅಕ್ಕ-ಪಕ್ಕದವರನ್ನು ಬದಲಾಯಿಸಲಾಗುವುದಿಲ್ಲ. ಹಾಗಾಗಿ ಅವರೊಂದಿಗೆ ಚೆನ್ನಾಗಿರಬೇಕು. ನಾವು ಒಂದಾಗಿ ಹೋಗಬೇಕು. ಅವರು ನಮ್ಮ ಮೈಮೇಲೆ ಬಂದಾಗ ದೇಶಕ್ಕಾಗಿ ಹೋರಾಟಕ್ಕೂ ಸಿದ್ದರಾಗಬೇಕಾಗುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ