
T20 World Cup 2026: ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಈ ಬಾರಿಯ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿತ್ತು. ಆದರೆ ವಿಶ್ವಕಪ್ ಆರಂಭವಾದ ಬಳಿಕ ಸ್ಯಾಮ್ಸನ್ ಬೆಂಚ್ನಲ್ಲಿದ್ದರು. ಆರಂಭಿಕನಾಗಿ ಇಶಾನ್ ಕಿಶನ್ ಹಾಗೂ ಅಭಿಷೇಕ್ ಶರ್ಮಾ ಕಾಣಿಸಿಕೊಂಡಿದ್ದರು.
ಅತ್ತ ಅಭಿಷೇಕ್ ಶರ್ಮಾ ಸತತವಾಗಿ ವಿಫಲರಾದರೂ ಸಂಜು ಸ್ಯಾಮ್ಸನ್ಗೆ ಚಾನ್ಸ್ ನೀಡಿರಲಿಲ್ಲ. ಇದೀಗ ಸಿಕ್ಕ ಅವಕಾಶವನ್ನು ಬಳಸಿಕೊಂಡಿರುವ ಸ್ಯಾಮ್ಸನ್ ಭಾರತ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟಿದ್ದಾರೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ವಿಶ್ವಕಪ್ನ ಸೆಮಿಫೈನಲ್ಗೇರಿದೆ.
ಭಾರತ ತಂಡ ವಿಶ್ವಕಪ್ನ ಸೆಮಿಫೈನಲ್ಗೇರಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ಗೆ ಇಷ್ಟು ದಿನ ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಹೊರಗಿಟ್ಟಿರುವುದೇಕೆ? ಎಂಬ ಪ್ರಶ್ನೆಯೊಂದು ಎದುರಾಗಿದೆ. ಈ ಪ್ರಶ್ನೆಗೆ ನಿರ್ದಿಷ್ಟ ಕಾರಣಗಳನ್ನು ಮುಂದಿಡುವ ಮೂಲಕ ಗಂಭೀರ್ ಉತ್ತರಿಸಿದ್ದಾರೆ.
ನ್ಯೂಝಿಲೆಂಡ್ ವಿರುದ್ಧದ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಬೇಗನೆ ವಿಕೆಟ್ ಒಪ್ಪಿಸುತ್ತಿದ್ದರು. ಅವರು ಕಣಕ್ಕಿಳಿದ ಐದು ಇನಿಂಗ್ಸ್ಗಳಲ್ಲಿ ಕಲೆಹಾಕಿದ್ದು 10, 6, 0, 24, 6 ರನ್ ಮಾತ್ರ. ಅಂದರೆ ಅವರು ಫಾರ್ಮ್ ಸಮಸ್ಯೆಯಿಂದ ಬಳಲುತ್ತಿದ್ದರು.
ಈ ಒತ್ತಡದ ಪರಿಸ್ಥಿತಿಯಿಂದ ಅವರನ್ನು ಹೊರತರಲು ಮತ್ತು ಮಾನಸಿಕವಾಗಿ ರಿಫ್ರೆಶ್ ಆಗಲು ವಿರಾಮ ನೀಡಬೇಕಿತ್ತು. ಹೀಗಾಗಿ ಟಿ20 ವಿಶ್ವಕಪ್ನ ಆರಂಭಿಕ ಪಂದ್ಯಗಳಿಗೆ ಸಂಜು ಸ್ಯಾಮ್ಸನ್ರನ್ನು ಪ್ಲೇಯಿಂಗ್ ಇಲೆವೆನ್ಗೆ ಆಯ್ಕೆ ಮಾಡಿರಲಿಲ್ಲ ಎಂದು ಗೌತಮ್ ಗಂಭೀರ್ ತಿಳಿಸಿದ್ದಾರೆ.
ಇದಲ್ಲದೆ ಆರಂಭದಲ್ಲಿ ತಂಡದ ಕಾಂಬಿನೇಷನ್ ಮತ್ತು ಬ್ಯಾಟಿಂಗ್ ಆಳವನ್ನು ಹೆಚ್ಚಿಸಲು ಶಿವಂ ದುಬೆ ಹಾಗೂ ರಿಂಕು ಸಿಂಗ್ ಅವರಂತಹ ಆಟಗಾರರಿಗೆ ಆದ್ಯತೆ ನೀಡಲಾಗಿತ್ತು. ಇದಾಗ್ಯೂ ಸ್ಯಾಮ್ಸನ್ ನೆಟ್ಸ್ನಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸುತ್ತಿದ್ದರು. ಹೀಗಾಗಿ ಬ್ಯಾಟಿಂಗ್ ಲೈನಪ್ನಲ್ಲಿ ಬದಲಾವಣೆ ಮಾಡಿ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲಾಗಿದೆ ಎಂದು ಗಂಭೀರ್ ತಿಳಿಸಿದ್ದಾರೆ.
ಸಂಜು ಸ್ಯಾಮ್ಸನ್ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲು ಟೀಮ್ ಇಂಡಿಯಾ ತನ್ನ ಬ್ಯಾಟಿಂಗ್ ಲೈನಪ್ನಲ್ಲಿ ಎರಡು ಬದಲಾವಣೆ ಮಾಡಿದೆ. ಆರಂಭದ ಪಂದ್ಯಗಳಲ್ಲಿ ಓಪನರ್ ಆಗಿ ಕಣಕ್ಕಿಳಿದಿದ್ದ ಇಶಾನ್ ಕಿಶನ್ ಅವರನ್ನು ಮೂರನೇ ಕ್ರಮಾಂಕಕ್ಕೆ ಹಿಂಬಡ್ತಿ ನೀಡಲಾಗಿದೆ.
ಹಾಗೆಯೇ ಮೂರನೇ ಕ್ರಮಾಂಕದಲ್ಲಿದ್ದ ತಿಲಕ್ ವರ್ಮಾ ಅವರನ್ನು ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಸಲಾಗಿದೆ. ತಿಲಕ್ ವರ್ಮಾ ಅವರನ್ನು ಮಿಡಲ್ ಆರ್ಡರ್ನಲ್ಲಿ ಆಡಿಸಲು ಇಲ್ಲಿ ಟೀಮ್ ಮ್ಯಾನೇಜ್ಮೆಂಟ್ ರಿಂಕು ಸಿಂಗ್ ಅವರನ್ನು ಕೈ ಬಿಟ್ಟಿದ್ದಾರೆ.
ಈ ಮೂಲಕ ಸಂಜು ಸ್ಯಾಮ್ಸನ್ ಅವರಿಗೆ ಆರಂಭಿಕನಾಗಿ ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಬಳಸಿಕೊಂಡಿರುವ ಸಂಜು ಸ್ಯಾಮ್ಸನ್ ವೆಸ್ಟ್ ಇಂಡೀಸ್ ವಿರುದ್ಧ 50 ಎಸೆತಗಳಲ್ಲಿ ಅಜೇಯ 97 ರನ್ ಸಿಡಿಸಿದ್ದಾರೆ. ಈ ಮೂಲಕ ಭಾರತ ತಂಡಕ್ಕೆ 5 ವಿಕೆಟ್ಗಳ ಗೆಲುವು ತಂದುಕೊಟ್ಟಿದ್ದಾರೆ.
ಈ ಗೆಲುವಿನ ಬೆನ್ನಲ್ಲೇ ಅವರನ್ನು ಹಾಡಿಹೊಗಳಿರುವ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್, ಅವರು ಒಬ್ಬ “ವಿಶ್ವದರ್ಜೆಯ ಆಟಗಾರ” ಎಂದು ಬಣ್ಣಿಸಿದ್ದಾರೆ. ವಿಂಡೀಸ್ ವಿರುದ್ಧದ 97 ರನ್ಗಳ ಅದ್ಭುತ ಇನ್ನಿಂಗ್ಸ್ ಅವರ ಸಾಮರ್ಥ್ಯಕ್ಕೆ ಸಾಕ್ಷಿ ಎಂದು ಗಂಭೀರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಟೀಮ್ ಇಂಡಿಯಾದ ಮುಂದಿನ ಸರಣಿ ವೇಳಾಪಟ್ಟಿ ಪ್ರಕಟ
ಒಟ್ಟಾರೆಯಾಗಿ, ಸಂಜು ಸ್ಯಾಮ್ಸನ್ ಅವರನ್ನು ಕೇವಲ ವಿಶ್ರಾಂತಿಯ ಉದ್ದೇಶದಿಂದ ಮತ್ತು ಫಾರ್ಮ್ ಮರಳಿ ಪಡೆಯುವ ದೃಷ್ಟಿಯಿಂದ ಪ್ಲೇಯಿಂಗ್ ಇಲೆವೆನ್ನಿಂದ ದೂರ ಇಡಲಾಗಿತ್ತು ಎಂದು ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಸ್ಪಷ್ಟಪಡಿಸಿದ್ದಾರೆ.