ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಮೂಡ್​​ನಿಂದ ಇನ್ನೂ ಹೊರ ಬಂದಿಲ್ಲ: ಜೋಶಿ

ರಾಹುಲ್ ಗಾಂಧಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಲ್ಲ. ಕುರ್ಚಿಗೆ ಅಂಟಿಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ಕೊಟ್ಟರು. ರಾಹುಲ್ ಗಾಂಧಿ ಮುಂದೆ ಹೆದರಿ ಬಗ್ಗುವವರು ನನಗೇನು ಹೇಳುತ್ತಾರೆ ಎಂದು ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು.

ಸಿದ್ದರಾಮಯ್ಯ ವಿಧಾನಸಭೆ ಚುನಾವಣೆ ಮೂಡ್​​ನಿಂದ ಇನ್ನೂ ಹೊರ ಬಂದಿಲ್ಲ: ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ
Edited By: ವಿವೇಕ ಬಿರಾದಾರ

Updated on: Apr 09, 2024 | 1:48 PM

ಹುಬ್ಬಳ್ಳಿ, ಏಪ್ರಿಲ್​ 09: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ವಿಧಾನಸಭೆ ಚುನಾವಣೆ (Vidhan Sabha Election) ಮೂಡ್​​ನಿಂದ ಇನ್ನೂ ಹೊರ ಬಂದಿಲ್ಲ. ಮುಖ್ಯಮಂತ್ರಿಗಳು ಇನ್ನೂ ವಿಧಾನಸಭೆ ಚುನಾವಣೆ ಅಂತಾನೆ ತಿಳಿದುಕೊಂಡಿದ್ದಾರೆ. ರಾಷ್ಟ್ರೀಯ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (Pralhad Joshi) ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿಕಸಿತ ಭಾರತದ ಬಗ್ಗೆ ಮಾತನಾಡುತ್ತಾರೆ. ಆದರೆ ಮುಖ್ಯಮಂತ್ರಿಗಳು ಯಾವುದೋ ಒಂದು ರಾಜಕಾರಣದ ಬಗ್ಗೆ ಮಾತಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಚರ್ಚೆಗಳನ್ನು ಮಾಡುವುದಿಲ್ಲ ಎಂದು ವಾಗ್ದಾಳಿ ಮಾಡಿದರು.

ಪ್ರಧಾನಿ ಮೋದಿ ಬಳಿ ರಾಜ್ಯ ಸಂಸದರು ಮಾತಾಡಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಬಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಲ್ಲ. ಕುರ್ಚಿಗೆ ಅಂಟಿಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸಿದ್ದರಾಮಯ್ಯ ಹೇಳಿಕೆ ಕೊಟ್ಟರು. ರಾಹುಲ್ ಗಾಂಧಿ ಮುಂದೆ ಹೆದರಿ ಬಗ್ಗುವವರು ನನಗೇನು ಹೇಳುತ್ತಾರೆ ಎಂದು ಪ್ರಹ್ಲಾದ್ ಜೋಶಿ ತಿರುಗೇಟು ನೀಡಿದರು.

ರಾಜ್ಯಕ್ಕೆ ನಾವೇನು ಮಾಡಿದ್ದೇವೆ ಅಂತ ಪ್ರತ್ಯೇಕವಾಗಿ ಚರ್ಚಿಸುತ್ತೇನೆ. ಹಣಕಾಸು ಆಯೋಗದಲ್ಲಿ ಇಲ್ಲದ ವರದಿಯನ್ನ ಇವರು ಇದೆ ಅಂತಾರೆ. ಆಯೋಗದಲ್ಲಿ ವರದಿ ಇಲ್ಲದಿದ್ದರೂ ಸಿದ್ದರಾಮಯ್ಯ ಸುಳ್ಳು ಹೇಳುತ್ತಾರೆ. 50 ವರ್ಷ ಮಾತ್ರ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರ ನಡೆಸಿದೆ. 8 ವರ್ಷ ಬಹುಮತ ಇಲ್ಲದೆ ಸರ್ಕಾರ ನಡೆಸಿದೆ. ಈ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಅರ್ಧಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಯಾಕೆ ಈ ಸ್ಥಿತಿ ಬಂದಿದೆ ಅಂತ ಕಾಂಗ್ರೆಸ್​ ಅವಲೋಕಿಸಿಕೊಳ್ಳಬೇಕು ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿಗೆ ಎರಡು ನಾಲಿಗೆ ಇದೆ ಅಂತ ಪ್ರಕಾಶ್ ರಾಜ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಪ್ರಕಾಶ್ ರಾಜ್​ ಅವರಂಥವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಅವರೊಬ್ಬ ಅಸಂತುಷ್ಟ ಜೀವಿ, ಹೀಗಾಗಿ ಉತ್ತರಿಸುವ ಅಗತ್ಯವಿಲ್ಲ. ಆದರ್ಶ ಗ್ರಾಮದ ಬಗ್ಗೆ ಅರ್ಥ ಮಾಡಿಕೊಳ್ಳದೆ ಮಾತಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಲೋಕಸಭೆ ಚುನಾವಣೆ ಸೋಲಿ‌ನ‌ ಕನಸು ಬೀಳುತ್ತಿದೆ: ಪ್ರಹ್ಲಾದ್​ ಜೋಶಿ

ತಮ್ಮ ಬೆಂಬಲಿಗರಿಂದ ದಿಂಗಾಲೇಶ್ವರ ಶ್ರೀಗಳ ತೇಜೋವಧೆ ವಿಚಾರವಾಗಿ ಮಾತನಾಡಿದ ಅವರು, ನನ್ನ ಅಭಿಮಾನಿಗಳು ಏನು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಗೊತ್ತಿಲ್ಲ. ಸಾಮಾಜಿಕ ಜಾಲತಾಣ ಮುಕ್ತವಾಗಿದೆ. ನಾನು ಯಾವತ್ತೂ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಟೀಕೆ ಮಾಡಿಲ್ಲ. ಸಾಮಾಜಿಕ ಜಾಲತಾಣ ಮೂಲಕ ಯಾವುದೇ ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.

ಇನ್ನು ಬರ ಪರಿಹಾರ ವಿಚಾರವಾಗಿ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೀಡಿರುವ ಸೂಚನೆ ವಿಚಾರವಾಗಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಕೇಂದ್ರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿಲ್ಲ. ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು ಎಂದಿದೆ. ನಾವು ಸೌಹಾರ್ದಯುತವಾಗಿಯೇ ಇದ್ದೇವೆ. ಗಮನ ಬೇರೆಡೆ ಸೆಳೆಯಲು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ​ಹೋಗಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us