ಬಿಜೆಪಿ ಸಂಕಲ್ಪ ಯಾತ್ರೆ ಮೊಟಕುಗೊಳಿಸಿ ದಿಢೀರ್ ದಿಲ್ಲಿಗೆ ಹೋಗಿದ್ಯಾಕೆ? ಸ್ಪಷ್ಟನೆ ಕೊಟ್ಟ ಬಿಎಸ್​ವೈ

ಬಿಜೆಪಿ ಸಂಕಲ್ಪ ಯಾತ್ರೆ ಮೊಟಕುಗೊಳಿಸಿ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ದಿಢೀರ್ ದಿಲ್ಲಿಗೆ ಹೋಗಿದ್ಯಾಕೆ? ಈ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ಕೊಟ್ಟಿದ್ದಾರೆ.

ಬಿಜೆಪಿ ಸಂಕಲ್ಪ ಯಾತ್ರೆ ಮೊಟಕುಗೊಳಿಸಿ ದಿಢೀರ್ ದಿಲ್ಲಿಗೆ ಹೋಗಿದ್ಯಾಕೆ? ಸ್ಪಷ್ಟನೆ ಕೊಟ್ಟ ಬಿಎಸ್​ವೈ
ಬಿಎಸ್ ಯಡಿಯೂರಪ್ಪ
Updated By: ರಮೇಶ್ ಬಿ. ಜವಳಗೇರಾ

Updated on: Oct 18, 2022 | 4:53 PM

ನವದೆಹಲಿ: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜೋಡೋ ಯಾತ್ರೆಗೆ ಟಕ್ಕರ್ ಕೊಡಲು ಬಿಜೆಪಿ ಜನಸಂಕಲ್ಪ ಯಾತ್ರೆ ಶುರುಮಾಡಿದೆ. ಬಿಎಸ್ ಯಡಿಯೂರಪ್ಪ (BS Yediyurappa) ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಜನಸಂಕಲ್ಪ ಯಾತ್ರೆ ಮಾಡುತ್ತಿದ್ದಾರೆ. ಆದ್ರೆ, ಬಿಎಸ್​ವೈ ಬೀದರ್ ಜನಸಂಕಲ್ಪ ಯಾತ್ರೆಯನ್ನು ಮೊಟಕುಗೊಳಿಸಿ ದಿಢೀರ್ ಮಾಡಿ ನವದೆಹಲಿಗೆ ಹಾರಿದ್ದಾರೆ.

ಇಂದು(ಅಕ್ಟೋಬರ್ 18) ಬೀದರ್​ನಲ್ಲಿ ನಡೆಯುತ್ತಿರುವ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ(BJP Jan Sankalp Yatra) ಯಡಿಯೂರಪ್ಪ ಪಾಲ್ಗೊಳ್ಳಬೇಕಿತ್ತು. ಆದ್ರೆ, ಬಿಎಸ್​ವೈ ದಿಢೀರ್ ಯಾತ್ರೆಯನ್ನು ಮೊಟಕುಗೊಳಿಸಿ ದೆಹಲಿಗೆ ತೆರಳಿದ್ದು, ತೀವ್ರ ಕುತೂಹಲ ಕಾರಣವಾಗಿದೆ. ಇನ್ನು ಈ ಬಗ್ಗೆ ಅವರು ಸ್ಪಷ್ಟನೆ ಸಹ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಕಾರ್ಯವೈಖರಿಗೆ ವರಿಷ್ಠರ ಮೆಚ್ಚುಗೆ, ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ: ಅರುಣ್ ಸಿಂಗ್

ನವದೆಹಲಿಯಲ್ಲಿ ಮಾತನಾಡಿದ ಯಡಿಯೂರಪ್ಪ, ಕೇಂದ್ರ ಚುನಾವಣಾ ಸಮಿತಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಬಂದಿದ್ದೇನೆ. ಇಂದು ಮೊದಲ ಸಭೆಯಲ್ಲಿ ಭಾಗಿಯಾಗಲಿದ್ದೇನೆ. ಪ್ರಮುಖ ಸಭೆಯಾಗಿರುವ ಹಿನ್ನಲೆ ಸಂಕಲ್ಪ ಯಾತ್ರೆ ಮೊಟಕುಗೊಳಿಸಿ ಬಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿ ಸದಸ್ಯರಾಗಿ ನೇಮಕ ಮಾಡಿದೆ. ಈ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪ ಅವರು ಇದೇ ಮೊದಲ ಸಲ ಬಿಜೆಪಿ ಕೇಂದ್ರ ಚುನಾವಣೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದರಿಂದ ಬೀದರ್​ ಬಿಜೆಪಿ ಜನಸಂಕಲ್ಪ ಯಾತ್ರೆಗೆ ಗೈರಾಗಿದ್ದಾರೆ.

ಅಲ್ಲದೇ ಮೊನ್ನೇ ಅಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. ಇದರ ಮಧ್ಯೆ ಯಡಿಯೂರಪ್ಪ ದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಮೂಡಿಸಿತ್ತು. ಅಲ್ಲದೇ ನಾನಾ ಚರ್ಚೆಗಳಿಗೆ ಗ್ರಾಸವಾಗಿತ್ತು. ಇದೀಗ ಸ್ವತಃ ಯಡಿಯೂರಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:47 pm, Tue, 18 October 22