
ನೀಟ್ (NEET protest) ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಶಿಕ್ಷಣ ಸಚಿವರ ರಾಜೀನಾಮೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಆಯೋಜಿಸಿದ್ದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರದ ರೂಪ ಪಡೆದುಕೊಂಡಿದೆ. ಸಂಸತ್ತಿನ ಕಡೆಗೆ ಮೆರವಣಿಗೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸುವುದರ ಜೊತೆಗೆ ಲಾಠಿ ಪ್ರಹಾರ ನಡೆಸಿದ್ದರು. ಈ ಘಟನೆ ದೇಶಾದ್ಯಂತ ಕೋಲಾಹಲಕ್ಕೆ ಕಾರಣವಾಗಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಸಕ್ರಿಯ ಕ್ರಿಕೆಟಿಗರು ನೇರವಾಗಿ ಪ್ರತಿಕ್ರಿಯಿಸದಿದ್ದರೂ, ಅವರ ಪತ್ನಿಯರು ಮಾತ್ರ ಪ್ರತಿಭಟನಾಕಾರರ ವಿರುದ್ಧದ ಹಿಂಸಾಚಾರವನ್ನು ತೀವ್ರವಾಗಿ ಖಂಡಿಸಿದ್ದಾರೆ.
ರಿತಿಕಾ ಸಜ್ದೆ (ರೋಹಿತ್ ಶರ್ಮಾ ಅವರ ಪತ್ನಿ): ಭಾರತದ ಮಾಜಿ ನಾಯಕ ರೋಹಿತ್ ಶರ್ಮಾ ಅವರ ಪತ್ನಿ ರಿತಿಕಾ ಸಜ್ದೆ ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ 9 ವರ್ಷದ ಮಗುವಿನ ಪ್ರತಿಭಟನೆಯ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪೊಲೀಸ್ ಲಾಠಿಚಾರ್ಜ್ಗೆ ತಾನು ಹೆದರುವುದಿಲ್ಲ ಮತ್ತು ಭಗತ್ ಸಿಂಗ್ನಿಂದ ಪ್ರೇರಿತಳಾಗಿ ತಾನು ಇಲ್ಲಿಗೆ ಬಂದಿದ್ದೇನೆ ಎಂದು ಮಗು ನೀಡಿದ ಹೇಳಿಕೆಯನ್ನು ಅದರಲ್ಲಿ ಉಲ್ಲೇಖಿಸಿದ್ದಾರೆ.
ದೇವೀಶಾ ಶೆಟ್ಟಿ (ಸೂರ್ಯಕುಮಾರ್ ಯಾದವ್ ಅವರ ಪತ್ನಿ): ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್ಮನ್ ಸೂರ್ಯಕುಮಾರ್ ಯಾದವ್ ಅವರ ಪತ್ನಿ ದೇವೀಶಾ ಶೆಟ್ಟಿ ಅವರು ಸರಣಿ ಇನ್ಸ್ಟಾಗ್ರಾಮ್ ಪೋಸ್ಟ್ಗಳನ್ನು ಹಂಚಿಕೊಂಡದ್ದು, ‘ಸರ್ಕಾರವನ್ನು ಟೀಕಿಸುವುದು, ಪ್ರಧಾನಿಯನ್ನು ಪ್ರಶ್ನಿಸುವುದು ಮತ್ತು ನೀತಿಗಳ ವಿರುದ್ಧ ಪ್ರತಿಭಟಿಸುವುದು ಪ್ರಜಾಪ್ರಭುತ್ವ. ಆದರೆ ಪ್ರತಿಭಟನೆಯ ಹೆಸರಿನಲ್ಲಿ ಹಿಂಸಾಚಾರವನ್ನು ಆಶ್ರಯಿಸುವುದು ಮತ್ತು ಸರ್ಕಾರಿ ಆಸ್ತಿಗಳನ್ನು ನಾಶಪಡಿಸುವುದು ಸಹ ತಪ್ಪು’ ಎಂದು ಬರೆದುಕೊಂಡಿದ್ದಾರೆ.

ಸಂಜನಾ ಗಣೇಶನ್ (ಜಸ್ಪ್ರೀತ್ ಬುಮ್ರಾ ಅವರ ಪತ್ನಿ): ಕ್ರೀಡಾ ನಿರೂಪಕಿ ಮತ್ತು ಜಸ್ಪ್ರೀತ್ ಬುಮ್ರಾ ಅವರ ಪತ್ನಿ ಸಂಜನಾ ಗಣೇಶನ್ ಅವರು ಶಾಂತಿಯುತವಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳ ಮೇಲೆ ಅಶ್ರುವಾಯು ಪ್ರಯೋಗವನ್ನು ಖಂಡಿಸಿದ್ದಾರೆ. ‘ಯಾವುದೇ ಪ್ರಜಾಪ್ರಭುತ್ವದಲ್ಲಿ, ಅಶ್ರುವಾಯುದಿಂದಾಗಿ ಮಕ್ಕಳು ಉಸಿರುಗಟ್ಟಿಸುವುದನ್ನು ಸಾಮಾನ್ಯ ವಿಷಯವೆಂದು ಪರಿಗಣಿಸಬಾರದು’ ಎಂದು ಬರೆದುಕೊಂಡಿದ್ದಾರೆ.
ಪ್ರಿಯಾ ಸರೋಜ್ (ರಿಂಕು ಸಿಂಗ್ ಅವರ ಭಾವಿ ಮಡದಿ): ಕ್ರಿಕೆಟಿಗ ರಿಂಕು ಸಿಂಗ್ ಅವರ ಭಾವಿ ಪತ್ನಿ ಮತ್ತು ಮಚ್ಚಲಿಶಹರ್ (ಯುಪಿ) ನ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರು ವಿದ್ಯಾರ್ಥಿಗಳಿಗೆ ಬೆಂಬಲ ವ್ಯಕ್ತಪಡಿಸಲು ನೇರವಾಗಿ ಜಂತರ್ ಮಂತರ್ಗೆ ಆಗಮಿಸಿದ್ದರು. ಹಿರಿಯ ನಾಯಕಿ ಡಿಂಪಲ್ ಯಾದವ್ ಅವರೊಂದಿಗೆ ಅವರು ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಅನ್ನು ತೀವ್ರವಾಗಿ ಪ್ರತಿಭಟಿಸಿದರು.
ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಕೂಡ ಪ್ರತಿಕ್ರಿಯಿದ್ದು, ‘ಪ್ರತಿಯೊಬ್ಬ ವಿದ್ಯಾರ್ಥಿಗೂ ಶಾಂತಿಯುತ ವಾತಾವರಣದಲ್ಲಿ ಅಧ್ಯಯನ ಮಾಡುವ ಮತ್ತು ಅವರ ಕನಸುಗಳನ್ನು ನನಸಾಗಿಸುವ ಹಕ್ಕಿದೆ. ಹಿಂಸೆಯಲ್ಲ, ಶಾಂತಿಯುತ ಚರ್ಚೆಗಳ ಮೂಲಕ ಮಾತ್ರ ಭಾರತದ ಭವಿಷ್ಯಕ್ಕೆ ಸ್ವೀಕಾರಾರ್ಹ ಪರಿಹಾರವನ್ನು ಕಂಡುಕೊಳ್ಳಬಹುದು’ ಎಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:55 pm, Fri, 24 July 26