ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಫೀಲ್ಡಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ಸಂಜು ಸ್ಯಾಮ್ಸನ್ (10) ಹಾಗೂ ಅಭಿಷೇಕ್ ಶರ್ಮಾ (15) ಬೇಗನೆ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ನಾಯಕ ಸೂರ್ಯಕುಮಾರ್ ಯಾದವ್ (8) ಸಹ ವಿಕೆಟ್ ಕೈಚೆಲ್ಲಿದರು. ಈ ಹಂತದಲ್ಲಿ ಜೊತೆಗೂಡಿದ ಯುವ ದಾಂಡಿಗರಾದ ನಿತೀಶ್ ರೆಡ್ಡಿ ಹಾಗೂ ರಿಂಕು ಸಿಂಗ್ ಬಾಂಗ್ಲಾ ಬೌಲರ್ಗಳನ್ನು ಚೆಂಡಾಡಿದರು.
ಅದರಲ್ಲೂ ಸ್ಪೋಟಕ ಇನಿಂಗ್ಸ್ ಆಡಿದ ನಿತೀಶ್ ರೆಡ್ಡಿ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್ಗಳನ್ನು ಸಿಡಿಸುವ ಮೂಲಕ ಬಾಂಗ್ಲಾ ಬೌಲರ್ಗಳ ಬೆಂಡೆತ್ತಿದರು. ಪರಿಣಾಮ ನಿತೀಶ್ ಬ್ಯಾಟ್ನಿಂದ 34 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ 74 ರನ್ ಮೂಡಿ ಬಂತು. ಅತ್ತ ಉತ್ತಮ ಸಾಥ್ ನೀಡಿದ ರಿಂಕು ಸಿಂಗ್ 29 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 53 ರನ್ ಬಾರಿಸಿದರು. ಇನ್ನು ಹಾರ್ದಿಕ್ ಪಾಂಡ್ಯ 19 ಎಸೆತಗಳಲ್ಲಿ 32 ರನ್ ಚಚ್ಚಿದರು. ಈ ಮೂಲಕ ಟೀಮ್ ಇಂಡಿಯಾ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 221 ರನ್ ಕಲೆಹಾಕಿತು. 222 ರನ್ಗಳ ಕಠಿಣ ಗುರಿ ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 20 ಓವರ್ಗಳಲ್ಲಿ 135 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟೀಮ್ ಇಂಡಿಯಾ 2ನೇ ಟಿ20 ಪಂದ್ಯವನ್ನು 86 ರನ್ಗಳ ಅಂತರದಿಂದ ಗೆದ್ದುಕೊಂಡಿದೆ.