AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಖಚಿತ

Gautam Gambhir: ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಮೆಂಟರ್ ಆಗಿ ಕಾಣಿಸಿಕೊಂಡಿದ್ದ ಗೌತಮ್ ಗಂಭೀರ್ ಇದೀಗ ಕೆಕೆಆರ್ ತಂಡಕ್ಕೆ ವಿದಾಯ ಹೇಳಲು ಮುಂದಾಗಿದ್ದಾರೆ. ಇದಕ್ಕೆ ಕಾರಣ ಅವರು ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರುವುದು. ಅಲ್ಲದೆ ಕೆಕೆಆರ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಲು ವಿಶೇಷ ವಿಡಿಯೋ ಚಿತ್ರೀಕರಣದಲ್ಲೂ ಪಾಲ್ಗೊಂಡಿದ್ದಾರೆ. ಇದರೊಂದಿಗೆ ಗಂಭೀರ್ ಭಾರತ ತಂಡದ ಕೋಚ್ ಆಗಿ ಆಯ್ಕೆಯಾಗಿರುವುದು ಖಚಿತವಾಗಿದೆ.

ಟೀಮ್ ಇಂಡಿಯಾ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ಆಯ್ಕೆ ಖಚಿತ
Gautam Gambhir - Rahul Dravid
ಝಾಹಿರ್ ಯೂಸುಫ್
|

Updated on: Jul 09, 2024 | 8:43 AM

Share

ಭಾರತ ತಂಡದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ (Gautam Gambhir) ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಟಿ20 ವಿಶ್ವಕಪ್​ ಮುಕ್ತಾಯದ ಬೆನ್ನಲ್ಲೇ ರಾಹುಲ್ ದ್ರಾವಿಡ್ ಅವರ ಕಾರ್ಯಾವಧಿ ಮುಗಿದಿದ್ದು, ಇದೀಗ ನೂತನ ಕೋಚ್ ಆಗಿ ಟೀಮ್ ಇಂಡಿಯಾದ ಮಾಜಿ ಎಡಗೈ ದಾಂಡಿಗ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ.

ಇದರ ಬೆನ್ನಲ್ಲೇ ಗೌತಮ್ ಗಂಭೀರ್ ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲೂ ಕಾಣಿಸಿಕೊಂಡಿದ್ದಾರೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ಅಭಿಮಾನಿಗಳಿಗೆ ಧನ್ಯವಾದ ಹೇಳಲು ಎಂಬುದು ವಿಶೇಷ. ಅಂದರೆ ಭಾರತ ತಂಡಕ್ಕೆ ಮುಖ್ಯ ಕೋಚ್ ಆಗಿ ಆಯ್ಕೆಯಾದ ಬೆನ್ನಲ್ಲೇ ಗಂಭೀರ್ ಕೆಕೆಆರ್ ತಂಡಕ್ಕೆ ವಿದಾಯ ಹೇಳಲಿರುವ ವಿಡಿಯೋ ಶೂಟಿಂಗ್​ನಲ್ಲಿ ಪಾಲ್ಗೊಂಡಿದ್ದಾರೆ ತಿಳಿದು ಬಂದಿದೆ.

ಬಿಸಿಸಿಐ ಗೌತಮ್ ಗಂಭೀರ್ ಅವರನ್ನು ಭಾರತ ತಂಡದ ಮುಖ್ಯ ಕೋಚ್ ಎಂದು ಘೋಷಿಸಿದ ಬಳಿಕ ಕೆಕೆಆರ್ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಈ ವಿಡಿಯೋ ಬಿಡುಗಡೆಯಾಗಲಿದೆ. ಈ ವಿಡಿಯೋ ಚಿತ್ರೀಕರಣದೊಂದಿಗೆ ಗಂಭೀರ್ ಟೀಮ್ ಇಂಡಿಯಾದ ನೂತನ ಕೋಚ್ ಆಗಿ ಆಯ್ಕೆಯಾಗಿರುವುದು ಖಚಿತವಾಗಿದೆ.

ಇದಕ್ಕೂ ಮುನ್ನ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಭಾರತ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ನೇರವಾಗಿ ಆಯ್ಕೆಯಾಗಲಿದ್ದಾರೆ ಎನ್ನಲಾಗಿತ್ತು. ಆದರೆ ಬಿಸಿಸಿಐ ಸಂದರ್ಶನದಲ್ಲಿ ಗಂಭೀರ್​ಗೆ ಪ್ರತಿಸ್ಪರ್ಧಿಯಾಗಿ ಡಬ್ಲ್ಯು.ವಿ ರಾಮನ್ ಕಾಣಿಸಿಕೊಂಡಿದ್ದರು.

2021 ರಲ್ಲಿ ಭಾರತ ಮಹಿಳಾ ತಂಡದ ತರಬೇತುದಾರರಾಗಿ ಕಾರ್ಯ ನಿರ್ವಹಿಸಿದ್ದ ರಾಮನ್ ಅವರ ಎಂಟ್ರಿಯೊಂದಿಗೆ ಭಾರತ ತಂಡದ ಮುಂದಿನ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಏರ್ಪಟ್ಟಿತ್ತು. ಇದೀಗ ಟೀಮ್ ಇಂಡಿಯಾದ ಕೋಚ್ ಹುದ್ದೆಯನ್ನು ಗೌತಮ್ ಗಂಭೀರ್ ಅಲಂಕರಿಸಲಿರುವುದು ಬಹುತೇಕ ಖಚಿತವಾಗಿದೆ.

ಇನ್ನು ಡಬ್ಲ್ಯು.ವಿ ರಾಮನ್ ಅವರನ್ನು ಬ್ಯಾಟಿಂಗ್ ಕೋಚ್ ಹುದ್ದೆಗೆ ಪರಿಗಣಿಸುವ ಸಾಧ್ಯತೆಯಿದೆ. ಅದರಂತೆ ಗಂಭೀರ್ ಹಾಗೂ ರಾಮನ್ ಟೀಮ್ ಇಂಡಿಯಾ ಪರ ಜೊತೆಯಾಗಿ ಕಾರ್ಯ ನಿರ್ವಹಿಸಲಿದ್ದಾರಾ ಕಾದು ನೋಡಬೇಕಿದೆ.

ಶೀಘ್ರದಲ್ಲೇ ಘೋಷಣೆ:

ಭಾರತ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರ ಹೆಸರನ್ನು ಶೀಘ್ರದಲ್ಲೇ ಘೋಷಿಸಲಿದ್ದಾರೆ. ಏಕೆಂದರೆ ಜುಲೈ ತಿಂಗಳಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕೂ ಮುನ್ನ ಭಾರತ ತಂಡದ ಕೋಚ್ ಯಾರೆಂಬುದನ್ನು ಬಿಸಿಸಿಐ ಬಹಿರಂಗಪಡಿಸಲಿದೆ.

ಇದನ್ನೂ ಓದಿ: Team India: ಕೊನೆಯ 10 ಓವರ್​ಗಳಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ

ವಿವಿಎಸ್​ ಲಕ್ಷಣ್ ಕೋಚ್:

ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಹಂಗಾಮಿ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಂಡಿದ್ದಾರೆ. ಈ ಸರಣಿ ಮುಕ್ತಾಯದ ಬಳಿಕ ಲಕ್ಷ್ಮಣ್ ಅವರು ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಹೊಸ ಕೋಚ್ ಆಗಿ ಗೌತಮ್ ಗಂಭೀರ್ ಕಾಣಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.